ಧಾರವಾಡ: ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ‘2ಎ’ ಮೀಸಲಾತಿಗಾಗಿ ನಡೆದ ಹೋರಾಟದಲ್ಲಿ ಪೊಲೀಸರ ಲಾಠಿ ಪ್ರಹಾರದಿಂದ ಗಾಯಗೊಂಡವರ ಮನೆಗೆ ತೆರಳಿ ಆತ್ಮಸ್ಥೈರ್ಯ ತುಂಬುವ ಅಭಿಯಾನವನ್ನು ಡಿ.23ರಂದು ಬೆಳಗಾವಿಯಲ್ಲಿ ಆರಂಭಿಸಲು ನಿರ್ಧರಿಸಲಾಗಿದೆ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬೆಳಗಾವಿಯಿಂದ ಅಭಿಯಾನ ಆರಂಭಿಸಿ ವಿವಿಧ ಜಿಲ್ಲೆ, ತಾಲ್ಲೂಕುಗಳಲ್ಲಿ ಗಾಯಾಳುಗಳ ಮನೆಗೆ ಭೇಟಿ ನೀಡಿ ಆತ್ಮಸ್ಥೈರ್ಯ ತುಂಬಲಾಗುವುದು. ಸಮುದಾಯದವರಿಂದ ಧನ ಸಂಗ್ರಹಿಸಿ ಗಾಯಾಳುಗಳಿಗೆ ಆರ್ಥಿಕ ಸಹಾಯ ನೀಡಲಾಗುವುದು ಎಂದು ತಿಳಿಸಿದರು.
‘ಬೆಳಗಾವಿಯಲ್ಲಿ ವಿಕಾಸಸೌಧಕ್ಕೆ ಮುಂದಾದ ಹೋರಾಟಗಾರರಿಗೆ ಪೊಲೀಸರು ಮಾರಣಾಂತಿಕವಾಗಿ ಹೊಡೆದಿದ್ಧಾರೆ. ಕೆಲವರಿಗೆ ತಲೆಗೆ ಪೆಟ್ಟಾಗಿದೆ, ಕೈ ಮುರಿದಿದೆ. ಸಂಕ್ರಾಂತಿ ನಂತರ ಪ್ರತಿ ಹಳ್ಳಿಗೆ ಹೋಗಿ ಸಮುದಾಯದವರೊಂದಿಗೆ ಸಂವಾದ ನಡೆಸುತ್ತೇನೆ. ಪಂಚಮಸಾಲಿ ಸಮುದಾಯಕ್ಕೆ ‘2ಎ’ ಮೀಸಲಾತಿ ನೀಡಲು ಸರ್ಕಾರ ತೋರಿದ ಅಲಕ್ಷ್ಯವನ್ನು ತಿಳಿಸುತ್ತೇನೆ’ ಎಂದರು.
‘ಲಾಠಿ ಚಾರ್ಜ್ ಘಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಕ್ಷಮೆಯಾಚಿಸಬೇಕು, 12 ಮಂದಿದ ವಿರುದ್ಧ ದಾಖಲಿಸಿರುವ ಎಫ್ಐಆರ್ ಹಿಂಪಡೆಯಬೇಕು, ಲಾಠಿ ಚಾರ್ಜ್ ಮಾಡಿದ ಪೊಲೀಸ್ ಅಧಿಕಾರಿ ಅಮಾನತುಗೊಳಿಸಬೇಕು ಎಂಬ ಆಗ್ರಹಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಣಿದಿಲ್ಲ’ ಎಂದು ದೂರಿದರು.
‘ಸರ್ಕಾರಕ್ಕೆ ನೋಟಿಸ್’
ವಕೀಲೆ ಪೂಜಾ ಸವದತ್ತಿ ಮಾತನಾಡಿ, ‘ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ‘2ಎ’ ಮೀಸಲಾತಿಗಾಗಿ ಬೆಳಗಾವಿಯಲ್ಲಿ ನಡೆದ ಹೋರಾಟ ಮಾಡುವಾಗ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದನ್ನು ಪ್ರಶ್ನಿಸಿ ಹೈಕೋರ್ಟ್ ಧಾರವಾಡ ಪೀಠದಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಹೈಕೋರ್ಟ್ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ’ ಎಂದು
‘ನ್ಯಾಯಮೂರ್ತಿ ಪ್ರದೀಪ್ ಆದೇಶ ನೀಡಿದ್ದಾರೆ. ಸರ್ಕಾರ, ಪೊಲೀಸರ ಕ್ರಮದ ವಿರುದ್ಧ ಕಾನೂನು ಹೋರಾಟ ಮಾಡುತ್ತೇವೆ’ ಎಂದರು.
ನ್ಯಾಯಾಂಗ ತನಿಖೆಗೆ ಒತ್ತಾಯ
ಲಿಂಗಾಯತ ಪಂಚಮಸಾಲಿ ವಕೀಲರ ಪರಿಷತ್ನ ಕಾರ್ಯಾಧ್ಯಕ್ಷ ಸಿ.ಎಸ್.ನೇಗಿನಾಳ್ ಮಾತನಾಡಿ, ‘ಬೆಳಗಾವಿಯಲ್ಲಿ ಹೋರಾಟಗಾರರ ಮೇಲೆ ಪೊಲೀಸರ ಲಾರಿ ಪ್ರಹಾರ ಮಾಡಿದ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಬೇಕು‘ ಎಂದು ಒತ್ತಾಯಿಸಿದರು.
ವಕೀಲ ಸಿದ್ದು ಹೆಬ್ಬಳ್ಳಿ, ಶಿವಾನಂದ ಮಾಳಶೆಟ್ಟಿ ಸುದ್ದಿಗೋಷ್ಠಿಯಲ್ಲಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.