ADVERTISEMENT

ಬಸವಲಿಂಗಯ್ಯ ಹಿರೇಮಠ ನಿಧನ

​ಪ್ರಜಾವಾಣಿ ವಾರ್ತೆ
Published 9 ಜನವರಿ 2022, 20:06 IST
Last Updated 9 ಜನವರಿ 2022, 20:06 IST
ಬಸವಲಿಂಗಯ್ಯ ಹಿರೇಮಠ
ಬಸವಲಿಂಗಯ್ಯ ಹಿರೇಮಠ   

ಧಾರವಾಡ: ಜಾನಪದ ಕಲಾವಿದ ಬಸವಲಿಂಗಯ್ಯ ಹಿರೇಮಠ (65) ಭಾನುವಾರ ಬೆಳಿಗ್ಗೆ ಬೆಂಗಳೂರಿನಲ್ಲಿ ನಿಧನರಾದರು.
ಅವರಿಗೆ ಪತ್ನಿ, ಕಲಾವಿದೆ ವಿಶ್ವೇಶ್ವರಿ ಹಿರೇಮಠ ಹಾಗೂ ಪುತ್ರ ಇದ್ದಾರೆ.

ಯಕೃತ್ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಮೂಲತಃ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲ್ಲೂಕಿನ ಬೈಲೂರಿನವರಾದ ಬಸವಲಿಂಗಯ್ಯ ನೀನಾಸಂನಲ್ಲಿ ಶಿಕ್ಷಣ ಪಡೆದವರು. ಸುಗಮ ಸಂಗೀತ ಹಾಗೂ ಜಾನಪದ ಗಾಯಕರಾಗಿ, ದೊಡ್ಡಾಟ, ಸಣ್ಣಾಟ, ಪಾರಿಜಾತ ನಾಟಕಗಳನ್ನು ಆಧುನಿಕ ರಂಗಭೂಮಿಗೆ ಪರಿಚಯಿಸಿ ಅವುಗಳನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯುವುದರ ಜತೆಗೆ, ಅವುಗಳನ್ನು ಹೊಸ ಪೀಳಿಗೆಗೆ ಪರಿಚಯಿಸಿದರು.

ಕುಲಗೋಡು ತಮ್ಮಣ್ಣ ವಿರಚಿತ 12 ಗಂಟೆಗಳ ಅವಧಿಯ ‘ಶ್ರೀ ಕೃಷ್ಣ ಪಾರಿಜಾತ’ ನಾಟಕವನ್ನು ಮೂರು ಗಂಟೆಯಲ್ಲಿ ಪ್ರೇಕ್ಷಕರ ಮನ ಮುಟ್ಟುವಂತೆ ಸಿದ್ಧಪಡಿಸಿ, ಸಾವಿರಕ್ಕೂ ಅಧಿಕ ಯಶಸ್ವಿಪ್ರಯೋಗಗಳನ್ನು ನಡೆಸಿದ್ದರು.ಅಮೆರಿಕ, ಇಂಗ್ಲೆಂಡ್, ದುಬೈ ಸೇರಿದಂತೆ ವಿಶ್ವದ ಹಲವೆಡೆ ‘ಶ್ರೀ ಕೃಷ್ಣ ಪಾರಿಜಾತ’ ಪ್ರದರ್ಶನ ನೀಡಿದ್ದರು.

ADVERTISEMENT

ಜಾನಪದ ಸಂಶೋಧನಾ ಸಂಸ್ಥೆಯನ್ನು ಆರಂಭಿಸಿ, ಯುವ ಕಲಾವಿದರು, ಯುವ ಸಮೂಹವನ್ನು ಸಜ್ಜುಗೊಳಿಸಿದ್ದರು.ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ಸಂದಿವೆ.

ಅಂತ್ಯಕ್ರಿಯೆ ಸೋಮವಾರ ಬೆಳಿಗ್ಗೆ 11ಕ್ಕೆ ಅವರ ಸ್ವಗ್ರಾಮ ಬೈಲೂರಿನಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.