ADVERTISEMENT

ಹಿರಿಯ ಜನಪದ ಕಲಾವಿದ ಬಸವಲಿಂಗಯ್ಯ ಹಿರೇಮಠ ನಿಧನ

​ಪ್ರಜಾವಾಣಿ ವಾರ್ತೆ
Published 9 ಜನವರಿ 2022, 4:16 IST
Last Updated 9 ಜನವರಿ 2022, 4:16 IST
ಕಲಾವಿದ ಬಸವಲಿಂಗಯ್ಯ ಹಿರೇಮಠ
ಕಲಾವಿದ ಬಸವಲಿಂಗಯ್ಯ ಹಿರೇಮಠ   

ಧಾರವಾಡ: ಹಿರಿಯ ಜನಪದ ಕಲಾವಿದ ಬಸವಲಿಂಗಯ್ಯ ಹಿರೇಮಠ (65) ಭಾನುವಾರ ಬೆಳಿಗ್ಗೆ ನಿಧನರಾದರು.

ಯಕೃತ್ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ಪತ್ನಿ ಕಲಾವಿದೆ ವಿಶ್ವೇಶ್ವರಿ ಹಿರೇಮಠ ಹಾಗೂ ಪುತ್ರ ಇದ್ದಾರೆ.

ಮೂಲತಃ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲ್ಲೂಕಿನ ಬೈಲೂರಿನವರಾದ ಬಸವಲಿಂಗಯ್ಯ ನೀನಾಸಂ ಶಿಕ್ಷಣ ಪಡೆದಿದ್ದರು. ಸುಗಮ ಸಂಗೀತ ಗಾಯಕರಾಗಿ, ದೊಡ್ಡಾಟ, ಸಣ್ಣಾಟ, ಪಾರಿಜಾತ ನಾಟಕಗಳನ್ನು ಆಧುನಿಕ ರಂಗಭೂಮಿಗೆ ಪರಿಚಯಿಸಿ ಅವುಗಳನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದು ಅವುಗಳನ್ನು ಹೊಸ ಪೀಳಿಗೆಗೆ ಪರಿಚಯಿಸಿದರು.

ADVERTISEMENT

ಕುಲಗೋಡು ತಮ್ಮಣ್ಣ ವಿರಚಿತ 12 ಗಂಟೆಗಳ ಅವಧಿಯ ಶ್ರೀ ಕೃಷ್ಣ ಪಾರಿಜಾತ ವನ್ನು ಮೂರು ಗಂಟೆಯಲ್ಲಿ ಪ್ರೇಕ್ಷಕರ ಮನ ಮುಟ್ಟುವಂತೆ ಮಾಡಿ ಸಾವಿರಕ್ಕೂ ಅಧಿಕ ಪ್ರಯೋಗದಿಂದ ಜನ ಮಾನಸದಲ್ಲಿ ಛಾಪು ಮೂಡಿಸಿದ್ದರು. ಜಾನಪದ ಸಂಶೋಧನಾ ಸಂಸ್ಥೆ ಆರಂಭಿಸಿ ಯುವ ಕಲಾವಿದರು, ಯುವ ಸಮೂಹವನ್ನು ಸಜ್ಜುಗೊಳಿಸಿದ್ದರು. ಬಸವಲಿಂಗಯ್ಯ ಅವರ ಕಂಚಿನ‌ಕಂಠದ ಹಾಡುಗಾರಿಕೆಗೆ ಎಲ್ಲರೂ ತಲೆತೂಗುತ್ತಿದ್ದರು.

ಅಮೆರಿಕ, ಇಂಗ್ಲೆಂಡ್, ದುಬೈ ಸೇರಿದಂತೆ ವಿಶ್ವದ ಇತರ ರಾಷ್ಟ್ರಗಳಲ್ಲಿ ಕೂಡ ಕೃಷ್ಣ ಪಾರಿಜಾತ ಸಣ್ಣಾಟ ಪ್ರದರ್ಶನ ನೀಡಿದ್ದ ಅವರ ಕಲಾ ಸೇವೆಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ಒಲಿದು ಬಂದಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.