ADVERTISEMENT

ಬಿಜೆಪಿ ಅಭ್ಯರ್ಥಿ ಘೋಷಿಸಿಲ್ಲ: ಜೋಶಿ

ವಿಧಾನ ಪರಿಷತ್‌ನ ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆ

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2022, 19:27 IST
Last Updated 18 ಏಪ್ರಿಲ್ 2022, 19:27 IST
 ಪ್ರಲ್ಹಾದ ಜೋಶಿ
 ಪ್ರಲ್ಹಾದ ಜೋಶಿ   

ಹುಬ್ಬಳ್ಳಿ: ‘ವಿಧಾನ ಪರಿಷತ್‌ನ ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಬಿಜೆಪಿಯಿಂದ ಅಧಿಕೃತ ಅಭ್ಯರ್ಥಿ ಘೋಷಿಸಿಲ್ಲ. ಪಕ್ಷವನ್ನು ಸೇರುವುದಾಗಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಸ್ವತಃ ಘೋಷಿಸಿಕೊಂಡಿದ್ದಾರೆ. ಅವರ ಸೇರ್ಪಡೆ ಕುರಿತು ಪಕ್ಷದ ರಾಷ್ಟ್ರೀಯ ಹಾಗೂ ರಾಜ್ಯ ಘಟಕದ ಅಧ್ಯಕ್ಷರು ತೀರ್ಮಾನಿಸುತ್ತಾರೆ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಸೋಮವಾರ ಈ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಪಕ್ಷದೊಳಗೆ ನಡೆದ ಆಂತರಿಕ ಚರ್ಚೆಯ ಕುರಿತು ಆಕಾಂಕ್ಷಿ ಮೋಹನ ಲಿಂಬಿಕಾಯಿ ಅವರು ಏನಾದರೂ ಹೇಳಿದ್ದರೆ, ಅದಕ್ಕೆ ಪ್ರತಿಕ್ರಿಯೆ ಕೊಡುವುದಿಲ್ಲ. ಪಕ್ಷದ ವ್ಯವಸ್ಥೆಯೊಳಗೆ, ಯಾರಿಗೆ ಟಿಕೆಟ್ ನೀಡಬೇಕು ಎಂಬುದರ ಕುರಿತು ಪಕ್ಷದ ರಾಷ್ಟ್ರೀಯ ಮತ್ತು ರಾಜ್ಯ ಘಟಕದ ಅಧ್ಯಕ್ಷರು ಹಾಗೂ ಮುಖ್ಯಮಂತ್ರಿ ತೀರ್ಮಾನ ಮಾಡುತ್ತಾರೆ’ ಎಂದರು.

‘75 ವರ್ಷ ಮೀರಿದವರನ್ನೂ ಪಕ್ಷಕ್ಕೆ ಸೇರಿಸಿಕೊಂಡು ಚುನಾವಣೆಯಲ್ಲಿ ಟಿಕೆಟ್ ಕೊಡುತ್ತೀರಾ’ ಎಂಬ ಪ್ರಶ್ನೆಗೆ, ‘ಪಕ್ಷದ ರಾಷ್ಟ್ರೀಯ ನಾಯಕರು ಆ ಕುರಿತು ನಿರ್ಧಾರ ಕೈಗೊಳ್ಳುತ್ತಾರೆ’ ಎಂದು ಪ್ರತಿಕ್ರಿಯಿಸಿದರು.

ADVERTISEMENT

ಇತ್ತೀಚೆಗೆ ಸುದ್ದಿಗೋಷ್ಠಿ ನಡೆಸಿದ್ದ ಟಿಕೆಟ್ ಆಕಾಂಕ್ಷಿ ಮೋಹನ ಲಿಂಬಿಕಾಯಿ ಅವರು, ‘ಚುನಾವಣೆಗೆ ನಾನೇ ಪಕ್ಷದ ಅಭ್ಯರ್ಥಿಯಾಗಿದ್ದು, ಪಕ್ಷದ ಮುಖಂಡರೂ ಹಸಿರು ನಿಶಾನೆ ತೋರಿಸಿದ್ದಾರೆ. ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ’ ಎಂದು ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.