ADVERTISEMENT

ದೇಶದಲ್ಲಿ ಕಾಂಗ್ರೆಸ್‌ ಕ್ಷೀಣ: ಶಾಸಕ ಜಗದೀಶ ಶೆಟ್ಟರ್ ವಾಗ್ದಾಳಿ

​ಪ್ರಜಾವಾಣಿ ವಾರ್ತೆ
Published 12 ಜುಲೈ 2022, 8:53 IST
Last Updated 12 ಜುಲೈ 2022, 8:53 IST
ಶಾಸಕ ಜಗದೀಶ ಶೆಟ್ಟರ
ಶಾಸಕ ಜಗದೀಶ ಶೆಟ್ಟರ    

ಹುಬ್ಬಳ್ಳಿ: ‘ದೇಶದಾದ್ಯಂತ ಕಾಂಗ್ರೆಸ್ ಕ್ಷೀಣಿಸುತ್ತದೆ. ವಿವಿಧ ರಾಜ್ಯಗಳಲ್ಲಿ ಕಾಂಗ್ರೆಸ್ ನಾಯಕರು ತಮ್ಮ ಪಕ್ಷ ತೊರೆದು ಬಿಜೆಪಿ ಸೇರುತ್ತಿದ್ದಾರೆ.‌ ತೆಲಂಗಾಣಕ್ಕೆ ಇತ್ತೀಚೆಗೆ ಭೇಟಿ ನೀಡಿದ್ದಾಗ, ಹಲವರು ಪಕ್ಷಕ್ಕೆ ಸೇರ್ಪಡೆಯಾದರು. ಇದ ಹೀಗೆಯೇ ಮುಂದುವರಿದರೆ ಕಾಂಗ್ರೆಸ್ ಸಂಪೂರ್ಣವಾಗಿ ಅಸ್ತಿತ್ವ ಕಳೆದುಕೊಳ್ಳಲಿದೆ’ ಎಂದು ಶಾಸಕ ಜಗದೀಶ ಶೆಟ್ಟರ ವಾಗ್ದಾಳಿ ನಡೆಸಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಚುನಾವಣೆಗೆ ಮುಂಚೆಯೇ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಧ್ಯೆ ಮುಖ್ಯಮಂತ್ರಿ ಸ್ಥಾನಕ್ಕಾಗಿ ಕಿತ್ತಾಟ ನಡೆಯುತ್ತಿದೆ. ಅವರಿಬ್ಬರ ಕನಸು ಎಂದಿಗೂ ನನಸಾಗುವುದಿಲ್ಲ. ಮುಂದಿನ ಬಾರಿಯೂ ಬಿಜೆಪಿಯೇ ಅಧಿಕಾರಕ್ಕೆ ಬರಲಿದೆ’ ಎಂದರು.

ನಿರುದ್ಯೋಗ ಹೆಚ್ಚಳ ಕುರಿತು ಸಿದ್ಧರಾಮಯ್ಯ ಅವರ ಟೀಕೆಗೆ ಪ್ರತಿಕ್ರಿಯಿಸಿದ ಅವರು, ‘ದೇಶವನ್ನು ಕಾಂಗ್ರೆಸ್ 60 ವರ್ಷ ಆಳಿದ್ದಾಗಲೂ ನಿರುದ್ಯೋಗ ಇತ್ತು. ಸಿದ್ದರಾಮಯ್ಯ ಕೆಲವು ವರ್ಷಗಳ ಹಿಂದೆ ಕಾಂಗ್ರೆಸ್ ಸೇರಿದ್ದಾರೆ. ಅವರು ಮೂಲ ಕಾಂಗ್ರೆಸ್ಸಿಗರಾಗಿದ್ದರೆ ಈ ಮಾತು ಹೇಳುತ್ತಿರಲಿಲ್ಲ. ಜನಸಂಖ್ಯೆ ಹೆಚ್ಚಾದಂತೆ ನಿರುದ್ಯೋಗವೂ ಹೆಚ್ಚಾಗುತ್ತದೆ. ಹಿಂದೆ ಇಂದಿರಾ ಗಾಂಧಿ, ಮನಮೋಹನ ಸಿಂಗ್ ಎಷ್ಟು ಮಂದಿಗೆ ಉದ್ಯೋಗ ಕೊಟ್ಟಿದ್ದಾರೆ ಎಂಬುದನ್ನು ಒಮ್ಮೆ ಗಮನಿಸಲಿ’ ಎಂದು ಹೇಳಿದರು.

ADVERTISEMENT

‘ಪ್ರಧಾನಿ ಮೋದಿ ಅವರು ಉದ್ಯಮಿಗಳಿಗೆ ಪ್ರೋತ್ಸಾಹಿಸುವ ಮೂಲಕ, ಯುವಜನರಿಗೆ ಉದ್ಯೋಗ ನೀಡುವ ಕೆಲಸ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕನಾಗಿದ್ದೇನೆ ಎಂದು ಸಲ್ಲದ ಟೀಕೆ ಮಾಡುವುದು ಸರಿಯಲ್ಲ’ ಎಂದರು.

‘ಸಿದ್ದರಾಮೋತ್ಸವ ಮಾಡುವುದು ಅವರಿಗೆ ಬಿಟ್ಟ ವಿಚಾರವಾಗಿದೆ. ಆದರೆ, ಇದಕ್ಕೆ ಅವರ ಪಕ್ಷದೊಳಗೇ ಅವರ ಅಸಮಾಧಾನ ವ್ಯಕ್ತವಾಗುತ್ತಿದೆ.‌ ಪರ ಮತ್ತು ವಿರೋಧದ ಚರ್ಚೆ ನಡೆಯುತ್ತಿದೆ’ ಎಂದು ಪ್ರತಿಕ್ರಿಯಿಸಿದರು.

ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಅವರು ಜೈಲಿಗೆ ಹೋಗುವುದಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕೂಡ ಕಾರಣ ಎಂಬ ಆರೋಪದಲ್ಲಿ ಹುರುಳಿಲ್ಲ. ಇಂತಹ ಆಧಾರರಹಿತ ಟೀಕೆಗಳನ್ನು ಮಾಡುವುದನ್ನು ನಿಲ್ಲಿಸಬೇಕು’ ಎಂದರು.

ಮಳೆ ಹಾನಿ: ಪರಿಹಾರ ಕೈಗೊಳ್ಳಲಿ
‘ಮಳೆಯಿಂದಾಗಿ ಹಲವೆಡೆ ನೆರೆ ಹಾವಳಿ ಬಂದಿದೆ. ಮಳೆ ಹಾನಿ, ಬೆಳೆ ನಷ್ಟ, ಮನೆ ಮತ್ತು ರಸ್ತೆ ಕುಸಿತವಾಗಿರುವ ಕಡೆ ಸರ್ಕಾರ ತಕ್ಷಣ ಪರಿಹಾರ ಕಾರ್ಯ ಕೈಗೊಳ್ಳಬೇಕು. ಜಿಲ್ಲಾ ಉಸ್ತುವಾರಿ ಸಚಿವರು ಕೂಡ ಅಂತಹ ಸ್ಥಳಗಳಿಗೆ ಭೇಟಿ ನೀಡಬೇಕು. ಮಳೆ ಹಾನಿ ಪರಿಹಾರ ಫಲಾನುಭವಿಗಳ ಕೈ ಸೇರದಿದ್ದರೆ, ಅಂತಹವರನ್ನು ಗುರುತಿಸಿ ಪರಿಹಾರ ನೀಡುವ ಕೆಲಸವನ್ನು ಮಾಡಬೇಕು’ ಎಂದು ಶಾಸಕ ಜಗದೀಶ ಶೆಟ್ಟರ್ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.