ADVERTISEMENT

ಅವಳಿ ನಗರ ಅಭಿವೃದ್ಧಿ: ರಾಜ್ಯ ಸರ್ಕಾರದ ಮಲತಾಯಿ ಧೋರಣೆ ಖಂಡಿಸಿ ಬಿಜೆಪಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2018, 7:24 IST
Last Updated 2 ಸೆಪ್ಟೆಂಬರ್ 2018, 7:24 IST
ಹುಬ್ಬಳ್ಳಿ– ಧಾರವಾಡದ ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಭಾನುವಾರ ಪ್ರತಿಭಟನೆ ನಡೆಸಿದರು.
ಹುಬ್ಬಳ್ಳಿ– ಧಾರವಾಡದ ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಭಾನುವಾರ ಪ್ರತಿಭಟನೆ ನಡೆಸಿದರು.   

ಹುಬ್ಬಳ್ಳಿ: ಅವಳಿ ನಗರಗಳ ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಭಾನುವಾರ ಪ್ರತಿಭಟನೆ ನಡೆಸಿದರು.

ಪಾಲಿಕೆಗೆ ಸಮರ್ಪಕವಾಗಿ ಅನುದಾನ ನೀಡದ ಕಾರಣ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿವೆ. ಮೂಲ ಸೌಕರ್ಯಗಳನ್ನು ಸಮರ್ಪಕವಾಗಿ ಒದಗಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಪಾಲಿಕೆಯ ಬೇಡಿಕೆಗಳಿಗೆ ಸರ್ಕಾರ ಈ ಕೂಡಲೇ ಸ್ಪಂದಿಸಬೇಕು. ಅಭಿವೃದ್ಧಿ ವಿಷಯದಲ್ಲಿ ರಾಜಕಾರಣ ಮಾಡದೆ ಅನುದಾನ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪಾಲಿಕೆಯ ಪ್ರಸ್ತಾವನೆಗಳಿಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸುತ್ತಿಲ್ಲ. ಪಾಲಿಕೆಯ ನಿವೃತ್ತ ನೌಕರರ ₹130 ಕೋಟಿ ಪಿಂಚಣಿ ಮೊತ್ತವನ್ನು ಸರ್ಕಾರ ಬಾಕಿ ಉಳಿಸಿಕೊಂಡಿದೆ. ಆ ಬಗ್ಗೆ ಈಗಾಗಲೇ 20ಕ್ಕೂ ಅಧಿಕ ಬಾರಿ ಹೋರಾಟ ನಡೆಸಿದರೂ ಪ್ರಯೋಜನಾ ಆಗಿಲ್ಲ. ಹಿಂದಿನ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಹುಬ್ಬಳ್ಳಿಗೆ ಬಂದಾಗ ಹಣ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿ ಹೋಗಿದ್ದರು. ಹಣ ಮಾತ್ರ ಬಂದಿಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ನಾಗೇಶ್ ಕಲಬುರ್ಗಿ ಹೇಳಿದರು.

ADVERTISEMENT

ಕೇಂದ್ರ ರಸ್ತೆ ನಿಧಿ (ಸಿಆರ್‌ಎಫ್) ಅನುದಾನ ಇದ್ದರೂ ಸದನ್ನು ಸದ್ಬಳಕೆ ಮಾಡಲು ಟೆಂಡರ್ ಕರೆಯುತ್ತಿಲ್ಲ. ಇದರಿಂದಾಗಿ ರಸ್ತೆಗಳನ್ನು ಅಭವೃದ್ಧಿಪಡಿಸಲು ಸಾಧ್ಯವಾಗುತ್ತಿಲ್ಲ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಬಜೆಟ್‌ನಲ್ಲಿಯೂ ಹುಬ್ಬಳ್ಳಿ– ಧಾರವಾಡಕ್ಕೆ ಅನುದಾನ ನೀಡಿಲ್ಲ. ಅವರು ಭೈರಿದೇವರಕೊಪ್ಪದ ಮಾಯಕಾರ ಕಾಲೊನಿಯಲ್ಲಿ ಮನೆ ಮಾಡಿದ್ದರು. ಅಲ್ಲಿನ ರಸ್ತೆಯೂ ತೀರಾ ಹಾಳಾಗಿದ್ದು, ದುರಸ್ತಿ ಮಾಡಲು ಮಾಡಲು ಕ್ರಮ ಕೈಗೊಂಡಿಲ್ಲ ಎಂದು ಅವರು ದೂರಿದರು.

ಪಾಲಿಕೆ ಸದಸ್ಯ ಶಿವು ಮೆಣಸಿನಕಾಯಿ ಮಾತನಾಡಿ, 2,400 ಮಂದಿ ಪಾಲಿಕೆಯ ನಿವೃತ್ತ ನೌಕರರಿಗೆ ಪ್ರತಿ ತಿಂಗಳು ಪಿಂಚಣಿ ನೀಡಬೇಕಿದೆ. 2014ರಿಂದಲೂ ಸರ್ಕಾರ ಆ ಮೊತ್ತವನ್ನು ಬಿಡುಗಡೆ ಮಾಡಿಲ್ಲ. ನಿವೃತ್ತರಿಗೆ ತೊಂದರೆ ಆಗಬಾರದು ಎಂಬ ಕಾರಣಕ್ಕೆ ಪಾಲಿಕೆಯೇ ಪಿಂಚಣಿ ನೀಡುತ್ತಿದೆ. ಹೆಚ್ಚಿನ ಹಣ ಅದಕ್ಕೆ ಬಳಕೆಯಾಗುತ್ತಿರುವುದರಿಂದ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ ಎಂದರು.

ಪ್ರಧಾನ ಕಾರ್ಯದರ್ಶಿ ಸತೀಶ್ ಸೆಜವಾಡಕರ್, ಮುಖಂಡರಾದ ಮಂಜು ಕಾಟ್ಕರ್, ವಿಠಲ್ ಬ್ಯಾಹಟ್ಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.