ಸಾವು (ಸಾಂದರ್ಭಿಕ ಚಿತ್ರ)
ಗೆಟ್ಟಿ ಚಿತ್ರ
ಹುಬ್ಬಳ್ಳಿ: ಇಲ್ಲಿನ ಕೆಎಂಸಿ–ಆರ್ಐ ಆಸ್ಪತ್ರೆಯಲ್ಲಿ ಮಹಿಳೆಯ ಶವ ಪ್ಯಾಕ್ ಮಾಡಲು ಹಣಕ್ಕೆ ಬೇಡಿಕೆ ಇಟ್ಟ ಘಟನೆ ಬುಧವಾರ ನಡೆದಿದ್ದು, ಕುಟುಂಬದವರ ಆಕ್ರೋಶಕ್ಕೆ ಕಾರಣವಾಯಿತು.
ಪಿತ್ತಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ರಾಯಚೂರು ಜಿಲ್ಲೆಯ ಲಿಂಗಸಗೂರಿನ ಗದ್ದೆಮ್ಮಾ (52) ಅವರು ಜ.31ರಂದು ಕೆಎಂಸಿ–ಆರ್ಐ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಅವರು ಬುಧವಾರ ಮೃತಪಟ್ಟಿದ್ದರು.
‘ಹಣ ನೀಡಿದರಷ್ಟೇ ಮೃತದೇಹ ಪ್ಯಾಕ್ ಮಾಡುವುದಾಗಿ ಶವಾಗಾರದ ಸಿಬ್ಬಂದಿ ಪಟ್ಟು ಹಿಡಿದಿದ್ದು, ಫೋನ್ ಪೇ ಮೂಲಕ ಹಣ ಪಾವತಿಸಿಕೊಂಡಿದ್ದಾರೆ’ ಎಂದು ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
‘ಶವಾಗಾರದಲ್ಲಿ ಕೆಲಸ ಮಾಡುತ್ತಿದ್ದ ಹೊರಗುತ್ತಿಗೆ ಸಿಬ್ಬಂದಿ ಹಣ ಕೇಳಿರುವ ಆರೋಪ ಕೇಳಿ ಬಂದಿದೆ. ವೈದ್ಯಕೀಯ ಅಧೀಕ್ಷಕರ ನೇತೃತ್ವದಲ್ಲಿ ತಂಡ ರಚಿಸಿದ್ದು, ವರದಿಯಾಧರಿಸಿ ಕ್ರಮ ಕೈಗೊಳ್ಳಲಾಗುವುದು’ ಎಂದು ಕೆಎಂಸಿ–ಆರ್ಐ ಆಸ್ಪತ್ರೆಯ ನಿರ್ದೇಶಕ ಡಾ. ಈಶ್ವರ ಹೊಸಮನಿ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.