ADVERTISEMENT

‘ಸಿಸಿಟಿವಿ ಕ್ಯಾಮೆರಾ ನಿರ್ವಹಣೆ ಡಿ.ಸಿ ಜತೆ ಚರ್ಚೆ’

ನೂತನ ಪೊಲೀಸ್‌ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿ ಆರ್‌. ದಿಲೀಪ್‌ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 20 ಆಗಸ್ಟ್ 2019, 13:55 IST
Last Updated 20 ಆಗಸ್ಟ್ 2019, 13:55 IST
ಹುಬ್ಬಳ್ಳಿ–ಧಾರವಾಡ ಮಹಾನಗರ ನೂತನ ಪೊಲೀಸ್‌ ಆಯುಕ್ತರಾಗಿ ಆರ್‌. ದಿಲೀಪ್ ಅವರು ಬೆಂಗಳೂರಿಗೆ ಡಿಜಿಪಿ ಆಗಿ ವರ್ಗಾವಣೆಯಾದ ಎಂ.ಎನ್‌. ನಾಗರಾಜ್‌ ಅವರಿಂದ ಮಂಗಳವಾರ ಅಧಿಕಾರ ಸ್ವೀಕರಿಸಿದರು
ಹುಬ್ಬಳ್ಳಿ–ಧಾರವಾಡ ಮಹಾನಗರ ನೂತನ ಪೊಲೀಸ್‌ ಆಯುಕ್ತರಾಗಿ ಆರ್‌. ದಿಲೀಪ್ ಅವರು ಬೆಂಗಳೂರಿಗೆ ಡಿಜಿಪಿ ಆಗಿ ವರ್ಗಾವಣೆಯಾದ ಎಂ.ಎನ್‌. ನಾಗರಾಜ್‌ ಅವರಿಂದ ಮಂಗಳವಾರ ಅಧಿಕಾರ ಸ್ವೀಕರಿಸಿದರು   

ಹುಬ್ಬಳ್ಳಿ: ‘ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಅವಳಿನಗರದ ಎಲ್ಲ ವಾರ್ಡ್‌ಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವ ಹಾಗೂ ಅವುಗಳ ಸಮಗ್ರ ನಿರ್ವಹಣೆ ಮಾಡುವ ಕುರಿತು ಜಿಲ್ಲಾಧಿಕಾರಿಗಳ ಜತೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು’ ಎಂದು ಹುಬ್ಬಳ್ಳಿ–ಧಾರವಾಡ ಮಹಾನಗರ ಪೊಲೀಸ್‌ ಆಯುಕ್ತ ಆರ್‌. ದಿಲೀಪ್‌ ಹೇಳಿದರು.

ನೂತನ ಆಯುಕ್ತರಾಗಿ ಮಂಗಳವಾರ ಅಧಿಕಾರ ಸ್ವೀಕರಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್‌ಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದ್ದು, ಅವುಗಳ ನಿರ್ವಹಣೆಯನ್ನು ಲೋಕೋಪಯೋಗಿ ಇಲಾಖೆ ನೋಡಿಕೊಳ್ಳುತ್ತಿದೆ. ಇಲ್ಲಿಯೂ ನಿರ್ವಹಣೆ ಜವಾಬ್ದಾರಿ ಯಾರಿಗೆ ನೀಡಬೇಕು. ಪರಿಣಾಮಕಾರಿಯಾಗಿ ಜಾರಿಗೆ ಏನು ಮಾಡಬೇಕು ಎನ್ನುವ ಕುರಿತು ಜಿಲ್ಲಾಧಿಕಾರಿ ಅವರೊಂದಿಗೆ ಚರ್ಚಿಸುತ್ತೇನೆ’ ಎಂದರು.

‘ಅವಳಿ ನಗರದಲ್ಲಿ ಟ್ರಾಫಿಕ್‌ ಸಮಸ್ಯೆ ಹೆಚ್ಚಾಗುತ್ತಿದ್ದು, ಅದರ ಪರಿಹಾರಕ್ಕೆ ಕೆಲವು ವೈಜ್ಞಾನಿಕ ಕ್ರಮಗಳನ್ನು ಕೈಗೊಳ್ಳಬೇಕಿದೆ. ಪ್ರತಿಭಟನೆ ನಡೆಸುವ ಸಂಘ–ಸಂಸ್ಥೆ ಹಾಗೂ ಸಾರ್ವಜನಿಕರಿಗೆ ಪ್ರತ್ಯೇಕ ಸ್ಥಳ ಗುರುತಿಸಿ, ಅಲ್ಲಿಯೇ ಪ್ರತಿಭಟನೆ ನಡೆಸುವಂತೆ ಸೂಚಿಸಲಾಗುವುದು’ ಎಂದು ತಿಳಿಸಿದರು.

ADVERTISEMENT

‘ಹೊರ ಊರುಗಳಿಂದ ಬಂದು ದುಷ್ಕೃತ್ಯ ಎಸಗುವ, ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿ ಜನತೆಯ ನೆಮ್ಮದಿ ಕೆಡಿಸುವವರ ವಿರುದ್ಧ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಪಾರದರ್ಶಕ, ಜನಪರ ಆಡಳಿತಕ್ಕೆ ಒತ್ತು ನೀಡಿ, ಸಾರ್ವಜನಿಕರ ಸಹಭಾಗಿತ್ವದಲ್ಲಿ ಮಾದರಿ ಕಮಿಷನರೇಟ್‌ ಮಾಡಲು ಪ್ರಯತ್ನಿಸುತ್ತೇನೆ’ ಎಂದರು.

‘ಈ ಹಿಂದೆ ಅವಳಿ ನಗರದಲ್ಲಿ ಡಿಸಿಪಿ ಆಗಿ ಕರ್ತವ್ಯ ನಿರ್ವಹಿಸಿದ್ದರಿಂದ, ಕೆಲವಷ್ಟು ಅನುಭವಗಳಿವೆ. ಯುವ ಅಧಿಕಾರಿಗಳ ತಂಡ ನನ್ನ ಜತೆ ಇರುವುದರಿಂದ, ಜನರ ನಿರೀಕ್ಷೆಗೆ ತಕ್ಕಂತೆ ಕಾರ್ಯ ನಿರ್ವಹಿಸುತ್ತೇನೆ. ಮಾಧ್ಯಮಗಳಲ್ಲಿ ಬರುವ ಟೀಕೆ–ಟಿಪ್ಪಣೆಗಳು ದೀಪ ಹಚ್ಚುವಂತಿರಲಿ, ಕತ್ತಲಲ್ಲಿ ಬಾಣ ಬಿಟ್ಟಂತೆ ಇರಬಾರದು’ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.