ಕಲಘಟಗಿ: ‘ತಾಲ್ಲೂಕಿನಲ್ಲಿ ಅಂಗನವಾಡಿ ಮಕ್ಕಳ ಹಾಗೂ ಬಾಣಂತಿಯರ ಪೌಷ್ಟಿಕ ಆಹಾರ ಕಳವು ಪ್ರಕರಣ ಹೆಚ್ಚುತ್ತಿದೆ. ಅಂಗನವಾಡಿ ಕೇಂದ್ರಗಳಿಗೆ ಸಿಸಿಟಿವಿ ಕ್ಯಾಮೆರಾ ಅಳವಡಿಸಲು ಕ್ರಮ ಕೈಗೊಳ್ಳಬೇಕು’ ಎಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣದ) ಪದಾಧಿಕಾರಿಗಳು ಪಟ್ಟಣದಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ಅವರಿಗೆ ಭಾನುವಾರ ಮನವಿ ಸಲ್ಲಿಸಿದರು.
ತಾಲ್ಲೂಕ ಘಟಕದ ಅಧ್ಯಕ್ಷ ಶಂಕರಗೌಡ ಬಾವಿಕಟ್ಟಿ ಮಾತನಾಡಿ, ‘ತಾಲ್ಲೂಕಿನ ದೇವರಕೊಂಡ ಗ್ರಾಮದಲ್ಲಿ ಸೆ. 8ರಂದು ರಾತ್ರಿ ಮಕ್ಕಳಿಗೆ ವಿತರಿಸಬೇಕಿದ್ದ ಪೌಷ್ಟಿಕ ಆಹಾರ ಕಳವಾದ ಕುರಿತು ಸ್ಥಳೀಯ ಠಾಣೆಯಲ್ಲಿ ದೂರು ದಾಖಲಾಗಿದೆ. ಕೆಲವು ದಿನಗಳ ಹಿಂದೆ ತಾಲ್ಲೂಕಿನ ಯಲವದಾಳ ಗ್ರಾಮದ ಮನೆಯೊಂದರಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಪೌಷ್ಟಿಕ ಆಹಾರ ಪದಾರ್ಥಗಳನ್ನು ಅಕ್ರಮವಾಗಿ ಸಂಗ್ರಹಿಸಲಾಗಿತ್ತು. ಖಚಿತ ಮಾಹಿತಿ ಮೇರೆಗೆ ಕಲಘಟಗಿ ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡಿದ್ದರು’ ಎಂದರು.
ಶಿವಾನಂದ ಪುಂಡಿ, ಗಿರೀಶ ಬಂಡಿ, ವೀರಭದ್ರಯ್ಯ ಚಿಕ್ಕಮಠ, ಮಂಜುನಾಥ ಮಾಳಗಿ, ರವಿ ಬಡಿಗೇರ, ರಾಮಣ್ಣ ಹೊನ್ನಳ್ಳಿ, ರಾಜು ಬಾಳಿಕಾಯಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.