ಧಾರವಾಡ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಗೋಕಾಕ ಜೆಎಂಎಫ್ಸಿ ನ್ಯಾಯಾಲಯ ಜಾರಿಗೊಳಿಸಿದ್ದ ಸಮನ್ಸ್ ಮತ್ತು ವಿಚಾರಣಾ ಪ್ರಕ್ರಿಯೆಗೆ ಇಲ್ಲಿನ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಕಳೆದ ನವೆಂಬರ್ನಲ್ಲಿ ನಡೆದ ಉಪಚುನಾವಣೆ ಸಂದರ್ಭದಲ್ಲಿ ಗೋಕಾಕ ವಿಧಾನಸಭಾ ಕ್ಷೇತ್ರದಲ್ಲಿ ಒಂದು ಸಮುದಾಯವನ್ನು ಪ್ರಚೋದಿಸುವ ರೀತಿಯಲ್ಲಿ ಭಾಷಣ ಮಾಡಿದ್ದು, ಇದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಎಂದು ಯಡಿಯೂರಪ್ಪ ಅವರ ವಿರುದ್ಧ 2019ರ ನವೆಂಬರ್ 26 ರಂದು ದೂರು ದಾಖಲಾಗಿತ್ತು.
ದೂರು ಸ್ವೀಕರಿಸಿದ್ದ ಪ್ರಧಾನ ಜೆಎಂಎಫ್ಸಿ ನ್ಯಾಯಾಲಯ ಕಳೆದ ಜೂನ್ 26 ರಂದು ವಿಚಾರಣೆ ನಡೆಸುವಂತೆ ಆದೇಶಿಸಿ, ಸಮನ್ಸ್ ಜಾರಿಗೊಳಿಸಿತ್ತು. ದೂರಿನನ್ವಯ ದಾಖಲಾಗಿದ್ದ ಎಫ್ಐಅರ್ ಮತ್ತು ವಿಚಾರಣಾ ಪ್ರಕ್ರಿಯೆಯನ್ನು ಅನೂರ್ಜಿತಗೊಳಿಸುವಂತೆ ಕೋರಿ ಹೈಕೋರ್ಟ್ನಲ್ಲಿ ಯಡಿಯೂರಪ್ಪ ಅವರು ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ನ್ಯಾಯಪೀಠ, ಉಭಯ ಪಕ್ಷಗಳ ವಾದ ಆಲಿಸಿ, ತೀರ್ಪು ಕಾಯ್ದಿರಿಸಿತು.
ಅರ್ಜಿದಾರರ ಪರ ಹಿರಿಯ ವಕೀಲ ಸಿ.ವಿ.ನಾಗೇಶ ಮತ್ತು ಸಂದೀಪ ಪಾಟೀಲ ವಾದ ಮಂಡಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.