ಹುಬ್ಬಳ್ಳಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ‘ವರ್ಷಧಾರೆ’ ಯೋಜನೆಯಡಿ ಕೈಗೊಂಡಿರುವ ಮೋಡ ಬಿತ್ತನೆ ಕಾರ್ಯಕ್ಕೆ ಜಿಲ್ಲಾಧಿಕಾರಿ ದೀಪಾ ಚೋಳನ್ ಗುರುವಾರ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಚಾಲನೆ ನೀಡಿದರು.
ಮುಂಬೈ ಕರ್ನಾಟಕ ಮತ್ತು ಹೈದರಾಬಾದ್ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಮೂರು ತಿಂಗಳ ಕಾಲ ವಿಮಾನವು ಮೋಡ ಬಿತ್ತನೆ ಮಾಡಲಿದೆ ಎಂದು ದೀಪಾ ಅವರು ತಿಳಿಸಿದರು.
ಗದುಗಿನಲ್ಲಿರುವ ರೇಡಾರ್ ಕೇಂದ್ರ ಮೋಡಗಳ ಸಾಂದ್ರತೆ ನೀಡುವ ಮಾಹಿತಿ ಆಧರಿಸಿ ಮೋಡ ಬಿತ್ತನೆ ಕಾರ್ಯ ನಡೆಯಲಿದೆ ಎಂದರು.
ಧಾರವಾಡ ಜಿಲ್ಲೆಯಲ್ಲಿ ಮುಂಗಾರು ವಿಳಂಬವಾಗಿ ಆರಂಭವಾದರೂ ಸಹ ಧಾರವಾಡ, ಹುಬ್ಬಳ್ಳಿ ತಾಲ್ಲೂಕು ವ್ಯಾಪ್ತಿಯಲ್ಲಿ ನಿರೀಕ್ಷಿತ ಮಳೆಯಾಗಿದೆ. ಆದರೆ, ನವಲಗುಂದ, ಕುಂದಗೋಳ, ಕಲಘಟಗಿ ತಾಲ್ಲೂಕು ವ್ಯಾಪ್ತಿಯಲ್ಲಿ ಮಳೆ ಕೊರತೆಯಾಗಿದೆ. ಈ ಕಾರಣಕ್ಕೆ ಜಿಲ್ಲೆಯಲ್ಲೂ ಮೋಡ ಬಿತ್ತನೆ ಕೈಗೊಳ್ಳಲಾಗಿದೆ. ಇದರಿಂದ ಕೆರೆಗಳು, ಕೃಷಿ ಹೊಂಡಗಳು ತುಂಬಿ, ಕೃಷಿ ಚಟುವಟಿಕೆಗೆ ಅನುಕೂಲವಾಗುವ ನಿರೀಕ್ಷೆ ಇದೆ’ ಎಂದು ಹೇಳಿದರು.
ಮೋಡ ಬಿತ್ತನೆ ರದ್ದು: ಪೂರ್ವ ನಿಗದಿಯಂತೆ ಗುರುವಾರ ಧಾರವಾಡ ಜಿಲ್ಲೆಯಲ್ಲಿ ಮೋಡ ಬಿತ್ತನೆಗೆ ಯೋಜಿಸಲಾಗಿತ್ತು. ಆದರೆ, ಸಮೃದ್ಧ ಮಳೆ ಮೋಡಗಳು ಇಲ್ಲದ ಕಾರಣ ಕಾರ್ಯಾಚರಣೆ ರದ್ದುಗೊಳಿಸಲಾಗಿದ್ದು, ಮುಂದಿನ ಒಂದೆರಡು ದಿನಗಳಲ್ಲಿ ಜಿಲ್ಲೆಯಲ್ಲಿ ಮೋಡ ಬಿತ್ತನೆ ಕಾರ್ಯ ನಡೆಯಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಪ್ರೊಬೆಷನರಿ ಐಯೆಸ್ ಅಧಿಕಾರಿ ಆಕೃತಿ ಬನ್ಸಾಲ್, ಹುಬ್ಬಳ್ಳಿ ಗ್ರಾಮೀಣ ತಾಲ್ಲೂಕು ಹೆಚ್ಚುವರಿ ತಹಶೀಲ್ದಾರ್ ಪ್ರಕಾಶ ನಾಶಿ, ವಿಮಾನ ನಿಲ್ದಾಣದ ನಿರ್ದೇಶಕ ಪ್ರಮೋದ ಠಾಕರೆ, ಕ್ಯಾತಿ ಕ್ಲೈಮೇಟ್ ಮಾಡಿಪಿಕೇಶನ್ನ ಕಂಪನಿಯ ಮುಖ್ಯಸ್ಥ ಆಶಿಶ್ ಓದುಗೌಡರ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.