ADVERTISEMENT

ವಾಣಿಜ್ಯ ಬೆಳೆ ಬೆಳೆಯಲು ರೈತರು ಮುಂದಾಗಲಿ: ಶಾಸಕ ಎನ್.ಎಚ್.ಕೋನರಡ್ಡಿ

14ನೇ ಒಣ ಮೆಣಸಿನಕಾಯಿ ಮೇಳಕ್ಕೆ ಶಾಸಕ ಎನ್.ಎಚ್.ಕೋನರಡ್ಡಿ ಚಾಲನೆ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2026, 4:52 IST
Last Updated 7 ಫೆಬ್ರುವರಿ 2026, 4:52 IST
ಹುಬ್ಬಳ್ಳಿಯ ಮೂರುಸಾವಿರ ಮಠದ ಹೈಸ್ಕೂಲ್ ಮೈದಾನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ 14ನೇ ಒಣ ಮೆಣಸಿನಕಾಯಿ ಮೇಳವನ್ನು ಶಾಸಕರಾದ ಎನ್‌.ಎಚ್‌.ಕೋನರಡ್ಡಿ, ಎಂ.ಆರ್.ಪಾಟೀಲ ಉದ್ಘಾಟಿಸಿ, ರೈತರು ತಂದ ಒಣ ಮೆಣಸಿನಕಾಯಿ ವೀಕ್ಷಿಸಿದರು
ಹುಬ್ಬಳ್ಳಿಯ ಮೂರುಸಾವಿರ ಮಠದ ಹೈಸ್ಕೂಲ್ ಮೈದಾನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ 14ನೇ ಒಣ ಮೆಣಸಿನಕಾಯಿ ಮೇಳವನ್ನು ಶಾಸಕರಾದ ಎನ್‌.ಎಚ್‌.ಕೋನರಡ್ಡಿ, ಎಂ.ಆರ್.ಪಾಟೀಲ ಉದ್ಘಾಟಿಸಿ, ರೈತರು ತಂದ ಒಣ ಮೆಣಸಿನಕಾಯಿ ವೀಕ್ಷಿಸಿದರು   

ಹುಬ್ಬಳ್ಳಿ: ‘ರೈತರು ಹೊಸ ತಳಿಯ ಬೆಳೆಗಳನ್ನು ಬೆಳೆಯಬೇಕು. ಅದರಲ್ಲೂ ವಾಣಿಜ್ಯ ಬೆಳೆ ಬೆಳೆಯಲು ಮುಂದಾಗಬೇಕು. ಇದಕ್ಕೆ ಇಲಾಖೆ ಅಧಿಕಾರಿಗಳು ಮಾರ್ಗದರ್ಶನ ನೀಡಬೇಕು’ ಎಂದು ಶಾಸಕ ಎನ್‌.ಎಚ್‌.ಕೋನರಡ್ಡಿ ಹೇಳಿದರು.

ನಗರದ ಮೂರುಸಾವಿರ ಮಠದ ಹೈಸ್ಕೂಲ್ ಮೈದಾನದಲ್ಲಿ ಕರ್ನಾಟಕ ರಾಜ್ಯ ಸಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿ, ತೋಟಗಾರಿಕೆ ಇಲಾಖೆ, ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ, ಅಮರಶಿವ ರೈತ ಉತ್ಪಾದಕ ಸಂಸ್ಥೆ, ಸಂಶಿ (ಕುಂದಗೋಳ) ಹಾಗೂ ಉಳವಾಯೋಗಿ ರೈತ ಉತ್ಪಾದಕ ಸಂಸ್ಥೆಯ ಸಹಯೋಗದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ 14ನೇ ಒಣ ಮೆಣಸಿನಕಾಯಿ ಮೇಳವನ್ನು ಉದ್ಘಾಟಿಸಿ, ಮಾತನಾಡಿದರು.

‘ಬ್ಯಾಡಗಿ ಮೆಣಸಿನಕಾಯಿ ತಳಿಯನ್ನು ನವಲಗುಂದ, ನರಗುಂದ, ಗದಗ, ಕುಂದಗೋಳ, ಬಾಗಲಕೋಟೆ ಸೇರಿದಂತೆ ವಿವಿಧೆಡೆ ಬೆಳೆಯಲಾಗುತ್ತದೆ. ಬಾಗಲಕೋಟೆಯ ತೋಟಗಾರಿಕೆ ವಿಶ್ವವಿದ್ಯಾಲಯ ಹೊಸ ತಳಿಯ ಬೆಳೆಗಳನ್ನು ಸಂಶೋಧಿಸಿದ್ದಾರೆ. ಹೊಸ ತಳಿಗಳು ರೈತರಿಗೆ ತಲುಪಬೇಕು’ ಎಂದರು. 

ADVERTISEMENT

‘ಇತ್ತೀಚಿನ ದಿನಗಳಲ್ಲಿ ಕೆಂಪು ಖಾರವನ್ನು ಹೆಚ್ಚಾಗಿ ಬಳಸಲಾಗುತ್ತಿದೆ. ಕೆಂಪು ಖಾರದ ಬಳಕೆಯಿಂದ ರೋಗಗಳು ಬರುವುದಿಲ್ಲ. ಬೆಂಗಳೂರು, ಮುಂಬೈನಂತಹ ನಗರಗಳಲ್ಲಿ ಸಹ ಕೆಂಪು ಖಾರವನ್ನು ಹೆಚ್ಚಾಗಿ ಬಳಕೆ‌ ಮಾಡುತ್ತಿದ್ದಾರೆ. ವಿಜಯಪುರದಲ್ಲಿ ಕೆಂಪು ಚಟ್ನಿ ಮಾರಾಟ ಅಂಗಡಿಗಳು ಅಧಿಕವಾಗಿವೆ. ಕೇಂದ್ರ ಸರ್ಕಾರವು ರೈತರಿಗೆ ಸಹಾಯಧನ, ಬೆಂಬಲ ಬೆಲೆಯನ್ನು ನೀಡಬೇಕು. ದೇಶದ ಬೆಳೆಗಳು ವಿದೇಶಗಳಿಗೆ ರಫ್ತಾಗುವಂತಾಗಬೇಕು’ ಎಂದು ಹೇಳಿದರು. 

‘ಮೆಣಸಿನಕಾಯಿ ಬೆಳೆ ಬೆಳೆಯಲು ಸಾಕಷ್ಟು ಹಣ ಖರ್ಚಾಗುತ್ತದೆ. ಒಣಮೆಣಸಿನಕಾಯಿ ಬೆಳೆಯುವ ಪ್ರದೇಶ ಕುಂಠಿತವಾಗುತ್ತಿದೆ. ಹೀಗಾಗಿ ಮೆಣಸಿನಕಾಯಿ ಬೆಳೆಯುವ ರೈತರಿಗೆ ಪ್ರೋತ್ಸಾಹ ನೀಡುವುದು‌ ಅಗತ್ಯವಿದೆ. ಹವಾಮಾನಕ್ಕೆ ಅನುಗುಣವಾಗಿ ಬೆಳೆಗಳನ್ನು ಬೆಳೆಯುವಂತೆ ರೈತರನ್ನು ಪ್ರೋತ್ಸಾಹಿಸಬೇಕು‘ ಎಂದರು.

ಶಾಸಕರಾದ ಎಂ.ಆರ್.ಪಾಟೀಲ ಮಾತನಾಡಿ, ‘ಮೆಣಸಿನಕಾಯಿ ಬೆಳೆಗೆ ಉತ್ತಮ‌ ಮಾರುಕಟ್ಟೆ ಕಲ್ಪಿಸಬೇಕಿದೆ. ಒಣ ಮೆಣಸಿನಕಾಯಿ ಬೆಳೆಯುವಂತೆ ರೈತರಿಗೆ ಪ್ರೋತ್ಸಾಹ ನೀಡಬೇಕು. ಬ್ಯಾಡಗಿ ಮೆಣಸಿನಕಾಯಿ ಕುರಿತು ಹೆಚ್ಚಿನ ಪ್ರಚಾರ ಮಾಡಬೇಕಿದೆ. ಬೆಳೆಗಳಿಗೆ ಉತ್ತಮ ವಾತಾವರಣದ ಅಗತ್ಯವಿರುತ್ತದೆ. ಹೊಸ ತಳಿಗಳ ಬಗ್ಗೆ ರೈತರಿಗೆ ತಿಳಿಸಬೇಕು‘ ಎಂದು ಹೇಳಿದರು.

ಕರ್ನಾಟಕ ರಾಜ್ಯ ಸಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಬಿ.ಆರ್.ಗಿರೀಶ, ಪ್ರಧಾನ ವ್ಯವಸ್ಥಾಪಕ ರಾಮಚಂದ್ರ ಮಡಿವಾಳ, ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಕಾಶಿನಾಥ ಭದ್ರಣ್ಣವರ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಅಜಿತಕುಮಾರ, ತೋಟಗಾರಿಕೆ ಇಲಾಖೆಯ ಯೋಗೇಶ ಕಿಲಾರಿ, ಉಮೇಶ ಹೆಬಸೂರ, ಮಾಲತೇಶ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.