ಹುಬ್ಬಳ್ಳಿ: ಇಲ್ಲಿನ ನವ ಅಯೋಧ್ಯಾ ನಗರದಲ್ಲಿ ಮತದಾರರ ಮಾಹಿತಿ ಸಂಗ್ರಹಿಸುತ್ತಿದ್ದ ಆರೋಪದ ಮೇಲೆ, ದೆಹಲಿ ಮೂಲದ ಎಎಸ್ಆರ್ ರಿಸರ್ಚ್ ಆ್ಯಂಡ್ ಕನ್ಸಲ್ಟಿಂಗ್ ಕಂಪನಿಯ ಮೂವರು ಸಿಬ್ಬಂದಿಯನ್ನು ಕಾಂಗ್ರೆಸ್ ಕಾರ್ಯಕರ್ತರು ಹಿಡಿದು ಗುರುವಾರ ಪೊಲೀಸರಿಗೆ ಒಪ್ಪಿಸಿದ್ದಾರೆ.
ಕಾಂಗ್ರೆಸ್ನ ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಜತ ಉಳ್ಳಾಗಡ್ಡಿಮಠ ನೀಡಿದ ದೂರಿನ ಮೇರೆಗೆ, ವೀರೇಶ, ಮಂಜುನಾಥ ಹಾಗೂ ನಿತೀಶ್ ವಿರುದ್ಧ ನಗರದ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಪೊಲೀಸರು ಮೂವರನ್ನು ವಶಕ್ಕೆ ಪಡೆದು ವಿಚಾರಣೆ
ನಡೆಸುತ್ತಿದ್ದಾರೆ. ಕಂಪನಿಯ ಮೇಲಾಧಿಕಾರಿಗಳಿಗೂ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.
‘ಮತದಾರರ ಮಾಹಿತಿ ಸಂಗ್ರಹಿಸಿ, ಜಿಲ್ಲೆಯಲ್ಲಿ 84 ಸಾವಿರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆಯಲಾಗಿದೆ. ಈ ಬಗ್ಗೆ ಪಕ್ಷದಿಂದ ಚುನಾವಣಾ ಆಯುಕ್ತರಿಗೆ ದೂರು ನೀಡಲಾಗುವುದು’ ಎಂದು ಮಹಾನಗರ ಕಾಂಗ್ರೆಸ್ ಅಧ್ಯಕ್ಷ ಅಲ್ತಾಫ ಹಳ್ಳೂರ
ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
‘ಸಮೀಕ್ಷೆಗೆ ನಾವು ಯಾರಿಗೂ ಅನುಮತಿ ಕೊಟ್ಟಿಲ್ಲ. ಪ್ರಕರಣ ಕುರಿತು, ಪರಿಶೀಲನೆ ನಡೆಸಿ ವರದಿ ನೀಡುವಂತೆ ಪಾಲಿಕೆ ಆಯುಕ್ತರಿಗೆ ಸೂಚಿಸಿದ್ದೇನೆ’ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ‘ಪ್ರಜಾವಾಣಿ’ಗೆ
ಪ್ರತಿಕ್ರಿಯಿದರು.
‘ಪ್ರಕರಣ ಕುರಿತು ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸಲಾಗುವುದು’ ಎಂದು ಪೊಲೀಸ್ ಕಮಿಷನರ್ ಲಾಭೂರಾಮ್ ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.