ADVERTISEMENT

ಹುಬ್ಬಳ್ಳಿ ಗಲಭೆ ಪ್ರಕರಣ; ಕಾಂಗ್ರೆಸ್ ಮುಖಂಡರೇ ಪ್ರತ್ಯಕ್ಷ ಸಾಕ್ಷಿ: ಟೆಂಗಿನಕಾಯಿ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2022, 6:36 IST
Last Updated 23 ಏಪ್ರಿಲ್ 2022, 6:36 IST
ಗಲಭೆ ನಡೆದ ಸ್ಥಳಕ್ಕೆ ಶನಿವಾರ ಭೇಟಿ ನೀಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ
ಗಲಭೆ ನಡೆದ ಸ್ಥಳಕ್ಕೆ ಶನಿವಾರ ಭೇಟಿ ನೀಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ   

ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡರೇ ಪ್ರತ್ಯಕ್ಷ ಸಾಕ್ಷಿಯಾಗಿದ್ದು, ಅವರೇ ಪ್ರಕರಣ ದಾಖಲಿಸಿ ತನಿಖೆಗೆ ಸಹಕರಿಸಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಹೇಳಿದರು.

ಗಲಭೆ ನಡೆದ ಸ್ಥಳಕ್ಕೆ ಶನಿವಾರ ಭೇಟಿ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗಲಭೆ ಸಂದರ್ಭದಲ್ಲಿ ಹುಧಾ ಮಹಾನಗರ ಜಿಲ್ಲಾ ಘಟಕದ ಅಧ್ಯಕ್ಷರು ಪೊಲೀಸ್ ಜೀಪ್ ಹತ್ತಿ ಮಾತನಾಡಿದ್ದಾರೆ. ಉದ್ರಿಕ್ತರನ್ನು ನಿಯಂತ್ರಿಸಲು ಜೀಪ್ ಹತ್ತಿದ್ದೆ ಎನ್ನುವ ಅವರೇ, ಪ್ರತ್ಯಕ್ಷ ಸಾಕ್ಷಿಯಾಗಿದ್ದಾರೆ. ಗಲಭೆಯಲ್ಲಿ ಯಾರ್ಯಾರು ಇದ್ದಾರೆ ಎನ್ನುವುದು ಅವರಿಗೆ ಸ್ಪಷ್ಟವಾಗಿ ತಿಳಿದಿದೆ. ಅವರೇ ಪ್ರತ್ಯೇಕ ಪ್ರಕರಣ ದಾಖಲಿಸಿ ಪೊಲೀಸ್ ತನಿಖೆಗೆ ಸಹಕಾರ ನೀಡಬೇಕು ಎಂದು ಒತ್ತಾಯಿಸಿದರು.

ಗಲಭೆಯಲ್ಲಿ ದೇವಸ್ಥಾನ, ಪೊಲೀಸ್ ಠಾಣೆ, ಮನೆಗಳ ಮೇಲೂ ಕಲ್ಲು ತೂರಾಟ ನಡೆದಿದೆ. ಪೊಲೀಸ್ ಜೀಪ್ ಸೇರಿದಂತೆ ಸಾರ್ವಜನಿಕರ ಬೈಕ್‌ಗಳು ಸಹ ಹಾನಿಯಾಗಿವೆ. ಒಂದೂವರೆ ತಾಸಿನಲ್ಲಿ ಇಷ್ಟೆಲ್ಲ ಆಗುತ್ತದೆ ಎಂದರೆ ಇದೊಂದು ಪೂರ್ವ ನಿಯೋಜಿತ ಕೃತ್ಯ. 140 ಮಂದಿಯನ್ನಷ್ಟೇ ಬಂಧಿಸಲಾಗಿದೆ. ಯಾರ್ಯಾರು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಅವರೆಲ್ಲರನ್ನೂ ಬಂಧಿಸಿ, ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದರು.

ADVERTISEMENT

ಶಿವಮೊಗ್ಗ, ಹುಬ್ಬಳ್ಳಿಯಂಥ ಸೂಕ್ಷ್ಮ ಪ್ರದೇಶವನ್ನೇ ದುಷ್ಕರ್ಮಿಗಳು ಗಲಭೆಗೆ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಹುಬ್ಬಳ್ಳಿಯಲ್ಲಿ ಶಾಂತಿ ನೆಲೆಸಬೇಕು. ಶಾಂತಿ ಭಂಗ ಮಾಡುವವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದರು.

ಮುಖಂಡರಾದ ಸಂಜಯ ಕಪಟಕರ, ಲಿಂಗರಾಜ ಪಾಟೀಲ, ನಾರಾಯಣ ಜರತಾಘರ, ದತ್ತಮೂರ್ತಿ‌ ಕುಲಕರ್ಣಿ, ರವಿ ನಾಯ್ಕ, ಲಿಂಗರಾಜ ಪಾಟೀಲ, ಬಸವರಾಜ ಅಮ್ಮಿನಬಾವಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.