ಹುಬ್ಬಳ್ಳಿ: ಕರ್ನಾಟಕಕ್ಕೆ ನೀರು ಕೊಡುವುದಿಲ್ಲ ಎಂದು ಗೋವಾ ವಿಧಾನಸಭಾ ಚುನಾವಣೆ ವೇಳೆ ಅಲ್ಲಿನ ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ಆದರೆ, ರಾಜ್ಯದ ಕಾಂಗ್ರೆಸ್ಸಿಗರು ಮಹದಾಯಿಗಾಗಿ ಪಾದಯಾತ್ರೆ ಮಾಡುತ್ತೇವೆ ಎನ್ನುತ್ತಿದ್ದಾರೆ. ಈ ವಿಚಾರದಲ್ಲಿ ಕಾಂಗ್ರೆಸ್ ದ್ವಂದ್ವ ನಿಲುವು ಹೊಂದಿದೆ ಎಂದು ಶಾಸಕ ಜಗದೀಶ ಶೆಟ್ಟರ್ ಟೀಕಿಸಿದರು.
ಶನಿವಾರ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ’ಮಹದಾಯಿ ವಿಚಾರದಲ್ಲಿ ಕೆಲವು ತಾಂತ್ರಿಕ ಸಮಸ್ಯೆಗಳಿವೆ. ಅವುಗಳನ್ನು ಪರಿಹರಿಸಿದ ನಂತರ ಕಾಮಗಾರಿ ಆರಂಭವಾಗುತ್ತದೆ. ಇದಕ್ಕಾಗಿ ಬಜೆಟ್ನಲ್ಲಿ ಹಣವನ್ನೂ ಮೀಸಲಿಡಲಾಗಿದೆ. ನಿರ್ದಿಷ್ಟ ಗುರಿಯಿಲ್ಲದ ಕಾಂಗ್ರೆಸ್ ಮಹದಾಯಿ ವಿಷಯವನ್ನು ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದೆ‘ ಎಂದರು.
’ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿ ಹಾಗೂ ಪಕ್ಷದ ವರಿಷ್ಠರಿಗೆ ಬಿಟ್ಟವಿಚಾರ. ಸಂಪುಟ ಸೇರುವೆ ಬಗ್ಗೆ ನನ್ನ ನಿಲುವು ಬದಲಾಗುವುದಿಲ್ಲ. ಯಾವುದೇ ಕಾರಣಕ್ಕೂ ಸಂಪುಟ ಸೇರುವುದಿಲ್ಲ. ನನ್ನ ರಾಜಕೀಯ ಅನುಭವದ ಪ್ರಕಾರ ರಾಜ್ಯದಲ್ಲಿ ಅವಧಿಗೆ ಮುನ್ನ ಚುನಾವಣೆ ನಡೆಯುವುದಿಲ್ಲ‘ ಎಂದು ಹೇಳಿದರು.
’ದೇಶದಲ್ಲಿ ಇಬ್ಬರು ಸಿದ್ದುಗಳು ಇದ್ದಾರೆ. ಒಬ್ಬ ಸಿದ್ದು ಪಂಜಾಬ್ನಲ್ಲಿ ಕಾಂಗ್ರೆಸ್ ಹಾಳು ಮಾಡಿದರೆ, ಕರ್ನಾಟಕದಲ್ಲಿ ಸಿದ್ದರಾಮಯ್ಯ ಕಾಂಗ್ರೆಸ್ ಅನ್ನು ಅವನತಿಯತ್ತ ಕೊಂಡೊಯ್ಯುತ್ತಿದ್ದಾರೆ. ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಬಣಗಳು ಬೇರೆ, ಬೇರೆಯಾಗಿವೆ. ಅವರಲ್ಲೇ ಗುಂಪುಗಾರಿಕೆ ಆರಂಭವಾಗಿದೆ. ಭಾರತ ಕಾಂಗ್ರೆಸ್ ಮುಕ್ತವಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ್ದರು. ಅದರಂತೆಯೇ ಈಗಿನ ದೇಶದ ರಾಜಕಾರಣ ಸಾಗುತ್ತಿದೆ‘ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.