ADVERTISEMENT

ಬಿಜೆಪಿ ಮತಗಳ್ಳತನದ ಜಾಗೃತಿ ಮೂಡಿಸಿ: ಎಐಸಿಸಿ ಕಾರ್ಯದರ್ಶಿ ಮಯೂರ್ ಜಯಕುಮಾರ್ ಕರೆ

ಕಾಂಗ್ರೆಸ್ ಕಾರ್ಯಕರ್ತರಿಗೆ ಎಐಸಿಸಿ ಕಾರ್ಯದರ್ಶಿ ಮಯೂರ್ ಜಯಕುಮಾರ್ ಕರೆ

​ಪ್ರಜಾವಾಣಿ ವಾರ್ತೆ
Published 30 ಅಕ್ಟೋಬರ್ 2025, 4:22 IST
Last Updated 30 ಅಕ್ಟೋಬರ್ 2025, 4:22 IST
ಹಳೇ ಹುಬ್ಬಳ್ಳಿಯ ಅಯೋಧ್ಯಾ ಓಣಿಯ ಬಸವೇಶ್ವರ ವೃತ್ತದಲ್ಲಿ ಹುಬ್ಬಳ್ಳಿ –ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ಸಹಿ ಸಂಗ್ರಹ ಅಭಿಯಾನದಲ್ಲಿ ಎಐಸಿಸಿ ರಾಷ್ಟ್ರೀಯ ಕಾರ್ಯದರ್ಶಿ ಮಯೂರ್‌ ಜಯಕುಮಾರ್‌ ಮಾತನಾಡಿದರು. ಶಾಸಕ ಪ್ರಸಾದ ಅಬ್ಬಯ್ಯ, ಮುಖಂಡರು ಹಾಜರಿದ್ದರು
ಹಳೇ ಹುಬ್ಬಳ್ಳಿಯ ಅಯೋಧ್ಯಾ ಓಣಿಯ ಬಸವೇಶ್ವರ ವೃತ್ತದಲ್ಲಿ ಹುಬ್ಬಳ್ಳಿ –ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ಸಹಿ ಸಂಗ್ರಹ ಅಭಿಯಾನದಲ್ಲಿ ಎಐಸಿಸಿ ರಾಷ್ಟ್ರೀಯ ಕಾರ್ಯದರ್ಶಿ ಮಯೂರ್‌ ಜಯಕುಮಾರ್‌ ಮಾತನಾಡಿದರು. ಶಾಸಕ ಪ್ರಸಾದ ಅಬ್ಬಯ್ಯ, ಮುಖಂಡರು ಹಾಜರಿದ್ದರು   
‘ಮತದಾರರ ಹಕ್ಕುಗಳಿಗಾಗಿ ಸಹಿ ಸಂಗ್ರಹ’ ಅಭಿಯಾನ | ಕಾಂಗ್ರೆಸ್ ಕಾರ್ಯಕರ್ತರಿಂದ ಮನೆ ಮನೆ ಭೇಟಿ, ಸಹಿ ಸಂಗ್ರಹ | ಅಭಿಯಾನದಲ್ಲಿ ಶಾಸಕ ಪ್ರಸಾದ ಅಬ್ಬಯ್ಯ, ಮುಖಂಡರು ಭಾಗಿ 

ಹುಬ್ಬಳ್ಳಿ: ‘ಬಿಜೆಪಿಯು ಮತಗಳ್ಳತನ ಮೂಲಕ ಪ್ರಜಾ‍ತಂತ್ರ ವ್ಯವಸ್ಥೆಯನ್ನು ಬುಡುಮೇಲು ಮಾಡುತ್ತಿದ್ದು, ಈ ಬಗ್ಗೆ ಕಾಂಗ್ರೆಸ್‌ ಕಾರ್ಯಕರ್ತರು ಜನರಲ್ಲಿ ಜಾಗೃತಿ ಮೂಡಿಸುವ ಮೂಲಕ ಸಹಿ ಸಂಗ್ರಹ ಅಭಿಯಾನ ನಡೆಸಬೇಕು’ ಎಂದು ಎಐಸಿಸಿ ರಾಷ್ಟ್ರೀಯ ಕಾರ್ಯದರ್ಶಿ ಮಯೂರ್‌ ಜಯಕುಮಾರ್‌ ಹೇಳಿದರು. 

ಹಳೇ ಹುಬ್ಬಳ್ಳಿಯ ಪೂರ್ವ ವಿಧಾನ ಸಭಾ ಕ್ಷೇತ್ರದ ಅಯೋಧ್ಯಾ ಓಣಿಯ ಬಸವೇಶ್ವರ ವೃತ್ತದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯ ಹುಬ್ಬಳ್ಳಿ –ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ‘ಮತದಾರರ ಹಕ್ಕುಗಳಿಗಾಗಿ ಸಹಿ ಸಂಗ್ರಹ’ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ದೇಶಕ್ಕೆ ಸ್ವಾತಂತ್ರ್ಯಬಂದ ದಿನದಿಂದಲೂ ಕಾಂಗ್ರೆಸ್‌ ಸರ್ಕಾರವು ಸಂವಿಧಾನದ ಆಶಯ ಹಾಗೂ ಪ್ರಜಾಪ್ರಭುತ್ವ‌ಕ್ಕೆ ಪೂರಕವಾಗಿ ಕಾರ್ಯ ನಿರ್ವಹಿಸುತ್ತಾ ಬಂದಿದೆ. ಆದರೆ, ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದ ನಂತರ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆಯಾಗುತ್ತಿದೆ. ಸಂವಿಧಾನದ ಆಶಯಗಳನ್ನು ಗಾಳಿಗೆ ತೂರಲಾಗಿದೆ’ ಎಂದು ಆರೋಪಿಸಿದರು. 

ADVERTISEMENT

‘ಕಳೆದ ಲೋಕಸಭಾ ಚುನಾವಣೆ ವೇಳೆಯಲ್ಲಿ ರಾಜ್ಯದ ವಿವಿಧ ಲೋಕಸಭಾ ಕ್ಷೇತ್ರಗಳಲ್ಲಿ ಮತಗಳ್ಳತನ ನಡೆದಿದೆ. ಮಹಾದೇವಪುರದ ಕ್ಷೇತ್ರವೊಂದರಲ್ಲಿಯೇ 1.6 ಲಕ್ಷ ಮತಗಳ್ಳತನ ನಡೆದಿದೆ. ಎಐಸಿಸಿ ನಾಯಕ ರಾಹುಲ್‌ ಗಾಂಧಿ ಅವರು, ಮತಗಳ್ಳತನವನ್ನು ದಾಖಲೆಗಳ  ಸಮೇತ ಬಯಲಿಗೆಳೆದಿದ್ದಾರೆ. ಈ ಬಗ್ಗೆ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ಸಹ ನೀಡಿದ್ದಾರೆ. ಆದರೆ, ಆಯೋಗವು ನಮ್ಮ ನಾಯಕರ ವಿರುದ್ಧವೇ ಆಕ್ಷೇಪ ವ್ಯಕ್ತಪಡಿಸುತ್ತಿದೆ. ಚುನಾವಣಾ ಆಯೋಗವು ಬಿಜೆಪಿಯ ಕೈಗೊಂಬೆಯಾಗಿದೆ’ ಎಂದು ಆರೋಪಿಸಿದರು. 

‘ಕಲಬುರಗಿ ಜಿಲ್ಲೆಯ ಆಳಂದ ಮತಕ್ಷೇತ್ರದಲ್ಲಿಯೂ 6 ಸಾವಿರಕ್ಕೂ ಹೆಚ್ಚು ಮತದಾರರ ಹೆಸರನ್ನು ಅಕ್ರಮವಾಗಿ ಮತದಾರರ ಪಟ್ಟಿಯಿಂದ ಅಳಿಸಲಾಗಿದೆ. ಮತದಾರರು ಮತ ಚಲಾಯಿಸಲು ಬೂತ್‌ಗೆ ಹೋದಾಗ ಮತದಾರರ ಪಟ್ಟಿಯಲ್ಲಿ ಅವರ ಹೆಸರೇ ಇರಲಿಲ್ಲ. ಈ ಬಗ್ಗೆ ಈಗಾಗಲೇ ಎಸ್‌ಐಟಿ ತನಿಖೆ ಕೂಡ ನಡೆಸುತ್ತಿದೆ. ಈ ಎಲ್ಲಾ ಅಂಶಗಳನ್ನು ಕಾಂಗ್ರೆಸ್‌ ಕಾರ್ಯಕರ್ತರು ಒಗ್ಗೂಡಿ ಸಾರ್ವಜನಿಕರ ಗಮನಕ್ಕೆ ತರಬೇಕು’ ಎಂದರು. 

‘ಪ್ರಜಾಪ್ರಭುತ್ವ ಉಳುವಿಗಾಗಿ ದೇಶದಾದ್ಯಂತ ಹೋರಾಟ ನಡೆಸಬೇಕಿದೆ. ಪಕ್ಷದ ಕಾರ್ಯಕರ್ತರು ಪ್ರತಿ ಮನೆಗೂ ಭೇಟಿ ನೀಡಿ, ಜನರಲ್ಲಿ ಈ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ನರೇಂದ್ರ ಮೋದಿ ಅವರ ಹಿಟ್ಲರ್‌ ಆಡಳಿತವನ್ನು ಕೊನೆಗಾಣಿಸಲು ಪಣತೊಡಬೇಕು’ ಎಂದರು. 

ಪೂರ್ವ ವಿಧಾನಸಭಾ ಕ್ಷೇತ್ರದ ಶಾಸಕ ಪ್ರಸಾದ್ ಅಬ್ಬಯ್ಯ ಅವರು, ’ಕರ್ನಾಟಕ ಸೇರಿದಂತೆ ಬಿಹಾರ, ಹರಿಯಾಣದಲ್ಲಿಯೂ ಭಾರೀ ಪ್ರಮಾಣದಲ್ಲಿ ಮತದಾರರ ಹೆಸರನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ. ಕೆಲ ಮತಕ್ಷೇತ್ರಗಳಲ್ಲಿ ವ್ಯವಸ್ಥಿತವಾಗಿ ಮತಗಳ್ಳತನ ನಡೆದಿದೆ. ಈ ಬಗ್ಗೆ ಕೇಂದ್ರ ಚುನಾವಣಾ ಆಯೋಗಕ್ಕೆ ಗಮನಕ್ಕೆ ಬಂದಿದ್ದರೂ ಕಂಡು ಕಾಣದಂತೆ ವರ್ತಿಸುತ್ತಿದೆ. ಆಯೋಗವು ಕೇಂದ್ರ ಸರ್ಕಾರದ ಪರವಾಗಿಯೇ ಕಾರ್ಯ ನಿರ್ವಹಿಸುತ್ತಿದೆ’ ಎಂದು ಆರೋ‍ಪಿಸಿದರು. 

‘ಬಿಜೆಪಿಯು ದೇಶದೆಲ್ಲೆಡೆ ಮಾಡಿರುವ ಮತಗಳ್ಳತನದ ವಿರುದ್ಧವಾಗಿ ಕಾಂಗ್ರೆಸ್‌ ಪಕ್ಷದ ವತಿಯಿಂದ ‘ವೋಟ್‌ ಚೋರ್‌– ಗದ್ದಿ ಚೋಡ್‌’ ಎಂಬ ಹೆಸರಿನಲ್ಲಿ ಸಹಿ ಸಂಗ್ರಹ ಅಭಿಯಾನ ಹಮ್ಮಿಕೊಳ್ಳುವ ಮೂಲಕ ಜನತಾ ನ್ಯಾಯಾಲಯದ ಬಳಿ ತೆರಳಿದ್ದೇವೆ. ಸಂವಿಧಾನ ಉಳಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು’ ಎಂದು ಮನವಿ ಮಾಡಿದರು.

ಹುಬ್ಬಳ್ಳಿ –ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ತಾಫ್‌ ಹಳ್ಳೂರ, ಅಲ್ತಾಪ್‌ ಕಿತ್ತೂರು, ಮುಖಂಡರಾದ  ಎ.ಎಂ.ಹಿಂಡಸಗೇರಿ, ಇಮ್ರಾನ್‌ ಹುಸೇನ ಎಲಿಗಾರ, ಸುಧಾ ಮಣಿಕುಂಟ್ಲ, ಸದಾನಂದ ಡಂಗನವರ ಸೇರಿದಂತೆ ಕಾಂಗ್ರೆಸ್‌ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲೆಯ ಪ್ರತಿ ಮನೆಗೆ ಭೇಟಿ ನೀಡುವ ಮೂಲಕ ಪ್ರಜಾಪ್ರಭುತ್ವ ವಿರೋಧಿ ಬಿಜೆಪಿ ಸರ್ಕಾರದ ವಿರುದ್ಧ ಸಾರ್ವಜನಿಕರಿಂದ 1 ಕೋಟಿ ಸಹಿ ಸಂಗ್ರಹ ಮಾಡಬೇಕು
ಮಯೂರ್‌ ಜಯಕುಮಾರ್‌ ಎಐಸಿಸಿ ರಾಷ್ಟ್ರೀಯ ಕಾರ್ಯದರ್ಶಿ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.