ಹುಬ್ಬಳ್ಳಿ: ಕೃಷಿ ಕಾಯ್ದೆಗಳ ರದ್ದತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಯುತ್ತಿರುವ ಹೋರಾಟಕ್ಕೆ ಆರು ತಿಂಗಳು ತುಂಬಿದ ಹಿನ್ನೆಲೆಯಲ್ಲಿ ನಗರದಲ್ಲಿ ಬುಧವಾರ ಕಳಸಾ ಬಂಡೂರಿ ಹೋರಾಟ ಸಮಿತಿ ವತಿಯಿಂದ ಕರಾಳ ದಿನ ಆಚರಿಸಲಾಯಿತು.
ರೈತರ ಹೋರಾಟ ಹಾಗೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಜನ ವಿರೋಧಿ ಅಡಳಿತಕ್ಕೆ ಏಳು ವರ್ಷವಾದ ಕಾರಣದಿಂದ ಸಂಯುಕ್ತ ಕಿಸಾನ್ ಮೋರ್ಚಾ ಮೇರೆಗೆ ಕರಾಳ ದಿನ ಆಚರಿಸಲಾಗಿದೆ. ವಾಹನಗಳ ಮೇಲೆ ಕಪ್ಪು ಬಾವುಟ ಹಾರಿಸುವುದು, ಕಪ್ಪು ಪಟ್ಟಿ, ಕಪ್ಪು ಮಾಸ್ಕ್, ಕಪ್ಪು ಬಟ್ಟೆ ಧರಿಸುವ ಮೂಲಕ ಹೋರಾಟ ಸಕ್ರಿಯವಾಗಿ ಇರುವಂತೆ ಮಾಡುವುದು ನಮ್ಮ ಉದ್ದೇಶವಾಗಿದೆ ಎಂದು ಸಮಿತಿ ಅಧ್ಯಕ್ಷ ಸಿದ್ದಣ್ಣ ತೇಜಿ ಹೇಳಿದರು.
ಮನವಿ ಪತ್ರವನ್ನು ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರ್ ಪ್ರಕಾಶ ನಾಶಿ ಅವರಿಗೆ ಸಲ್ಲಿಸಲಾಯಿತು.
ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಶಾಸನ ಬದ್ಧ ಖಾತರಿಪಡಿಸುವ ಕಾಯ್ದೆ ಜಾರಿಗೆ ಬರಬೇಕು, ಆಮ್ಲಜನಕ ಕೊರತೆಯಿಂದ ಚಾಮರಾಜನಗರ ಹಾಗೂ ಇತರ ಜಿಲ್ಲೆಗಳಲ್ಲಿ ಮೃತಪಟ್ಟ ರೋಗಿಗಳಿಗೆ ಕನಿಷ್ಠ ₹10 ಲಕ್ಷ ಪರಿಹಾರ ಕೊಡಬೇಕು ಎಂದು ಸಮಿತಿ ಪದಾಧಿಕಾರಿಗಳು ಆಗ್ರಹಿಸಿದರು. ಸಮಿತಿ ಸಂಚಾಲಕರಾದ ಆರ್. ಲಕ್ಷ್ಮಣ್, ರಬ್ಬಾನಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.