ADVERTISEMENT

ಪೌರಕಾರ್ಮಿಕರ ಮನೆ ನಿರ್ಮಾಣ; ಸ್ಥಳ ತನಿಖೆಗೆ ಆದೇಶ

ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

​ಪ್ರಜಾವಾಣಿ ವಾರ್ತೆ
Published 29 ಜೂನ್ 2022, 2:17 IST
Last Updated 29 ಜೂನ್ 2022, 2:17 IST
ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಸಭಾಭವನದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಗುರುದತ್ತ ಹೆಗಡೆ ಮಾತನಾಡಿದರು. ಡಾ. ಬಿ.ಗೋಪಾಲಕೃಷ್ಣ, ಪ್ರಸಾದ ಅಬ್ಬಯ್ಯ ಇದ್ದಾರೆ
ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಸಭಾಭವನದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಗುರುದತ್ತ ಹೆಗಡೆ ಮಾತನಾಡಿದರು. ಡಾ. ಬಿ.ಗೋಪಾಲಕೃಷ್ಣ, ಪ್ರಸಾದ ಅಬ್ಬಯ್ಯ ಇದ್ದಾರೆ   

ಧಾರವಾಡ: ‘ಅಳ್ನಾವರ ಪಟ್ಟಣ ಪಂಚಾಯ್ತಿಯಿಂದ ನಿರ್ಮಿಸಲಾಗುತ್ತಿರುವ ಪೌರಕಾರ್ಮಿಕರ ಮನೆಗಳ ಕಾಮಗಾರಿಗುಣಮಟ್ಟದ ಬಗ್ಗೆ ಆರೋಪಗಳಿವೆ. ಜಿಲ್ಲಾ ನಗರಾಭಿವೃದ್ಧಿ ಕೋಶದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಸ್ಥಳ ಪರಿಶೀಲನೆ ನಡೆಸಿ ವರದಿ ಸಲ್ಲಿಸಬೇಕು’ ಎಂದುಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಸಫಾಯಿ ಕರ್ಮಚಾರಿಗಳ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆಯ 432 ಪೌರಕಾರ್ಮಿಕರ ಭವಿಷ್ಯನಿಧಿ ಹಣ ಪಾವತಿಯು ಆಧಾರ್ ಸೀಡಿಂಗ್ ಕಾರಣದಿಂದ ವಿಳಂಬವಾಗಿದೆ. ಒಂದು ವಾರದೊಳಗೆ ಸಮಸ್ಯೆಗೆ ಪರಿಹಾರ ಒದಗಿಸಬೇಕು’ ಎಂದು ಸೂಚಿಸಿದರು.

ADVERTISEMENT

‘ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮವು ಐರಾವತ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಸಾಲ ಸೌಲಭ್ಯ ಒದಗಿಸಲು ವಿಳಂಬ ಮಾಡಿದ ಜಿಲ್ಲಾ ವ್ಯವಸ್ಥಾಪಕರ ವಿರುದ್ಧ ಕ್ರಮ ಕೈಗೊಳ್ಳಲು ಕೋರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆಯಲಾಗುವುದು. ಡಿಮ್ಹಾನ್ಸ್ ಸಂಸ್ಥೆಯಲ್ಲಿ ಸಫಾಯಿ ಕರ್ಮಚಾರಿಗಳಿಗೆ ಒದಗಿಸುತ್ತಿರುವ ಸೌಲಭ್ಯಗಳ ಕುರಿತು ನಿರ್ದೇಶಕರಿಂದ ವರದಿ ತರಿಸಿಕೊಳ್ಳಲಾಗುವುದು’ ಎಂದರು.

ಶಾಸಕ ಪ್ರಸಾದ ಅಬ್ಬಯ್ಯ ಮಾತನಾಡಿ, ‘ಹುಬ್ಬಳ್ಳಿ ರಾಜಗೋಪಾಲ ನಗರವನ್ನು ಕೊಳಚೆಪ್ರದೇಶ ಎಂದು ಘೋಷಿಸಿ ಮೂಲಸೌಕರ್ಯ ಕಲ್ಪಿಸಬೇಕು. ಈ ಕುರಿತು ರೈಲ್ವೆಯ ಉನ್ನತ ಮಟ್ಟದ ಸಭೆ ನಡೆಸಲು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮನವಿ ಮಾಡಲಾಗುವುದು’ ಎಂದರು.

ನೋಟಿಸ್‌ ಜಾರಿ: ‘ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ, ಜಿಲ್ಲಾ ಸಫಾಯಿ ಕರ್ಮಚಾರಿ ಜಾಗೃತಿ ಸಮಿತಿ ಹಾಗೂ ಎಸ್‌ಸಿಎಸ್‌ಎ ಮತ್ತು ಟಿಎಸ್‌ಎ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಗಳಿಗೆ ಪೂರ್ವಾನುಮತಿ ಪಡೆಯದೇ ಗೈರು ಹಾಜರಾದ ಅಧಿಕಾರಿಗಳಿಗೆ ನೊಟೀಸ್ ಜಾರಿ ಮಾಡಲಾಗುವುದು. ಗಂಭೀರವಾದಚರ್ಚೆಗಳು ನಡೆಯುವ ಸಭೆಗೆ ಹಾಜರಾಗದೇ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ವಹಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದರು.

ಸಭೆಯಲ್ಲಿ ಸಮಿತಿಯ ಸದಸ್ಯರಾದ ರೇಣುಕಪ್ಪ ಕೆಲೂರು, ಹನಮಂತಪ್ಪ ಮಾಲಪಲ್ಲಿ, ಭೀಮರಾವ ಸವಣೂರು, ವಿದ್ಯಾ ನರಸಪ್ಪನವರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.