ಹುಬ್ಬಳ್ಳಿ: ಹೆಸರು ಮತ್ತು ಉದ್ದು ಖರೀದಿಗೆ ಸಂಬಂಧಿಸಿದಂತೆ ಸೆಪ್ಟೆಂಬರ್ 3 ರಿಂದ ಜಿಲ್ಲೆಯಲ್ಲಿ ಬೆಂಬಲ ಬೆಲೆ ಖರೀದಿ ಕೇಂದ್ರ ಆರಂಭಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ಹೇಳಿದರು.
ತಾಲ್ಲೂಕಿನ ಬೆಣ್ಣಿಹಳ್ಳ ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ನೀಡಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಈಗಾಗಲೇ ಹೆಸರು ಮತ್ತು ಉದ್ದು ಬೆಳೆಯನ್ನು ರೈತರು ಕಟಾವು ಮಾಡಿ ಮಾರಾಟಕ್ಕೆ ಮುಂದಾಗುತ್ತಿದ್ದಾರೆ. ಕೇಂದ್ರ ಸರ್ಕಾರವು ಬೆಂಬಲ ಬೆಲೆ ಖರೀದಿ ಕೇಂದ್ರಕ್ಕೆ ಅನುಮೋದನೆ ಕೊಟ್ಟಿದೆ. ಈ ದಿಸೆಯಲ್ಲಿ ಶೀಘ್ರದಲ್ಲೇ ಕೇಂದ್ರ ಆರಂಭಿಸಲಾಗುವುದು ಎಂದರು.
ಶೀಘ್ರ ಪರಿಹಾರ: ತಾರಿಹಾಳ ಕೈಗಾರಿಕಾ ಪ್ರದೇಶದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೃತರಾದ ಕುಟುಂಬಗಳಿಗೆ ತಲಾ ₹5 ಲಕ್ಷ ಪರಿಹಾರವನ್ನು ಸರ್ಕಾರ ಘೋಷಣೆ ಮಾಡಿತ್ತು. ಈ ಬಗ್ಗೆ ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ ಖುದ್ದಾಗಿ ಚರ್ಚಿಸಿದ್ದೇನೆ. ಈ ಬಗ್ಗೆ ಸುಳ್ಳು ಹೇಳುವ ಅವಶ್ಯಕತೆ ನಮಗಿಲ್ಲ. ಆದಷ್ಟು ಬೇಗ ಪರಿಹಾರ ಒದಗಿಸುವ ಕೆಲಸವನ್ನು ಮಾಡಲಾಗುವುದು ಎಂದು ಭರವಸೆ ನೀಡಿದರು.
ಎರಡು ದಿನಗಳ ಹಿಂದೆ ಬೆಣ್ಣೆಹಳ್ಳ ಪ್ರವಾಹದಿಂದ ಜಲಾವೃತಗೊಂಡಿದ್ದ ರಸ್ತೆ ದಾಟುವಾಗ ನೀರುಪಾಲಾದ ಬ್ಯಾಹಟ್ಟಿಯ ಆನಂದ ಹಿರೇಗೌಡ್ರ ಅವರ ಶವದ ಶೋಧ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಇಂದು ಅವರ ಕುಟುಂಬವನ್ನು ಭೇಟಿ ಮಾಡಿ, ಪೋಷಕರಿಗೆ ಸಾಂತ್ವನ ಹೇಳಿದ್ದೇನೆ. ಶವ ಪತ್ತೆಯಾದ ನಂತರ ಸರ್ಕಾರದಿಂದ ಅವರ ಕುಟುಂಬಕ್ಕೆ ಪರಿಹಾರ ಒದಗಿಸಲಾಗುವುದು. ಬೆಳೆಹಾನಿ ಸಮೀಕ್ಷೆ ನಡೆಸಿ ರೈತರಿಗೆ ಪರಿಹಾರ ನೀಡಲಾಗುವುದು ಎಂದು ಹೇಳಿದರು.
ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ, ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರ್ ಪ್ರಕಾಶ ನಾಶಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.