ಹುಬ್ಬಳ್ಳಿ: ಮುಖ್ಯಮಂತ್ರಿಯಾಗಬೇಕು ಎನ್ನುವ ಆಸೆಯಿಂದ ಎಂ.ಬಿ. ಪಾಟೀಲ ಹಾಗೂ ಡಿ.ಕೆ. ಶಿವಕುಮಾರ್ ಉಪಚುನಾವಣೆಯ ಉಸ್ತುವಾರಿ ವಹಿಸಿಕೊಂಡಿದ್ದಾರೆ. ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಲು ತಲಾ ₹ 50 ಕೋಟಿ ‘ಬಂಡವಾಳ’ ಹೂಡಿಕೆ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಆರೋಪಿಸಿದರು.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ಕುಂದಗೋಳ ಕ್ಷೇತ್ರದಲ್ಲಿ ಹಣ ಹಂಚಲು ಶಿವಕುಮಾರ್ ಬೆಂಗಳೂರಿನಿಂದ 500 ಜನ ಬೆಂಬಲಿಗರನ್ನು ಕರೆದುಕೊಂಡು ಬಂದಿದ್ದಾರೆ. ಉಸ್ತುವಾರಿ ವಹಿಸಿಕೊಂಡ ಮೇಲೆ ಅವರು ಕ್ಷೇತ್ರದ ಅಭಿವೃದ್ಧಿ ಬಗ್ಗೆ ಏನೂ ಮಾತನಾಡಿಲ್ಲ. ಶಿವಕುಮಾರ್ ಜಲಸಂಪನ್ಮೂಲ ಸಚಿವರಲ್ಲ; ಭ್ರಷ್ಟಾಚಾರ ಸಂಪನ್ಮೂಲ ಸಚಿವ’ ಎಂದು ಟೀಕಿಸಿದರು.
‘ಮೂರು ವರ್ಷಗಳ ಹಿಂದೆ ಹರಕುಣಿಯಲ್ಲಿ ನಿರಂತರ ಜ್ಯೋತಿ ಯೋಜನೆಗೆ ಶಿವಕುಮಾರ್ ಚಾಲನೆ ನೀಡಿದ್ದರು. ಈಗ ಆ ಗ್ರಾಮದಲ್ಲಿ ಕತ್ತಲು ಕವಿದಿದೆ. ಶಿವಕುಮಾರ್ ಕಾಗದದ ಮೇಲಿನ ಹುಲಿಯಷ್ಟೇ. ಅವರ ಆಟ ಇಲ್ಲಿ ನಡೆಯುವುದಿಲ್ಲ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.