ಹುಬ್ಬಳ್ಳಿ: ಶಿಗ್ಗಾಂವ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷದ ಟಿಕೆಟ್ ಪಡೆಯುವ ಸಂಬಂಧ ಆಕಾಂಕ್ಷಿಗಳು ಹಾಗೂ ಕ್ಷೇತ್ರದ ಪ್ರಮುಖ ನಾಯಕರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಮಂಗಳವಾರ ಇಲ್ಲಿನ ಪ್ರವಾಸಿ ಮಂದಿರದಲ್ಲಿ ಭೇಟಿಯಾಗಿ, ಚರ್ಚಿಸಿದರು.
‘ಈ ಕ್ಷೇತ್ರದಲ್ಲಿ ಕಳೆದ ಚುನಾವಣೆಯಲ್ಲಿ ಸ್ವಲ್ಪ ಮತಗಳ ಅಂತರದಿಂದ ಕಾಂಗ್ರೆಸ್ ಸೋತಿದೆ. ಈ ಸಲ ಗೆಲ್ಲಲೇಬಕು. ಪಕ್ಷದ ಕಾರ್ಯಕರ್ತರು, ಮುಖಂಡರು ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು. ಯಾವ ಅಭ್ಯರ್ಥಿ ಸೂಕ್ತ ಎನ್ನುವುದನ್ನು ಸಮೀಕ್ಷೆ ನಡೆಸಿ, ಅಂತಿಮಗೊಳಿಸಲಾಗುವುದು’ ಎಂದು ಡಿ.ಕೆ. ಶಿವಕುಮಾರ್ ಸೂಚನೆ ನೀಡಿದರೆಂದು ಪಕ್ಷದ ಮುಖಂಡರು ತಿಳಿಸಿದರು.
ಆಕಾಂಕ್ಷಿಗಳು ಭಾಗಿ:
ಟಿಕೆಟ್ ಆಕಾಂಕ್ಷಿಗಳಾದ ಅಜ್ಜಂಪೀರ ಖಾದ್ರಿ, ಪಠಾಣ, ರಾಜೇಶ್ವರಿ ಪಾಟೀಲ, ನೂರ ಅಹ್ಮದ ಮಾಳಗಿ, ಪ್ರೇಮಾ ಪಾಟೀಲ, ಎಸ್.ಆರ್. ಪಾಟೀಲ, ಇತರರು ಭಾಗವಹಿಸಿದ್ದರು.
ನವಲಗುಂದ ಶಾಸಕ ಎನ್.ಎಚ್. ಕೋನರಡ್ಡಿ, ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣವರ, ಹಿರೇಕೆರೂರು ಶಾಸಕ ಯು.ಬಿ.ಬಣಕಾರ, ಸಂಜೀವಕುಮಾರ ನಿರಲಗಿ, ಶಿಗ್ಗಾಂವ ಬ್ಲಾಕ್ ಅಧ್ಯಕ್ಷ ಎಂ.ಎಂ. ಮುಲ್ಲಾ, ಹುಬ್ಬಳ್ಳಿ– ಧಾರವಾಡ ಮಹಾನಗರ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಅಲ್ತಾಫ್ ಹಳ್ಳೂರ, ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ಅನಿಲಕುಮಾರ ಪಾಟೀಲ, ಇತರರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.