ADVERTISEMENT

ಲಸಿಕೆ ಪಡೆಯಲು ಹಿಂಜರಿಕೆಗೆ ಬೇಡ; ಸಚಿವ ಜಗದೀಶ ಶೆಟ್ಟರ್ ಕರೆ

ಕೋವಿಡ್ ಲಸಿಕೆ ಮಹಾಮೇಳಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 21 ಜೂನ್ 2021, 8:04 IST
Last Updated 21 ಜೂನ್ 2021, 8:04 IST
ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿರುವ ಸಿ.ಎ.ಆರ್ ಮೈದಾನದಲ್ಲಿ ಸೋಮವಾರ ಕೋವಿಡ್ ಲಸಿಕೆ ಮಹಾಮೇಳಕ್ಕೆ ಚಾಲನೆ ನೀಡಲಾಯಿತು. ಸಚಿವ ಜಗದೀಶ ಶೆಟ್ಟರ್, ವಿಧಾನ ಪರಿಷತ್ ಸದಸ್ಯ, ಜಿಲ್ಲಾಧಿಕಾರಿ ನಿತೇಶ ಪಾಟೀಲ, ಪೊಲೀಸ್ ಕಮಿಷನರ್ ಲಾಬೂರಾಮ್, ಎಸ್ಪಿ ಪಿ. ಕೃಷ್ಣಕಾಂತ್ ಇದ್ದಾರೆ
ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿರುವ ಸಿ.ಎ.ಆರ್ ಮೈದಾನದಲ್ಲಿ ಸೋಮವಾರ ಕೋವಿಡ್ ಲಸಿಕೆ ಮಹಾಮೇಳಕ್ಕೆ ಚಾಲನೆ ನೀಡಲಾಯಿತು. ಸಚಿವ ಜಗದೀಶ ಶೆಟ್ಟರ್, ವಿಧಾನ ಪರಿಷತ್ ಸದಸ್ಯ, ಜಿಲ್ಲಾಧಿಕಾರಿ ನಿತೇಶ ಪಾಟೀಲ, ಪೊಲೀಸ್ ಕಮಿಷನರ್ ಲಾಬೂರಾಮ್, ಎಸ್ಪಿ ಪಿ. ಕೃಷ್ಣಕಾಂತ್ ಇದ್ದಾರೆ   

ಹುಬ್ಬಳ್ಳಿ: ‘ಕೋವಿಡ್‌ನಿಂದ ರಕ್ಷಣೆ ಪಡೆಯಲು ಲಸಿಕೆಯೊಂದೇ ದಾರಿ. ಹಾಗಾಗಿ, ದೇಶದಾದ್ಯಂತ ಉಚಿತವಾಗಿ ಲಸಿಕೆ ನೀಡುವ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಜನ ಲಸಿಕೆಗೆ ಪಡೆಯಲು ಹಿಂಜರಿಯಬಾರದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಹೇಳಿದರು.

ನಗರದ ಕಾರವಾರ ರಸ್ತೆಯಲ್ಲಿರುವ ಸಿ.ಎ.ಆರ್ ಮೈದಾನದಲ್ಲಿ ಸೋಮವಾರಕೋವಿಡ್ ಲಸಿಕೆ ಮಹಾಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ಆರಂಭದಲ್ಲಿ ಲಸಿಕೆ ಪಡೆಯಲು ಜನ ಹಿಂದೇಟ ಹಾಕಿದರು. ಲಸಿಕೆ ವಿರುದ್ಧ ನಡೆದ ಅಪಪ್ರಚಾರವೂ ಇದಕ್ಕೆ ಕಾರಣ. ಆದರೆ, ಎರಡನೇ ಅಲೆಯಿಂದ ಸಂಭವಿಸಿದ ಅನಾಹುತದಿಂದ ಎಲ್ಲರಿಗೂ ಲಸಿಕೆಯ ಮಹತ್ವ ಗೊತ್ತಾಗಿದೆ’ ಎಂದರು.

‘ಜಿಲ್ಲೆಯಲ್ಲಿ ಆರಂಭದಲ್ಲಿ ಕೋವಿಡ್ ಪಾಸಿಟಿವಿಟಿ ಶೇ 30ಕ್ಕಿಂತ ಹೆಚ್ಚು ಇತ್ತು. ಈಗ ಶೇ 5ಕ್ಕಿಂತಲೂ ಕಮ್ಮಿ ಇದೆ. ಹಾಗಾಗಿ, ಸರ್ಕಾರ ಲಾಕ್‌ಡೌನ್ ಸಡಿಲಿಕೆ ಮಾಡಿದೆ. ಆದರೂ, ಜನ ಮೈಮರೆಯದೆ ಕೋವಿಡ್ ನಿಯಮಗಳನ್ನು ಪಾಲಿಸಬೇಕು. ಮಾಸ್ಕ್‌ ಧರಿಸಿ, ಅಂತರ ಪಾಲಿಸಬೇಕು’ ಎಂದು ಸಲಹೆ ನೀಡಿದರು.

ADVERTISEMENT

ಜಿಲ್ಲಾಧಿಕಾರಿ ನಿತೇಶ ಪಾಟೀಲ ಮಾತನಾಡಿ, ‘ಜಿಲ್ಲೆಯಾದ್ಯಂತ 201 ಕೇಂದ್ರಗಳಲ್ಲಿ ಲಸಿಕೆ ಅಭಿಯಾನ ಕೈಗೊಳ್ಳಲಾಗಿದೆ. 18ರಿಂದ 45 ವರ್ಷದೊಳಗಿನ ಮುಂಚೂಣಿ ಕಾರ್ಯಕರ್ತರು ಹಾಗೂ ಅವರ ಕುಟುಂಬದವರಿಗೆ ಆದ್ಯತೆ ಮೇರೆಗೆ ಲಸಿಕೆ ನೀಡಲಾಗುತ್ತಿದೆ. ಇಂದು 25 ಸಾವಿರಕ್ಕೂ ಹೆಚ್ಚು ಮಂದಿಗೆ ಲಸಿಕೆ ಹಾಕುವ ಗುರಿ ಇದ್ದು, ಎರಡು ದಿನದೊಳಗೆ ಜಿಲ್ಲೆಯಲ್ಲಿ 50 ಸಾವಿರ ಲಸಿಕೆ ನೀಡಲಾಗುವುದು’ ಎಂದು ಹೇಳಿದರು.

3ನೇ ಅಲೆ ಎದುರಿಸಲು ಸಿದ್ಧತೆ:‘ಮೂರನೇ ಅಲೆ ಎದುರಿಸಲು ಜಿಲ್ಲೆಯ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿರುವ ವೆಂಟಿಲೇಟರ್, ಐಸಿಯು, ಆಕ್ಸಿಜನ್ ಬೆಡ್ ಸೇರಿದಂತೆ ವಿವಿಧ ಚಿಕಿತ್ಸಾ ಸೌಲಭ್ಯಗಳ ಪಟ್ಟಿ ಮಾಡಿಕೊಂಡು ಸಿದ್ಧತೆ ಮಾಡಿಕೊಳ್ಳಲಾಗಿದೆ. ಧಾರವಾಡದ ಜಿಲ್ಲಾಸ್ಪತ್ರೆಯಲ್ಲಿರುವಂತೆ ಹುಬ್ಬಳ್ಳಿಯ ಕಿಮ್ಸ್‌ನಲ್ಲೂ ಎಂಸಿಎಚ್ ಆಸ್ಪತ್ರೆ ಆರಂಭಕ್ಕೆ ಸಿದ್ಧತೆ ನಡೆದಿದೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

500ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಕುಟುಂಬದ ಸದಸ್ಯರಿಗೆ ಲಸಿಕೆ ನೀಡಲಾಯಿತು.

ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್,ಪೊಲೀಸ್ ಕಮಿಷನರ್ ಲಾಬೂರಾಮ್,ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ಕೃಷ್ಣಕಾಂತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಯಶವಂತ ಮದೀನಕರ, ಜಿಲ್ಲಾ ಆರ್.ಸಿ.ಎಚ್.ಒ ಡಾ.ಎಸ್.ಎಂ. ಹೊನಕೇರಿ‌ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.