ಹುಬ್ಬಳ್ಳಿ: ತಾಲ್ಲೂಕಿನ ಕುಸುಗಲ್ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಗ್ರಾಮ ಪಂಚಾಯ್ತಿ ಮತ್ತು ಕೆರೆ ಅಭಿವೃದ್ಧಿ ಸಮಿತಿಯ ಸಹಯೋಗದಲ್ಲಿ ಜೋಡಗೆರೆ ಹೂಳೆತ್ತುವ ಕಾರ್ಯಕ್ಕೆ ಶುಕ್ರವಾರ ಶಾಸಕ ಶಂಕರಪಾಟೀಲ ಮುನೇನಕೊಪ್ಪ ಭೂಮಿಪೂಜೆ ನೆರವೇರಿಸಿದರು.
ಬಳಿಕ ಮಾತನಾಡಿದ ಅವರು, ‘ಅಂತರ್ಜಲ ಮಟ್ಟ ನಿರಂತರವಾಗಿ ಕುಸಿಯುತ್ತಿದ್ದು, ನೀರಿನ ಬಳಕೆಯೂ ಹೆಚ್ಚಾಗುತ್ತಿದೆ. ಆದ್ದರಿಂದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಕೆರೆಗೆ ಮರುಜೀವ ಕೊಡುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಗ್ರಾಮಾಭಿವೃದ್ಧಿ ಯೋಜನೆಯ ಧಾರವಾಡ ಪ್ರಾದೇಶಿಕ ನಿರ್ದೇಶಕ ದುಗ್ಗೇಗೌಡ ಮಾತನಾಡಿ ‘ಕೆರೆಗೆ ಮರು ಜೀವ ನೀಡುವುದರಿಂದ ಜನರಿಗೆ ಹಾಗೂ ಜಾನುವಾರುಗಳಿಗೆ ಅನುಕೂಲವಾಗುತ್ತದೆ’ ಎಂದರು.
ಬ್ಯಾಹಟ್ಟಿಯ ಮರುಳಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಯೋಜನೆಯ ಜಿಲ್ಲಾ ನಿರ್ದೇಶಕ ಸುರೇಶ ಎಂ., ತಾಲ್ಲೂಕು ಯೋಜನಾಧಿಕಾರಿ ಮಂಜುನಾಥ ನಾಯ್ಕ, ಕೃಷಿ ಅಧಿಕಾರಿ ಸುರೇಶ ಹೆಗ್ಗಡೆ, ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಶಕೀರಾಬಾನು ಹುಬ್ಬಳ್ಳಿ, ಉಪಾಧ್ಯಕ್ಷೆ ಫಕ್ಕೀರವ್ವ ಡಾಲಾಯತರ, ತಾಲ್ಲೂಕು ಪಂಚಾಯ್ತಿ ಸದಸ್ಯೆ ದಾವಲಬಿ ಮಿರ್ಜಾನವರ, ಹುಬ್ಬಳ್ಳಿ ಎಪಿಎಂಸಿ ಸದಸ್ಯ ಶಂಕರಗೌಡ ಪಾಟೀಲ ಮತ್ತು ವಿನಾಯಕ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.