ಹುಬ್ಬಳ್ಳಿ: ‘ಸರ್ಕಾರಿ ಶಾಲಾ–ಕಾಲೇಜುಗಳಿಗೆ ಮೂಲಸೌಕರ್ಯಕ್ಕೆ ಹೆಚ್ಚಿನ ಒತ್ತು ನೀಡಿ, ಉನ್ನತ ದರ್ಜೆಗೆ ಏರಿಸಲಾಗುತ್ತಿದೆ. ಖಾಸಗಿಯವರಿಗೆ ಪೈಪೋಟಿ ನೀಡುವ ಮಟ್ಟಕ್ಕೆ ಸರ್ಕಾರಿ ಶಾಲಾ–ಕಾಲೇಜುಗಳು ಅಭಿವೃದ್ಧಿಯಾಗಿವೆ’ ಎಂದು ಶಾಸಕ ಜಗದೀಶ ಶೆಟ್ಟರ್ ಹೇಳಿದರು.
ಆದರ್ಶನಗರದ ಕನ್ನಡ ಭವನದಲ್ಲಿ ಭಾನುವಾರ ಶಾಸಕರ ಅನುದಾನದಡಿ ಸರ್ಕಾರಿ ಪ್ರಾಥಮಿಕ ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಕಂಪ್ಯೂಟರ್, ಗ್ರಂಥಾಲಯಕ್ಕೆ ಪುಸ್ತಕ, ಡೆಸ್ಕ್, ಕಟ್ಟಡ ಕಾರ್ಮಿಕರಿಗೆ ಕಿಟ್ ಹಾಗೂ ಅಂಗವಿಕಲರಿಗೆ ತ್ರಿಚಕ್ರ ವಾಹನ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
‘ಸರ್ಕಾರಿ ಶಾಲೆಗಳಿಗೆ ಕಟ್ಟಡಗಳು, ಆಟದ ಮೈದಾನ, ಹೊಸ ಸಲಕರಣೆಗಳನ್ನು ವಿತರಣೆ ಮಾಡಲಾಗುತ್ತಿದೆ. ಕೋವಿಡ್ ಸಂದರ್ಭದಲ್ಲಿ ಕಾರ್ಮಿಕರಿಗೆ ಆಹಾರದ ಕಿಟ್ ಜೊತೆಗೆ ಧನಸಹಾಯ ನೀಡಲಾಗಿದೆ. ಹಲವಾರು ಯೋಜನೆಗಳ ಮೂಲಕ ಕಾರ್ಮಿಕರಿಗೆ ವಿವಿಧ ಸೌಲಭ್ಯಗಳು ತಲುಪುತ್ತಿವೆ’ ಎಂದರು.
ಕಾರ್ಮಿಕ ಇಲಾಖೆಯ ಅಧಿಕಾರಿ ಮಲ್ಲಿಕಾರ್ಜುನ ಜೋಗುರ, ‘ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿವೇತನ, ವೈದ್ಯಕೀಯ ಖರ್ಚಿಗಾಗಿ ಧನಸಹಾಯ ಸೇರಿದಂತೆ ವಿವಿಧ ಸವಲತ್ತುಗಳನ್ನು ಇಲಾಖೆಯಿಂದ ಒದಗಿಸಲಾಗುತ್ತಿದೆ’ ಎಂದು ಹೇಳಿದರು.
ನಾಗಶೆಟ್ಟಿಕೊಪ್ಪದ ಪ್ರೌಢಶಾಲೆ ಹಾಗೂ ಉಣಕಲ್ನ ಸರ್ಕಾರಿ ಪದವಿ ಪೂರ್ವ ಕಾಲೇಜಿನಗ್ರಂಥಾಲಯಕ್ಕೆ ಏಳು ಸಾವಿರ ಪುಸ್ತಕಗಳು, 15 ಕಂಪ್ಯೂಟರ್ ಮತ್ತು 100 ಡೆಸ್ಗಳನ್ನು ವಿತರಿಸಲಾಯಿತು.
ಮಹಾನಗರ ಪಾಲಿಕೆಯ ಉಪ ಮೇಯರ್ ಉಮಾ ಮುಕುಂದ, ಸದಸ್ಯರಾದ ರೂಪಾ ಶೆಟ್ಟಿ, ಸಂತೋಷ ಚವ್ಹಾಣ, ಮಲ್ಲಿಕಾರ್ಜುನ ಗುಂಡೂರ, ಉಮೇಶಗೌಡ ಕೌಜಗೇರಿ, ಎಂ.ಆರ್. ನರಗುಂದ, ಬೀರಪ್ಪ ಖಂಡೇಕರ, ಮುಖಂಡರಾದವೆಂಕಟೇಶ ಮೇಸ್ತ್ರಿ, ಸಿದ್ದು ಮೊಗಲಿಶೆಟ್ಟರ, ಕಾರ್ಮಿಕ ಇಲಾಖೆ ಅಧಿಕಾರಿಗಳು, ಅಂಗವಿಕಲ ಇಲಾಖೆಯ ಅಧಿಕಾರಿಗಳು, ವಿವಿಧ ಶಾಲೆಗಳ ಶಿಕ್ಷಕರು ಇದ್ದರು.
ಕ್ಷೇತ್ರ ಸಮನ್ವಯಾಧಿಕಾರಿ ಎಂ.ಎಸ್. ಶಿವಳ್ಳಿಮಠ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೀದೇವಿ ನಾಗಲಿಕರ ಪ್ರಾರ್ಥಿಸಿದರು. ಶಿಕ್ಷಣ ಸಂಯೋಜಕ ಪ್ರಭಾಕರ ಜಿ. ನಿರೂಪಿಸಿದರು. ಲಕ್ಷ್ಮಿ ಧನ್ನಕ್ಕನವರ ವಂದಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.