ADVERTISEMENT

ಪಂಚಾಯ್ತಿ ಗದ್ದುಗೆ ಮೇಲೆ ಕಣ್ಣು

ಗೆದ್ದವರೆಲ್ಲ ನಮ್ಮವರೇ ಎನ್ನುತ್ತಿರುವ ರಾಜಕೀಯ ಪಕ್ಷಗಳ ಮುಖಂಡರು

​ಪ್ರಜಾವಾಣಿ ವಾರ್ತೆ
Published 1 ಜನವರಿ 2021, 2:32 IST
Last Updated 1 ಜನವರಿ 2021, 2:32 IST

ಹುಬ್ಬಳ್ಳಿ: ಗ್ರಾಮ ಪಂಚಾಯಿತಿ ಚುನಾವಣಾ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ, ಗೆಲುವು ಪಡೆದ ಅಭ್ಯರ್ಥಿಗಳು ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳ ಮೇಲೆ ಕಣ್ಣಿಟ್ಟಿದ್ದಾರೆ. ಎಲ್ಲಿ ಯಾವ ಮೀಸಲಾತಿ ಸಿಗುವುದೇ ಎನ್ನುವ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ.

ಈ ಚುನಾವಣೆ ಪಕ್ಷಾತೀತವಾದರೂ ರಾಜಕೀಯ ಪಕ್ಷಗಳ ಬೆಂಬಲಿಗರೇ ಬಹುತೇಕ ಕಡೆ ಸ್ಪರ್ಧಿಸಿ ಗೆಲುವಿನ ನಗೆ ಬೀರಿರುವುದರಿಂದ, ಪಕ್ಷಗಳಿಗೂ ಮುಂದೆ ನಡೆಯುವ ತಾಲ್ಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ತಯಾರಿಗೆ ಹೊಸ ಹುರುಪು ಬಂದಿದೆ. ಪಂಚಾಯಿತಿಯಲ್ಲಿ ತಮ್ಮ ಪಕ್ಷದ ಬೆಂಬಲಿಗರೇ ಹೆಚ್ಚಿನ ಸಾಧನೆ ಮಾಡಿದ್ದಾರೆ ಎಂದು ಎಲ್ಲ ರಾಜಕೀಯ ಪಕ್ಷಗಳ ಮುಖಂಡರು ಪೈಪೋಟಿಗೆ ಬಿದ್ದವರಂತೆ ಹೇಳಿಕೊಳ್ಳುತ್ತಿದ್ದಾರೆ.

‘ಜೆಡಿಎಸ್ ನಮ್ಮೆಲ್ಲರ ನಿರೀಕ್ಷೆ ಮೀರಿ ಪಂಚಾಯ್ತಿ ಚುನಾವಣೆಯಲ್ಲಿ ಸಾಧನೆ ಮಾಡಿದೆ. ಬ್ಯಾಹಟ್ಟಿ, ಕುಸುಗಲ್, ಕಿರೇಸೂರ, ಹೆಬಸೂರ, ಸಿರಗುಪ್ಪ, ಇಂಗಳಹಳ್ಳಿ ಪಂಚಾಯಿತಿಗಳಲ್ಲಿ ಕೆಲ ಸ್ಥಾನಗಳಲ್ಲಿ ಪಕ್ಷದ ಬೆಂಬಲಿಗರು ಗೆಲುವು ಸಾಧಿಸಿದ್ದಾರೆ’ ಎಂದು ಜೆಡಿಎಸ್‌ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎನ್‌.ಎಚ್. ಕೋನರಡ್ಡಿ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.

ADVERTISEMENT

‘ತಳಮಟ್ಟದಲ್ಲಿ ಕಾರ್ಯಕರ್ತರ ಪಡೆ ಹೊಂದಿರುವ ಕಾಂಗ್ರೆಸ್‌, ಪಂಚಾಯಿತಿ ಚುನಾವಣೆಯಲ್ಲಿ ಗಮನಾರ್ಹ ಸಾಧನೆ ಮಾಡಿದೆ. ಹುಬ್ಬಳ್ಳಿ ತಾಲ್ಲೂಕಿನ 26 ಪಂಚಾಯಿತಿಗಳ ಪೈಕಿ 13 ಕಡೆ ಪಕ್ಷದ ಬೆಂಬಲಿಗರು ಗೆಲುವು ಸಾಧಿಸಿದ್ದಾರೆ. ಅಧ್ಯಕ್ಷ– ಉಪಾಧ್ಯಕ್ಷ ಚುನಾವಣೆಯಲ್ಲೂ ಕಾಂಗ್ರೆಸ್‌ ಹೆಚ್ಚಿನ ಕಡೆ ಅಧಿಕಾರ ಹಿಡಿಯುವ ವಿಶ್ವಾಸವಿದೆ’ ಎಂದು ಜಿಲ್ಲಾ ಗ್ರಾಮೀಣ ಕಾಂಗ್ರೆಸ್‌ ಘಟಕದ ಕಾರ್ಯದರ್ಶಿ ಶ್ರೀನಿವಾಸ ಹೇಳಿದರು.

ಹುಬ್ಬಳ್ಳಿ ತಾಲ್ಲೂಕಿನ 26 ಗ್ರಾಮ ಪಂಚಾಯಿತಿಗಳ 337 ಸ್ಥಾನಗಳಿಗೆ ಹೊಸ ಸದಸ್ಯರು ಚುನಾಯಿತರಾಗಿದ್ದಾರೆ. ಮತದಾನಕ್ಕೂ ಮುಂಚೆಯೇ ಅವಿರೋಧವಾಗಿ 24 ಮಂದಿ ಆಯ್ಕೆಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.