ಹುಬ್ಬಳ್ಳಿ: ‘ಈ ಹಿಂದೆ ಆರ್ಎಸ್ಎಸ್ ನವರು ತೈಲ ಬೆಲೆ ಏರಿಕೆಯಾದಾಗ ಬೀದಿಗೆ ಬಂದು, ಕಾಂಗ್ರೆಸ್ಗೆ ಬಾಯಿಗೆ ಬಂದಂತೆ ಬಯ್ಯುತ್ತಿದ್ದರು. ಈಗ ಎಲ್ಲಿ ಹೋಗಿದ್ದಾರೆ’ ಎಂದು ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದರು.
ಬುಧವಾರ ಸುದ್ದಿಗಾರರೊಂದಿಗೆಮಾತನಾಡಿದ ಅವರು, ‘ಹಿಟ್ಲರ್ ರೀತಿಯ ಆಡಳಿತ ದೇಶದಲ್ಲಿದೆ. ತಾವು ಏನೇ ಮಾಡಿದರೂಜನರು ಮತ ನೀಡುತ್ತಾರೆ ಎಂದು ಬಿಜೆಪಿ ಭಾವಿಸಿದಂತಿದೆ. ಸಮಯ ಬಂದಾಗ ತಕ್ಕ ಪಾಠ ಕಲಿಸುತ್ತಾರೆ’ ಎಂದರು.
‘ಮೋದಿ ಅವರು ಎರಡು ಕೋಟಿ ಉದ್ಯೋಗ ಸೃಷ್ಟಿಸುತ್ತೇವೆ ಎಂದಿದ್ದರು. ಏಳು ವರ್ಷದ ಅವಧಿಯಲ್ಲಿ ಅವರು 15 ಕೋಟಿ ಉದ್ಯೋಗ ಸೃಷ್ಟಿ ಮಾಡಬೇಕಿತ್ತು. ಆದರೆ, ಬಹುತೇಕರು ಇರುವ ಉದ್ಯೋಗವನ್ನೇ ಕಳೆದುಕೊಂಡಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸಾಕಷ್ಟು ಹುದ್ದೆಗಳು ಖಾಲಿಯಿವೆ. ಅವುಗಳನ್ನು ಭರ್ತಿ ಮಾಡಿಕೊಂಡರೆ 62 ಲಕ್ಷ ಮಂದಿಗೆ ಉದ್ಯೋಗ ನೀಡಬಹುದಿತ್ತು’ ಎಂದು ಹೇಳಿದರು.
‘ಜಿಎಸ್ಟಿ ಪರಿಹಾರಕ್ಕೆ ಸಂಬಂಧಿಸಿ ರಾಜ್ಯಕ್ಕೆ ಕೇಂದ್ರದಿಂದ ₹20 ಸಾವಿರ ಕೋಟಿಗೂ ಅಧಿಕ ಮೊತ್ತ ಬರಬೇಕು. ಆದರೆ, ಅದನ್ನು ಕೇಳುವವರೇ ಇಲ್ಲವಾಗಿದೆ’ ಎಂದರು.
‘ಉಪ ಚುನಾವಣೆ ನಡೆಯುವ ಎರಡು ಕ್ಷೇತ್ರಗಳಲ್ಲಿ ಹಣದ ಹೊಳೆ ಹರಿಯುತ್ತಿದೆ. ಇದು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೂ ಗೊತ್ತಿದೆ. ಇಂತಹ ಸಂದರ್ಭದಲ್ಲಿ ಸಿಬಿಐ, ಆದಾಯ ತೆರಿಗೆ ಇಲಾಖೆಗಳನ್ನು ಹೇಗೆ ಬಳಸಿಕೊಳ್ಳಬೇಕು ಎನ್ನುವುದು ಅವರಿಗೆ ಚೆನ್ನಾಗಿ ಗೊತ್ತಿದೆ. ಅಧಿಕಾರ ದುರುಪಯೋಗ ಪಡೆಸಿಕೊಳ್ಳುವುದೇ ಅವರ ಕಾಯಕವಾಗಿದೆ’ ಎಂದು ಆರೋಪಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.