
ಹುಬ್ಬಳ್ಳಿ: ನಗರದ ಸಿದ್ಧಾರೂಢ ಸ್ವಾಮಿ ರೈಲ್ವೆ ನಿಲ್ದಾಣದ ನಾಲ್ಕನೇ ಪ್ಲಾಟ್ಫಾರ್ಮ್ನಲ್ಲಿ ಬ್ಯಾಗ್ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಒಡಿಶಾದ ಕೈಲಾಸಚಂದ್ರ ಬೆಹರಾ ಎಂಬುವವರನ್ನು ಬಂಧಿಸಿರುವ ರೈಲ್ವೆ ಪೊಲೀಸರು, ₹2.10 ಲಕ್ಷ ಮೌಲ್ಯದ 20 ಕೆ.ಜಿ. ಗಾಂಜಾ ವಶಪಡಿಸಿಕೊಂಡಿದ್ದಾರೆ.
ಇನ್ಸ್ಪೆಕ್ಟರ್ ಸುರೇಶ ಕುಂಬಾರ ಮಾರ್ಗದರ್ಶನದಲ್ಲಿ ಪಿಎಸ್ಐ ಸತ್ಯಪ್ಪ ಮುಕ್ಕಣ್ಣವರ ನೇತೃತ್ವದ ತಂಡ ದಾಳಿ ನಡೆಸಿತ್ತು. ಹುಬ್ಬಳ್ಳಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮದ್ಯ ಅಕ್ರಮ ಸಾಗಾಟ: ಕಾರಿನಲ್ಲಿ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ಬು. ಅರಳಿಕಟ್ಟಿ ಗ್ರಾಮದ ಗುರುರಾಜ ಎಸ್. ಅವರನ್ನು ವಶಕ್ಕೆ ಪಡೆದಿರುವ ಅಬಕಾರಿ ಇಲಾಖೆ ಅಧಿಕಾರಿಗಳು, ₹1.73 ಲಕ್ಷ ಮೌಲ್ಯದ ಮದ್ಯ ವಶಪಡಿಸಿಕೊಂಡಿದ್ದಾರೆ. ಪ್ರಕರಣ ದಾಖಲಾಗಿದೆ.
ಆರೋಪಿ ಗುರುರಾಜ ಪರವಾನಗಿ ಪಡೆಯದೇ ತಾಲ್ಲೂಕಿನ ವರೂರು ಗ್ರಾಮದ ಬಳಿ ಮದ್ಯ ಸಾಗಾಟ ಮಾಡುತ್ತಿದ್ದರು. 17.280 ಲೀಟರ್ ಮದ್ಯ ಹಾಗೂ 37.200 ಲೀಟರ್ ಬೀಯರ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಅಬಕಾರಿ ಇಲಾಖೆಯ ಅಧಿಕಾರಿ ಐ.ಡಿ. ಕಿತ್ತೂರ, ಸಿಬ್ಬಂದಿ ಕೆ.ಎನ್. ಕಮ್ಮಾರ, ಎಸ್.ಐ. ಬುಲಿ, ಶೇಖರ ಜ್ಯೋತಿ ದಾಳಿಯಲ್ಲಿ ಪಾಲ್ಗೊಂಡಿದ್ದರು.
ಚಿನ್ನಾಭರಣ ಕಳವು: ಹುಬ್ಬಳ್ಳಿ ತಾಲ್ಲೂಕಿನ ಕೋಳಿವಾಡ ಗ್ರಾಮದ ಮಂಜುನಾಥ ಸಣಕಲ್ ಅವರ ಮನೆ ಬಾಗಿಲಿನ ಬೀಗ ಮುರಿದು, ₹6.20 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಲಾಗಿದೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.