ADVERTISEMENT

ಗ್ರಾಮೀಣ ಶಿಕ್ಷಕರ ಸಂಕಷ್ಟಕ್ಕೆ ಸ್ಪಂದನೆ: ಜಗದೀಶ ಶೆಟ್ಟರ್‌

ಪ್ರಾಥಮಿಕ ಶಾಲಾ ಶಿ‌ಕ್ಷಕರ ಸಂಘದ ಸಭೆ: ಶಾಸಕ ಜಗದೀಶ ಶೆಟ್ಟರ್‌ ಭರವಸೆ

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2023, 15:56 IST
Last Updated 11 ಫೆಬ್ರುವರಿ 2023, 15:56 IST
ಹುಬ್ಬಳ್ಳಿಯ ಸವಾಯಿ ಗಂಧರ್ವ ಹಾಲ್‌ನಲ್ಲಿ ಶನಿವಾರ ನಡೆದ ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿ‌ಕ್ಷಕರ ಸಂಘದ ಸಭೆಯನ್ನು ಶಾಸಕ ಜಗದೀಶ ಶೆಟ್ಟರ್‌ ಉದ್ಘಾಟಿಸಿದರು. ಶಾಸಕ ಅಮೃತ ದೇಸಾಯಿ, ಕುಮಾರ ವಿರೂಪಾಕ್ಷ ಸ್ವಾಮೀಜಿ ಇದ್ದಾರೆ
ಹುಬ್ಬಳ್ಳಿಯ ಸವಾಯಿ ಗಂಧರ್ವ ಹಾಲ್‌ನಲ್ಲಿ ಶನಿವಾರ ನಡೆದ ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿ‌ಕ್ಷಕರ ಸಂಘದ ಸಭೆಯನ್ನು ಶಾಸಕ ಜಗದೀಶ ಶೆಟ್ಟರ್‌ ಉದ್ಘಾಟಿಸಿದರು. ಶಾಸಕ ಅಮೃತ ದೇಸಾಯಿ, ಕುಮಾರ ವಿರೂಪಾಕ್ಷ ಸ್ವಾಮೀಜಿ ಇದ್ದಾರೆ   

ಹುಬ್ಬಳ್ಳಿ: ‘ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ. ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಿ, ಶೀಘ್ರ ಕ್ರಮಕೈಗೊಳ್ಳಲು ಸರ್ಕಾರದ ಮೇಲೆ ಒತ್ತಡ ತರಲಾಗುವುದು’ ಎಂದು ಶಾಸಕ ಜಗದೀಶ ಶೆಟ್ಟರ್‌ ಭರವಸೆ ನೀಡಿದರು.

ನಗರದ ಸವಾಯಿ ಗಂಧರ್ವ ಹಾಲ್‌ನಲ್ಲಿ ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿ‌ಕ್ಷಕರ ಸಂಘವು ಶನಿವಾರ ಆಯೋಜಿಸಿದ್ದ ರಾಜ್ಯಮಟ್ಟದ ಮೂರನೇ ಮಹಾಸಭೆ, ಗ್ರಾಮೀಣ ಪರಿಹಾರ ಭತ್ಯೆಗಾಗಿ ಹಕ್ಕೊತ್ತಾಯ ಹಾಗೂ ‘ಗ್ರಾಮೀಣ ಶಿಕ್ಷಕ ರತ್ನ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.

‘ಬಹುತೇಕ ಸರ್ಕಾರಿ ನೌಕರರು ನಗರ ಪ್ರದೇಶಗಳಿಗೆ ವರ್ಗಾವಣೆ ಬಯಸುತ್ತಿರುವ ಸಂದರ್ಭದಲ್ಲಿ, ಗ್ರಾಮೀಣ ಪ್ರದೇಶದ ಮಕ್ಕಳ ಶಿಕ್ಷಣಕ್ಕಾಗಿ ಶ್ರಮಿಸುತ್ತಿರುವ ಶಿಕ್ಷಕರ ಕಾರ್ಯ ಶ್ಲಾಘನೀಯ. ಶಾಲೆಗಳಿಗೆ ಮೂಲಸೌಕರ್ಯ ಕಲ್ಪಿಸಲು ಆದ್ಯತೆ ನೀಡಲಾಗಿದೆ. ಸುಸಜ್ಜಿತ ಕಟ್ಟಡದಲ್ಲಿ ಗುಣಮಟ್ಟದ ಶಿಕ್ಷಣ ದೊರೆತಾಗ, ಹೆಚ್ಚು ಮಕ್ಕಳು ಸರ್ಕಾರಿ ಶಾಲೆಗಳತ್ತ ಆಕರ್ಷಿತರಾಗುತ್ತಾರೆ. ಅವರನ್ನು ಉತ್ತಮ ನಾಗರಿಕರನ್ನಾಗಿಸಿ, ದೇಶದ ಅಭಿವೃದ್ಧಿಗೆ ಶಿಕ್ಷಕರು ಇನ್ನಷ್ಟು ಶ್ರಮಿಸಬೇಕು’ ಎಂದರು.

ADVERTISEMENT

ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ಅಮೃತ ದೇಸಾಯಿ ಮಾತನಾಡಿ, ‘ಗ್ರಾಮೀಣ ಶಾಲೆಗಳಲ್ಲಿ ಶಿಕ್ಷಕರು ಅನುಭವಿಸುತ್ತಿರುವ ಸಂಕಷ್ಟಗಳನ್ನು ಕಣ್ಣಾರೆ ಕಂಡಿದ್ದೇನೆ. ಸಮಸ್ಯೆಗಳನ್ನು ಲೆಕ್ಕಿಸದೆ, ಮಕ್ಕಳ ಶಿಕ್ಷಣಕ್ಕಾಗಿ, ಮನೆಗಿಂತ ಶಾಲೆಯೇ ಹೆಚ್ಚೆಂದು ದುಡಿಯುತ್ತಿರುವ ಶಿಕ್ಷಕರ ಕಾರ್ಯ ಮೆಚ್ಚುವಂತದ್ದು’ ಎಂದರು.

ವಿವಿಧ ಜಿಲ್ಲೆಗಳ 180 ಶಿಕ್ಷಕರಿಗೆ ‘ಗ್ರಾಮೀಣ ಶಿಕ್ಷಕ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಉಪ್ಪಿನಬೆಟಗೇರಿ ಮೂರುಸಾವಿರ ವಿರಕ್ತ ಮಠದ ಕುಮಾರ ವಿರೂಪಾಕ್ಷ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಬೆಂಗಳೂರಿನ ಸಾಧನ ಕೋಚಿಂಗ್ ಸೆಂಟರ್‌ನ ಡಾ.ಜ್ಯೋತಿ ಕೆ. ಉಪನ್ಯಾಸ ನೀಡಿದರು. ನೇತ್ರತಜ್ಞ ಆರ್‌. ಕೃಷ್ಣಪ್ರಸಾದ್‌, ಸಂಘದ ಕಾರ್ಯದರ್ಶಿ ಮಲ್ಲಿಕಾರ್ಜುನ ಉಪ್ಪಿನ, ಗೌರವಾಧ್ಯಕ್ಷ ಎಲ್‌.ಐ. ಲಕ್ಕಮ್ಮನವರ, ಕಾರ್ಯಾಧ್ಯಕ್ಷರಾದ ಶರಣಪ್ಪಗೌಡ ಆರ್‌.ಕೆ., ಎಂ.ವಿ. ಕುಸುಮಾ, ಮಹಾಪೋಷಕ ಎಂ.ಐ. ಮುನವಳ್ಳಿ, ಹನುಮಂತಪ್ಪ ಮೇಟಿ, ಮರಿಗೌಡರ, ಮೊಹಮ್ಮದ್‌ ರಫಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.