ADVERTISEMENT

22ರ ನಂತರ ಲಾಕ್‌ಡೌನ್ ಮುಂದುವರಿಕೆ ತೀರ್ಮಾನಿಸಲಿ: ಜೋಶಿ ಸಲಹೆ

​ಪ್ರಜಾವಾಣಿ ವಾರ್ತೆ
Published 17 ಮೇ 2021, 15:09 IST
Last Updated 17 ಮೇ 2021, 15:09 IST

ಹುಬ್ಬಳ್ಳಿ: ‘ರಾಜ್ಯದಲ್ಲಿ ಲಾಕ್‌ಡೌನ್‌ ಮುಂದುವರಿಸುವ ಕುರಿತು ಮೇ 22ರ ಬಳಿಕ ತೀರ್ಮಾನ ಕೈಗೊಳ್ಳುವುದು ಸೂಕ್ತ’ ಎಂದುಕೇಂದ್ರ ಸಂಸದೀಯ ವ್ಯವಹಾರಗಳು ಹಾಗೂ ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಹುಬ್ಬಳ್ಳಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಲಾಕ್‌ಡೌನ್ ಮುಂದುವರೆಸುವ ಕುರಿತು ತಜ್ಞರು ನೀಡಿರುವ ವರದಿಯನ್ನು ನಾನು ಗಮನಿಸಿಲ್ಲ. ಸದ್ಯ 24ರವರೆಗೆ ಕಠಿಣ ಲಾಕ್‌ಡೌನ್ ಜಾರಿಯಲ್ಲಿದೆ. ಸೋಂಕು ಹರಡುವಿಕೆ ತಡೆಗೆ ಲಾಕ್‌ಡೌನ್ ಮುಂದುವರಿಸುವ ಅಗತ್ಯವಿದ್ದರೆ, ರಾಜ್ಯ ಸರ್ಕಾರ ಆ ಕುರಿತು ಪರಿಶೀಲಿಸಿ ನಿರ್ಧಾರ ಕೈಗೊಳ್ಳಲಿ’ ಎಂದು ಸಲಹೆ ನೀಡಿದರು.

‘ಕೋವಿಡ್‌ನಿಂದ ಬಳಲುವವರಿಗೆ ನೀಡುವ ಚಿಕಿತ್ಸೆಯ ಅಡ್ಡ ಪರಿಣಾಮದಿಂದಕಪ್ಪು ಶಿಲಿಂಧ್ರ ಹೆಚ್ಚಾಗುತ್ತಿದೆ. ಈ ಕುರಿತು ತಜ್ಞ ವೈದ್ಯರಿಂದ ಮಾಹಿತಿ ಪಡೆದಿದ್ದೇನೆ. ಅದರ ನಿಯಂತ್ರಣಕ್ಕೆ ಹಾಗೂ ಚಿಕಿತ್ಸೆಗೆ ಅಗತ್ಯ ಔಷಧಗಳನ್ನು ರಾಜ್ಯಕ್ಕೆ ಸಾಕಷ್ಟು ಪ್ರಮಾಣದಲ್ಲಿ ಒದಗಿಸುವಂತೆ ಕೇಂದ್ರ ಸರ್ಕಾರದ ಆರೋಗ್ಯ ಕಾರ್ಯದರ್ಶಿಗೆ ಕರೆ ಮಾಡಿ ತಿಳಿಸಿದ್ದೇನೆ. ರಾಜ್ಯದಲ್ಲೂ ಟೆಂಡರ್‌ನಲ್ಲಿ ಔಷಧಗಳನ್ನು ಖರೀದಿಸುವಂತೆ ಇಲ್ಲಿನ ಆರೋಗ್ಯ ಸಚಿವರು ಹಾಗೂ ಕಾರ್ಯದರ್ಶಿಗೆ ಹೇಳಿದ್ದೇನೆ. ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದರೂ, ಶೇಕಡವಾರು ಮರಣ ಪ್ರಮಾಣ ಕಡಿಮೆ ಇದೆ’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.