ಪಶುಪತಿಹಾಳ (ಗುಡಗೇರಿ): ಪಕ್ಷ ಭೇದ ಮರೆತು ಎಲ್ಲರೂ ಒಂದುಗೂಡಿದಾಗ ಮಾತ್ರ ಗ್ರಾಮದ ಅಭಿವೃದ್ಧಿಯಾಗುತ್ತದೆ. ಈ ವಿಷಯಲ್ಲಿ ಪಶುಪತಿಹಾಳ ಗ್ರಾಮವು ಮಾದರಿಯಾಗಿದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
ಅವರು ಗ್ರಾಮದಲ್ಲಿ ಗುರುವಾರ 2022-23ನೇ ಸಾಲಿನ ನರೇಗಾ ಯೋಜನೆ ಹಾಗೂ 15ನೇ ಹಣಕಾಸು ಯೋಜನೆ ಅಡಿಯಲ್ಲಿ ನಿರ್ಮಾಣವಾದ ಗ್ರಾಮ ಪಂಚಾಯಿತಿ ಕಾರ್ಯಾಲಯ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಗ್ರಾಮದಲ್ಲಿ ಪ್ರೌಢಶಾಲೆ ತೆರೆಯಬೇಕೆಂಬ ಬೇಡಿಕೆ ಬಂದಿದೆ. ಸಚಿವರೊಂದಿಗೆ ಸಮಾಲೋಚಿಸಿ ಮಂಜೂರು ಮಾಡಿಸಲು ಪ್ರಯತ್ನಿಸುತ್ತೇನೆ ಎಂದು ಭರವಸೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಶಾಸಕ ಎಂ.ಆರ್. ಪಾಟೀಲ ಮಾತನಾಡಿ, ಗ್ರಾಮದಲ್ಲಿ ಅನೇಕ ಅಭಿವೃದ್ದಿ ಕಾಮಗಾರಿಗಳು ನಡೆಯುತ್ತಿವೆ. ಇನ್ನು ಅನೇಕ ಕಾಮಗಾರಿಗಳಿಗೆ ಸದ್ಯದಲ್ಲಿ ಚಾಲನೆ ನೀಡಲಾಗುವುದು. ಇಲ್ಲಿ ಅಭಿವೃದ್ದಿ ಕಾರ್ಯಗಳು ಕುಂಠಿತಗೊಳ್ಳುವುದಿಲ್ಲ ಎಂದು ಹೇಳಿದರು.
ಗ್ಯಾರಂಟಿ ಯೋಜನೆಯ ತಾಲ್ಲೂಕು ಸಮಿತಿಯ ಅಧ್ಯಕ್ಷ ಶಿವಾನಂದ ಬೆಂತೂರು ಮಾತನಾಡಿ, ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ, ಪ್ರೌಢಶಾಲೆಗಾಗಿ ಬೇಡಿಕೆ ಬಂದಿದೆ. ಈಗಾಗಲೇ ಪ್ರೌಢಶಾಲೆಗಾಗಿ ಲಕ್ಷ್ಮೇಶ್ವರದ ದಿ.ಲಿಂಬಯ್ಯ ಸ್ವಾಮಿಯವರು 2 ಎಕರೆ ಜಮೀನು ದಾನವಾಗಿ ನೀಡಿದ್ದಾರೆ. ಈ ಜಾಗದಲ್ಲಿ ಪ್ರೌಢಶಾಲೆ ಕಟ್ಟಡ ನಿರ್ಮಿಸಲು ಹಾಗೂ ಆಸ್ಪತ್ರೆ ನಿರ್ಮಿಸುವ ಬಗ್ಗೆ ಸರ್ಕಾರದ ಜೊತೆ ಚರ್ಚಿಸಿ, ಬೇಡಿಕೆ ಈಡೇರಿಸಲು ಪ್ರಯತ್ನಿಸುತ್ತೇನೆ ಎಂದು ಹೇಳಿದರು.
ಸಾನ್ನಿಧ್ಯ ವಹಿಸಿದ್ದ ಧಾರವಾಡದ ಮುರಘಾಮಠದ ಮಲ್ಲಿಕಾರ್ಜುನ ಸ್ವಾಮೀಜಿ ಮಾತನಾಡಿ, ಚುನಾವಣೆ ಸಂದರ್ಭದಲ್ಲಿ ಮಾತ್ರ ರಾಜಕೀಯ ಮಾಡಬೇಕು. ಚುನಾವಣೆ ಮುಗಿದ ನಂತರ ಅಭಿವೃದ್ಧಿ ಕಡೆ ಗಮನ ಕೊಡಬೇಕು ಎಂದು ಸಲಹೆ ನೀಡಿದರು.
ಪಿಡಿಒ ನಾಗರಾಜ ಗಿಣಿವಾಲರ ಮಾತನಾಡಿದರು. ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ಎಂ.ಎಸ್ ಅಕ್ಕಿ, ಕುಸುಮಾವತಿ ಶಿವಳ್ಳಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇಣವ್ವ ಮಲ್ಲಾಪೂರ, ಉಪಾಧ್ಯಕ್ಷ ಮಹಾಂತಪ್ಪ ನಾಗಲಿಂಗಣ್ಣವರ, ತಾಲ್ಲೂಕು ಪಂಚಾಯಿತಿ ಇಓ ಜಗದೀಶ ಕಮ್ಮಾರ, ಪಿ.ಆರ್.ಇ.ಡಿ ಸಹಾಯಕ ಅಭಿಯಂತರು ಎ.ಐ.ನಾಯ್ಕರ, ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.