ಹುಬ್ಬಳ್ಳಿ: ತಾರಿಹಾಳ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ನಡೆದ ಅಗ್ನಿ ದುರಂತದಲ್ಲಿ ಮೃತಪಟ್ಟ ಕುಟುಂಬದವರಿಗೆ ₹5 ಲಕ್ಷ ಪರಿಹಾರ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಹಾಲಪ್ಪ ಆಚಾರ ಹೇಳಿದರು.
ದುರಂತ ನಡೆದ ಕಾರ್ಖಾನೆಗೆ ಹಾಗೂ ಕಿಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಆರೋಗ್ಯ ಭಾನುವಾರ ವಿಚಾರಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಕುಟುಂಬ ಕಲ್ಯಾಣ ಇಲಾಖೆಯಿಂದ ಮೃತರ ಮಕ್ಕಳಿಗೆ ಮೂರು ವರ್ಷ ಅನುದಾನ ನೀಡಬಹುದು. ಆ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುದು. ಚಿಕ್ಕ ಮಕ್ಕಳನ್ನು ಬಾಲ ಮಂದಿರಕ್ಕೆ ಕಳುಹಿಸಲು ಕುಟುಂಬದವರು ಒಪ್ಪಿದರೆ ಅದಕ್ಕೂ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದರು.
ಧಾರವಾಡ ಜಿಲ್ಲೆಯ ಎಂಟು ವಲಯಗಳಲ್ಲಿರುವ ಕೈಗಾರಿಕಾ ಪ್ರದೇಶಗಳಲ್ಲಿ ಅನುಮತಿ ಪಡೆಯದೆ ಕಾರ್ಯನಿರ್ವಹಿಸುತ್ತಿರುವ ಕಾರ್ಖಾನೆಗಳ ಸಮೀಕ್ಷೆ ನಡೆಸಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದೇನೆ. ಮೂರು ದಿನಗಳಲ್ಲಿ ನೀಡುವಂತೆ ಸೂಚಿಸಿದ್ದು, ಅನುಮತಿ ಪಡೆಯದ ಕಾರ್ಖಾನೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಬಕೈಗೊಂಡು ಬಂದ್ ಮಾಡಲಾಗುವುದು ಎಂದರು.
ಅಗ್ನಿ ದುರಂತಕ್ಕೆ ಕಾರಣವಾದ ಸ್ಪಾರ್ಕ್ ಕ್ಯಾಂಡಲ್ ಉತ್ಪಾದಿಸುವ ಕಾರ್ಖಾನೆ ಯಾವುದೇ ಅನುಮತಿ ಪಡೆದಿರಲಿಲ್ಲ. ಲೋಪ ಎಸಗಿದ ಅಧಿಕಾರಿಗಳ ಹಾಗೂ ಕಾರ್ಖಾನೆ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ತಪ್ಪು ಎಸಗಿದವರ ಹೆಡೆಮುರಿ ಕಟ್ಟಲಾಗುವುದು ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.