ಹುಬ್ಬಳ್ಳಿ: ಸಾರ್ವಜನಿಕ ಗಣಪತಿ ಪ್ರತಿಷ್ಠಾಪನೆ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಮಾರ್ಗಸೂಚಿ ಹೊರಡಿಸಿರುವ ಹೆಸ್ಕಾಂ, ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಗಣೇಶ ಮಂಡಳಿಗಳಿಗೆ ಸೂಚಿಸಿದೆ.
‘ಅನಧಿಕೃತವಾಗಿ ವಿದ್ಯುತ್ ತಂತಿಗಳಿಗೆ ಹುಕ್ ಹಾಕಿ ಸಂಪರ್ಕ ಪಡೆಯಬಾರದು. ಸಂಬಂಧಪಟ್ಟ ಹೆಸ್ಕಾಂ ಉಪ ವಿಭಾಗೀಯ ಅಥವಾ ಶಾಖಾ ಕಚೇರಿಗೆ ತೆರಳಿ ಅನುಮತಿ ಪಡೆದು, ಸುರಕ್ಷತೆಯಿಂದ ಸಂಪರ್ಕ ಪಡೆಯಬೇಕು. ಗಣೇಶ ಮೂರ್ತಿ ಪ್ರತಿಷ್ಠಾಪನೆಯ ಸ್ಥಳದ ಸುತ್ತಮುತ್ತ ಯಾವುದೇ ವಿದ್ಯುತ್ ಮಾರ್ಗ ಇಲ್ಲದಿರುವುದನ್ನು ಖಚಿತಪಡಿಸಿಕೊಳ್ಳಬೇಕು. ವಿದ್ಯುತ್ ತಂತಿ ಕೆಳಗೆ ಅಥವಾ ಅಕ್ಕಪಕ್ಕದಲ್ಲಿ ಗಣಪತಿ ಪೆಂಡಾಲ್, ಮಂಟಪ ಹಾಕಬಾರದು’ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
‘ಮಳೆಗಾಲ ಇರುವುದರಿಂದ ವಿದ್ಯುತ್ ಅವಘಡ ತಪ್ಪಿಸಲು ಹೆಚ್ಚಿನ ಜಾಗ್ರತೆ ವಹಿಸುವುದು ಅತ್ಯಗತ್ಯ. ವಿದ್ಯುತ್ ಕಂಬಗಳು, ಪರಿವರ್ತಕಗಳಿಗೆ ಬ್ಯಾನರ್ ಮತ್ತು ಫಲಕಗಳನ್ನು ಕಟ್ಟಬಾರದು. ಗಣೇಶನ ಮೂರ್ತಿ ವಿಸರ್ಜನೆ ದಿನ ವಿದ್ಯುತ್ ತಂತಿಗಳಿಗೆ ತಾಗುವ ರೀತಿಯಲ್ಲಿ ಎತ್ತರದ ಧ್ವಜ, ಕಟೌಟ್ ಕಟ್ಟಬಾರದು. ಮೆರವಣಿಗೆ ಬೀದಿಗಳಲ್ಲಿ ವಿದ್ಯುತ್ ತಂತಿ ಅಡಚಣೆ ಇದ್ದಲ್ಲಿ ಸಂಬಂಧಿಸಿದ ಹೆಸ್ಕಾಂ ಕಚೇರಿಯ ಗಮನಕ್ಕೆ ತರಬೇಕು. ಅಂತಹ ವಿದ್ಯುತ್ ಮಾರ್ಗಗಳಲ್ಲಿ ವಿದ್ಯುತ್ ಪೂರೈಕೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ, ಅನುಕೂಲ ಮಾಡಿಕೊಡಲಾಗುವುದು’ ಎಂದು ತಿಳಿಸಲಾಗಿದೆ.
‘ಸುರಕ್ಷತಾ ಕ್ರಮಗಳನ್ನು ಅನುಸರಿಸದೆ ಯಾವುದೇ ಅವಘಡ ಸಂಭವಿಸಿದರೆ ಅದಕ್ಕೆ ಹೆಸ್ಕಾಂ ಜವಾಬ್ದಾರಿಯಲ್ಲ. ಗಣೇಶ ಮಂಡಳಿಗಳು ಸೂಕ್ತ ಸುರಕ್ಷತಾ ಕ್ರಮ ಅನುಸರಿಸಬೇಕು’ ಎಂದೂ ಎಚ್ಚರಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.