
ಹುಬ್ಬಳ್ಳಿ: ತಾಲ್ಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ನಡೆದ ಮರ್ಯಾದೆಗೇಡು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬೆಳಗಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(ಪಿಡಿಒ) ನಾಗರಾಜ ಗಿರಿಯಪ್ಪನವರ ಅವರನ್ನು ಅಮಾನತು ಮಾಡಲಾಗಿದೆ.
ಜಿಲ್ಲಾ ಪಂಚಾಯ್ತಿ ಕಾರ್ಯ ನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು, ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಶುಕ್ರವಾರ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
‘ಸಾಮಾಜಿಕ ಸ್ಥಾಯಿ ಸಮಿತಿ ಸದಸ್ಯರನ್ನು ಕರೆದು ಸಭೆ ನಡೆಸಿ, ಕೈಗೊಂಡ ಕ್ರಮಗಳ ಕುರಿತು ಠರಾವು ಪಾಸು ಮಾಡಿಲ್ಲ. ಮಾನ್ಯಾ ಅವರ ಶವ ಸಂಸ್ಕಾರ ಸಂದರ್ಭ ನಡೆದ ಸಮಾಲೋಚನಾ ಸಭೆಯಲ್ಲೂ ಪಾಲ್ಗೊಂಡಿಲ್ಲ. ಹಾಗೂ ಶವ ಸಂಸ್ಕಾರ ಸಂದರ್ಭ ಪೊಲೀಸರು ಪಂಚಾಯ್ತಿ ಸಿಬ್ಬಂದಿ ಸಹಾಯ ಕೇಳಿದಾಗ ಸ್ಪಂದಿಸದೆ ಶಿಷ್ಟಾಚಾರ ಪಾಲಿಸುವಲ್ಲಿ ಹಾಗೂ ಕರ್ತವ್ಯ ನಿರ್ವಹಿಸುವಲ್ಲಿ ಬೇಜವಾಬ್ದಾರಿತನ ಪ್ರದರ್ಶಿಸಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಈ ಹಿಂದೆ ಇದೇ ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯ ಲೋಪದ ಮೇಲೆ ಹುಬ್ಬಳ್ಳಿ ಗ್ರಾಮಿಣ ಪೊಲೀಸ್ ಠಾಣೆಯ ಇಬ್ಬರು ಕಾನ್ಸ್ಟೆಬಲ್ಗಳನ್ನು ಅಮಾನತು ಮಾಡಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.