
ಹುಬ್ಬಳ್ಳಿ: ‘ಮರ್ಯಾದೆಗೇಡು ಹತ್ಯೆ ಪ್ರಕರಣಕ್ಕಾಗಿ ಪ್ರತ್ಯೇಕ ಕಾಯ್ದೆ ಅಗತ್ಯವಿಲ್ಲ. ಈಗಾಗಲೇ ಸಾಕಷ್ಟು ಕಾನೂನುಗಳಿವೆ. ಅವುಗಳನ್ನು ತಿದ್ದುಪಡಿ ಮಾಡಲು ಚಿಂತನೆ ನಡೆಸಲಾಗುವುದು’ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.
ಮರ್ಯಾದೆಗೇಡು ಪ್ರಕರಣ ಘಟಿಸಿದ ಇನಾಂ ವೀರಾಪುರ ಗ್ರಾಮಕ್ಕೆ ಬುಧವಾರ ಭೇಟಿ ನೀಡಿ, ದೌರ್ಜನ್ಯಕ್ಕೆ ಒಳಗಾದ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ ಬಳಿಕ ಅವರು ಸುದ್ದಿಗಾರರ ಜೊತೆ ಮಾತನಾಡಿದರು.
‘ಮರ್ಯಾದೆಗೇಡು ಹತ್ಯೆ ಪ್ರಕರಣದ ವಿಚಾರಣೆಗೆ ತ್ವರಿತ ನ್ಯಾಯಲಯ ರಚಿಸಲಾಗುವುದು. ಆಧುನಿಕ ದಿನಗಳಲ್ಲೂ ಇಂತಹ ಘಟನೆಗಳು ನಡೆದಿದ್ದು ಖಂಡನೀಯ. ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ, ಸೂಕ್ತ ಪರಿಹಾರ ನೀಡುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಚರ್ಚಿಸುವೆ' ಎಂದರು.
'ಗ್ರಾಮದಲ್ಲಿ ನಡೆದ ಘಟನೆಯಿಂದ ಕುಟುಂಬದವರೆಲ್ಲ ಭಯ ಭೀತರಾಗಿದ್ದು, ಕೆಲ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ. ಅವುಗಳಲ್ಲಿ ಕೃತ್ಯ ಎಸಗಿದವರಿಗೆ ಕಠಿಣ ಶಿಕ್ಷೆ ವಿಧಿಸಲು ಕೋರಿದ್ದಾರೆ. ಸರ್ಕಾರಿ ಉದ್ಯೋಗ ಮತ್ತು ಆರ್ಥಿಕ ಪರಿಹಾರಕ್ಕೆ ಮನವಿ ಮಾಡಿದ್ದಾರೆ. ಪರಿಶೀಲನೆ ನಡೆಸಲಾಗುವುದು. ಪ್ರಾಥಮಿಕವಾಗಿ ನೀಡಬೇಕಾದ ಪರಿಹಾರವನ್ನು ಈಗಾಗಲೇ ಜಿಲ್ಲಾಡಳಿತ ನೀಡಿದೆ' ಎಂದು ಹೇಳಿದರು.
ಶಾಸಕರಾದ ಪ್ರಸಾದ ಅಬ್ಬಯ್ಯ, ಎನ್.ಎಚ್. ಕೋನರಡ್ಡಿ, ವಿಧಾನ ಪರಿಷತ್ ಸದಸ್ಯ ಎಫ್.ಎಚ್. ಜಕ್ಕಪ್ಪನವರ, ಜಿಲ್ಲಾಧಿಕಾರಿ ದಿವ್ಯಪ್ರಭು, ಎಸ್ಪಿ ಗುಂಜನ್ ಆರ್ಯ ಇತರರು ಇದ್ದರು.