ADVERTISEMENT

ವಿದ್ಯಾರ್ಥಿನಿಲಯ ತೆರೆಯಲು ಭರದ ಸಿದ್ಧತೆ: ಶೇ 50 ಮಂದಿಗಷ್ಟೇ ಅವಕಾಶ

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2020, 16:01 IST
Last Updated 17 ನವೆಂಬರ್ 2020, 16:01 IST

ಹುಬ್ಬಳ್ಳಿ: ಸರ್ಕಾರ ನ. 17ರಿಂದ ಪದವಿ ಮತ್ತು ಸ್ನಾತಕೋತ್ತರ ಕಾಲೇಜುಗಳನ್ನು ಆರಂಭಿಸಲು ನಿರ್ಧರಿಸಿರುವ ಬೆನ್ನಲ್ಲೇ, ಸಮಾಜ ಕಲ್ಯಾಣ ಇಲಾಖೆಯು ರಾಜ್ಯದಾದ್ಯಂತ ಕಾಲೇಜು ವಿದ್ಯಾರ್ಥಿನಿಲಯಗಳನ್ನೂ ಅಂದಿನಿಂದಲೇ ತೆರೆಯಲು ಸಿದ್ಧತೆ ಮಾಡಿಕೊಂಡಿದೆ. ಆರಂಭದಲ್ಲಿ ಶೇ 50ರಷ್ಟು ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ನೀಡಲು ತೀರ್ಮಾನಿಸಿದೆ.

ಇದಕ್ಕೆ ಪೂರಕವಾಗಿ ವಿದ್ಯಾರ್ಥಿನಿಲಯಗಳಲ್ಲಿವಿದ್ಯಾರ್ಥಿಗಳು ಅನುಸರಿಸಬೇಕಾದ ಕೋವಿಡ್ ಮುನ್ನೆಚ್ಚರಿಕೆಯ ಪ್ರಮಾಣಿತ ಕಾರ್ಯಾಚರಣೆ ವಿಧಾನಗಳನ್ನು ಬಿಡುಗಡೆ ಮಾಡಿದೆ.

ಆದ್ಯತೆ ಮೇರೆಗೆ ಅವಕಾಶ: ‘ವಿದ್ಯಾರ್ಥಿಗಳಿಗೆ ಆದ್ಯತೆ ಮೇರೆಗೆ ವಿದ್ಯಾರ್ಥಿನಿಲಯಗಳಲ್ಲಿ ಮೊದಲಿಗೆ ಅವಕಾಶ ನೀಡಲು ಇಲಾಖೆಯ ಸಚಿವರು ಇತ್ತೀಚೆಗೆ ನಡೆಸಿದ ಸಭೆಯಲ್ಲಿ ತೀರ್ಮಾನಿಸಲಾಗಿತ್ತು. ಅದರಂತೆ, ಕಾರ್ಯಾಚರಣೆ ವಿಧಾನ
ಗಳನ್ನು ಇಲಾಖೆ ಬಿಡುಗಡೆ ಮಾಡಿದೆ. ಅಂತಿಮ ವರ್ಷದಲ್ಲಿ ಓದುತ್ತಿರುವ, ದೂರದ ಊರುಗಳಿಂದ ಬರುವ ಹಾಗೂ ಆನ್‌ಲೈನ್ ತರಗತಿಗೆ ಹಾಜರಾಗಲು ಸಾಧ್ಯವಾಗದವರಿಗೆ ಮೊದಲ ಪ್ರಾಶಸ್ತ್ಯ ನೀಡಲಾಗುವುದು’ ಎಂದುಧಾರವಾಡದ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಎನ್. ಪುರುಷೋತ್ತಮ್ ‘ಪ್ರಜಾವಾಣಿ’ಗೆ ತಿಳಿಸಿದರು.

ADVERTISEMENT

‘ಕೊರೊನಾದಿಂದಾಗಿ ಅಂತರ ಕಾಯ್ದುಕೊಳ್ಳಬೇಕಿರುವುದರಿಂದ, 10 ವಿದ್ಯಾರ್ಥಿಗಳಿದ್ದ ಕೊಠಡಿಯಲ್ಲಿ 5 ಮಂದಿಯನ್ನಷ್ಟೇ ಇರಿಸಲಾಗು
ವುದು. ಸಿಬ್ಬಂದಿಯನ್ನೂ ಒಳಗೊಂಡಂತೆ ಎಲ್ಲರಿಗೂ ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುವುದು. ಮಾಸ್ಕ್ ಮತ್ತು ಸ್ಯಾನಿಟೈಸರ್‌ಬಳಕೆ ಕಡ್ಡಾಯವಾಗಿದ್ದು, ಎಲ್ಲರಿಗೂ ಉಚಿತವಾಗಿ ವಿತರಿಸಲಾಗುವುದು’ ಎಂದರು.

‘ವಿದ್ಯಾರ್ಥಿನಿಲಯವನ್ನು ನಿತ್ಯ ಸ್ಯಾನಿಟೈಸ್ ಮಾಡಿ, ಸ್ವಚ್ಛಗೊಳಿಸಲಾಗುವುದು. ಹೊರಗಿನ ವ್ಯಕ್ತಿಗಳಿಗೆ ಪ್ರವೇಶ ನಿಷೇಧಿಸಲಾಗಿದ್ದು, ವಿದ್ಯಾರ್ಥಿಗಳು ಕೂಡ ಅನಗತ್ಯವಾಗಿ ಹೊರಗೆ ಹೋಗುವಂತಿಲ್ಲ. ಮಾರ್ಗಸೂಚಿಗಳನ್ನು ಉಲ್ಲಂಘಿಸಿದರೆ ಶಿಸ್ತು ಕ್ರಮ ಕೈಗೊಳ್ಳಲು ಸಚಿವರು ಸಭೆಯಲ್ಲಿ ಸೂಚಿಸಿದ್ದಾರೆ’ ಎಂದು ಹೇಳಿದರು.

ಒಪ್ಪಿಗೆ ಪತ್ರ ಕಡ್ಡಾಯ: ‘ವಿದ್ಯಾರ್ಥಿಗಳು ತಮ್ಮ ತಂದೆ–ತಾಯಿ ಅಥವಾ ಪೋಷಕರಿಂದ ಒಪ್ಪಿಗೆ ಪತ್ರವನ್ನು ಕಡ್ಡಾಯವಾಗಿ ತರಬೇಕು. ಜತೆಗೆ, ಕೋವಿಡ್ ಪರೀಕ್ಷೆ ಮಾಡಿಸಿಕೊಂಡು ಬರಬೇಕು. ವಿದ್ಯಾರ್ಥಿನಿಲಯದಲ್ಲಿ ಒಂದು ಐಸೊಲೇಷನ್ ಕೊಠಡಿ ಇರಲಿದೆ. ಕೊರೊನಾ ಲಕ್ಷಣಗಳು ಕಾಣಿಸಿಕೊಂಡವರಿಗೆ ಅಲ್ಲಿ ಇರಿಸಲಾಗುವುದು. ಬಳಿಕ, ಕೋವಿಡ್ ಪರೀಕ್ಷೆ ಮಾಡಿಸಿ, ವರದಿ ಪಾಸಿಟಿವ್ ಬಂದರೆ ಆಸ್ಪತ್ರೆ ಅಥವಾ ಕೋವಿಡ್ ಕೇರ್ ಸೆಂಟರ್‌ಗೆ ಕಳಿಸಲಾಗುವುದು’ ಎಂದು ತಿಳಿಸಿದರು.

‘ಪ್ರತಿ ಹಾಸ್ಟೆಲ್‌ಗೆ ಒಬ್ಬರು ವೈದ್ಯಕೀಯ ಸಿಬ್ಬಂದಿ ನಿಯೋಜಿಸುವ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಿತು. ಹತ್ತಿರದ ಸರ್ಕಾರಿ ಆಸ್ಪತ್ರೆಯ ಜತೆ ಸಂಪರ್ಕದಲ್ಲಿದ್ದು, ತುರ್ತು ಸಂದರ್ಭದಲ್ಲಿ ಆಂಬುಲೆನ್ಸ್ ಸೇವೆ ಪಡೆಯುವಂತೆ ಸಚಿವರು ಸೂಚಿಸಿದ್ದಾರೆ. ಆಯುಷ್ ಇಲಾಖೆ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಕಿಟ್ ನೀಡಲಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.