ಹುಬ್ಬಳ್ಳಿ: 'ಪ್ರಸ್ತುತ ವರ್ಷ ಜನವರಿಯಿಂದ ಈವರೆಗೆ ಹು-ಧಾ ಮಹಾನಗರದಲ್ಲಿ ಒಂಬತ್ತು ಕೊಲೆ ಪ್ರಕರಣ ದಾಖಲಾಗಿವೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಅಪರಾಧ ಚಟುವಟಿಕೆಗಳು ನಿಯಂತ್ರಣಕ್ಕೆ ಬಂದಿವೆ' ಎಂದು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಹೇಳಿದರು.
2024ರಲ್ಲಿ ಇಪ್ಪತ್ತಕ್ಕೂ ಹೆಚ್ಚು ಕೊಲೆ ಪ್ರಕರಣಗಳು ದಾಖಲಾಗಿದ್ದವು. ಮುಂಜಾಗ್ರತ ಕ್ರಮವಾಗಿ 107 ರೌಡಿಗಳನ್ನು ಗಡಿಪಾರು ಮಾಡಿ, ಒಂದುಸಾವಿರಕ್ಕೂ ಹೆಚ್ಚು ಮಂದಿ ವಿರುದ್ಧ ಕಠಿಣ ಕ್ರಮಕೈಗೊಂಡು ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕಲಾಗಿದೆ' ಎಂದು ಶುಕ್ರವಾರ ಮಾಧ್ಯಮಗಳಿಗೆ ತಿಳಿಸಿದರು.
'ಗುರುವಾರ ರಾತ್ರಿ ಮಂಟೂರ ರಸ್ತೆಯಲ್ಲಿ ನಡೆದ ಮಲ್ಲಿಕ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಉಳಿದ ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ. ಎರಡು ಗುಂಪಿನ ನಡುವೆ ನಡೆದ ಘಟನೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದು, ಕೊಲೆಗೆ ನಿಖರ ಕಾರಣವೇನೆಂದು ಪತ್ತೆ ಹಚ್ಚಲಾಗುವುದು' ಎಂದರು.
'ಕೊಲೆಯಾದ ಮಲ್ಲಿಕ್ ಹಾಗೂ ಆರೋಪಿಗಳು ಸ್ನೇಹಿತರಾಗಿದ್ದು, ಎರಡು ಗುಂಪಿನಲ್ಲಿ ಗುರುತಿಸಿಕೊಂಡಿದ್ದರು. ಇದರಿಂದ ಪರಸ್ಪರ ವೈಷಮ್ಯ ಬೆಳೆದಿತ್ತು ಎನ್ನುವ ಪ್ರಾಥಮಿಕ ಮಾಹಿತಿ ದೊರೆತಿದೆ. ಎಲ್ಲ ದೃಷ್ಟಿಕೋನದಲ್ಲೂ ತನಿಖೆ ನಡೆಯುತ್ತಿದೆ' ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.