
ಮಹೇಶ ಟೆಂಗಿನಕಾಯಿ
ಹುಬ್ಬಳ್ಳಿ: ‘ಆರ್ಎಸ್ಎಸ್ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿದಾಗ ಯಾರೂ ಬೆಂಬಲಕ್ಕೆ ಬಂದಿರಲಿಲ್ಲ. ಹೀಗಾಗಿ, ಮಗನ ಬೆಂಬಲಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಂದಾಗಿದ್ದು, ಆರ್ಎಸ್ಎಸ್ ನಿಷೇಧಿಸಬೇಕು ಎನ್ನುತ್ತಿದ್ದಾರೆ’ ಎಂದು ಶಾಸಕ ಮಹೇಶ ಟೆಂಗಿನಕಾಯಿ ವ್ಯಂಗ್ಯವಾಡಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯದ ಗೃಹ ಸಚಿವರಾಗಿದ್ದ ಸಮಯದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಆರ್ಎಸ್ಎಸ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಹಾಡಿ ಹೊಗಳಿದ್ದರು. ಈಗ ವಿರೋಧಿಸುತ್ತಿರುವುದು ಹಾಸ್ಯಾಸ್ಪದವಾಗಿದೆ’ ಎಂದರು.
‘ನವೆಂಬರ್ 14ರ ನಂತರ ರಾಜ್ಯ ಕಾಂಗ್ರೆಸ್ನ ನಾಯಕರಲ್ಲಿನ ಭಿನ್ನಮತ ಸ್ಫೋಟವಾಗುವ ಸಾಧ್ಯತೆಯಿದೆ. ಮನೆಯೊಂದು ಮೂರು ಬಾಗಿಲು ಎನ್ನುವಂಥ ಪರಿಸ್ಥಿತಿ ಅವರದ್ದಾಗಿದ್ದು, ಜನತೆಯ ದಿಕ್ಕು ತಪ್ಪಿಸಲು ಆರ್ಎಸ್ಎಸ್ ನಿಷೇಧ ಎನ್ನುವ ಹೊಸ ದಾಳ ಉರುಳಿಸುತ್ತಿದ್ದಾರೆ. ಧೈರ್ಯವಿದ್ದರೆ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಿ’ ಎಂದು ಸವಾಲು ಹಾಕಿದರು.
‘ರಾಜ್ಯದಲ್ಲಿ ಬಿಜೆಪಿ ವಿರೋಧ ಪಕ್ಷವಾಗಿ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದೆ. ನಮ್ಮಲ್ಲಿ ಯಾವುದೇ ಭಿನ್ನಮತವಿಲ್ಲ, ಯಾರೂ ರೆಬಲ್ ಆಗಿ ಸಭೆಯೂ ನಡೆಸುತ್ತಿಲ್ಲ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.