
ಹುಬ್ಬಳ್ಳಿ: ರಾಜ್ಯದ ವಿವಿಧೆಡೆ ಬೈಕ್ ಕಳವು ಮಾಡುತ್ತಿದ್ದ ಆರೋಪದ ಮೇಲೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲ್ಲೂಕಿನ ಹುಲ್ಲೂರು ಗ್ರಾಮದ ಸಯ್ಯದ್ ಅಲಿ ನದಾಫ್ ಅವರನ್ನು ಬಂಧಿಸಿರುವ ಕೇಶ್ವಾಪುರ ಠಾಣೆ ಪೊಲೀಸರು, ₹20 ಲಕ್ಷ ಮೌಲ್ಯದ 12 ಬೈಕ್ಗಳನ್ನು ವಶಕ್ಕೆ ಪಡೆದಿದ್ದಾರೆ.
ಏಳು ರಾಯಲ್ ಎನ್ಫೀಲ್ಡ್, ಎರಡು ಎನ್ಟಾರ್ಕ್, ಹೊಂಡಾ ಡಿಯೊ, ಯಮಾಹಾ ಮತ್ತು ಬಜಾಜ್ ಪಲ್ಸರ್ ವಶಕ್ಕೆ ಪಡೆದಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆರೋಪಿ, ಬೆಂಗಳೂರು, ಬೆಳಗಾವಿ ಮತ್ತು ಹುಬ್ಬಳ್ಳಿ ನಗರದ ವಿವಿಧೆಡೆಯ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿದ್ದ ಬೈಕ್ಗಳನ್ನು ಕಳವು ಮಾಡುತ್ತಿರುವುದಾಗಿ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೇಶ್ವಾಪುರ ಠಾಣೆ ವ್ಯಾಪ್ತಿಯಲ್ಲಿ ಬೈಕ್ ಕಳವು ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಇನ್ಸ್ಪೆಕ್ಟರ್ ಕೆ.ಎಸ್. ಹಟ್ಟಿ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು.
₹17.95 ಲಕ್ಷ ವಂಚನೆ: ಆನ್ಲೈನ್ ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಗಳಿಸಬಹುದು ಎಂದು ನಗರದ ರವಿ ಬಸಪ್ಪ ಅವರಿಗೆ ದೂರವಾಣಿ ಮೂಲಕ ಸಂಪರ್ಕಿಸಿದ ವ್ಯಕ್ತಿ, ಅವರಿಂದ ₹17.95 ಲಕ್ಷ ವರ್ಗಾಯಿಸಿಕೊಂಡು ವಂಚಿಸಿದ್ದಾನೆ.
ರವಿ ಅವರು ಫೇಸ್ಬುಕ್ ಖಾತೆಯಲ್ಲಿನ ಜಾಹೀರಾತು ನೋಡಿ, ಅದರಲ್ಲಿರುವ ಲಿಂಕ್ ಒತ್ತಿದ್ದಾರೆ. ಆಗ ವ್ಯಕ್ತಿಯೊಬ್ಬ ಅವರಿಗೆ ಕರೆ ಮಾಡಿ ಹಣಹೂಡಿಕೆ ಬಗ್ಗೆ ಮಾಹಿತಿ ನೀಡಿದ್ದಾನೆ. ನಂತರ ಮೊಬೈಲ್ ಫೋನ್ಗೆ ‘ಆಕ್ಸಿಸ್ ಸೆಕ್ಯೂರಿಟಿ’ ಅಪ್ಲಿಕೇಷನ್ ಅಳವಡಿಸಿಕೊಳ್ಳುವಂತೆ ಹೇಳಿ ಹಣ ವರ್ಗಾಯಿಸಿಕೊಂಡು ವಂಚಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.