ADVERTISEMENT

ಚುನಾವಣಾ ಆಯೋಗದ ನಿಯಮ ಉಲ್ಲಂಘಿಸಿಲ್ಲ: ಸಿಎಂ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2021, 5:05 IST
Last Updated 1 ಸೆಪ್ಟೆಂಬರ್ 2021, 5:05 IST
ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)   

ಹುಬ್ಬಳ್ಳಿ: ಇಲ್ಲಿನ ಮಹಾನಗರ ಪಾಲಿಕೆ ಚುನಾವಣೆಯ ಮತದಾನಕ್ಕೆ 48 ಗಂಟೆಗಳಷ್ಟೇ ಬಾಕಿ ಉಳಿದಿದ್ದು, ಚುನಾವಣಾ ಆಯೋಗದ ಯಾವುದೇ ನಿಯಮವನ್ನು ಉಲ್ಲಂಘಿಸಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸೆ. 3ರಂದು ಪಾಲಿಕೆ ಚುನಾವಣೆಗೆ ಮತದಾನ ನಡೆಯಲಿದ್ದು, ಸೆ. 1ರಂದು ಬೆಳಿಗ್ಗೆ 7 ಗಂಟೆಯ ನಂತರ ಮತದಾರರಲ್ಲದ ಬೆಂಬಲಿಗರು, ರಾಜಕೀಯ ಪಕ್ಷದ ಪದಾಧಿಕಾರಿಗಳು, ಮುಖಂಡರು, ಪಕ್ಷದ ಕಾರ್ಯಕರ್ತರು ನಗರ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯಲ್ಲಿ ಇರುವಂತಿಲ್ಲ ಎಂದು ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಆದೇಶ ಹೊರಡಿಸಿದ್ದಾರೆ.

ಬೊಮ್ಮಾಯಿ ಅವರು ಇಲ್ಲಿನ ವಿಮಾನ ನಿಲ್ದಾಣದಿಂದ ಶಿಗ್ಗಾವಿಗೆ ಹೋದರು. ಬುಧವಾರ ರಾತ್ರಿ ಇಲ್ಲಿಯೇ ತಮ್ಮ ನಿವಾಸದಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅವರನ್ನು ಮಾಧ್ಯಮದವರು ಕೇಳಿದ ಪ್ರಶ್ನೆಗೆ ‘ಹುಬ್ಬಳ್ಳಿ–ಧಾರವಾಡದಲ್ಲಿ ನಾನು ಯಾವುದೇ ರಾಜಕೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದಿಲ್ಲ. ಯಾವ ನಿಯಮವೂ ಉಲ್ಲಂಘಿಸಿಲ್ಲ. ಹುಬ್ಬಳ್ಳಿ ಮಾರ್ಗವಾಗಿ ನನ್ನ ಕ್ಷೇತ್ರಕ್ಕೆ ಹೋಗುತ್ತಿದ್ದೇನೆ ಅಷ್ಟೇ’ ಎಂದರು.

ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ನಿತೇಶ್ ‘ಮುಖ್ಯಮಂತ್ರಿ ಅವರು ಹುಬ್ಬಳ್ಳಿ ನಿವಾಸಿಯಾಗಿದ್ದಾರೆ. ಅವರ ಸ್ವಂತ ಮನೆಯೂ ಇಲ್ಲಿಯೇ ಇದ್ದು, ಮತದಾನದ ಹಕ್ಕು ಹೊಂದಿದ್ದಾರೆ. ಚುನಾವಣಾ ಪ್ರಚಾರಕ್ಕೆ ಬಂದವರು ವಾಸ್ತವ್ಯ ಹೂಡುವಂತಿಲ್ಲ ಎಂದು ಆಯೋಗ ಸ್ಪಷ್ಟವಾಗಿ ತಿಳಿಸಿದೆ. ಬುಧವಾರ ಹಾಗೂ ಗುರುವಾರ ಹಲವು ಸಚಿವರು ಬರುತ್ತಿದ್ದು, ಯಾರೂ ಪ್ರಚಾರ ಕಾರ್ಯದಲ್ಲಿ ತೊಡಗುತ್ತಿಲ್ಲ. ಬಹಿರಂಗ ಪ್ರಚಾರವೂ ಈಗಾಗಲೇ ಅಂತ್ಯ ಕಂಡಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.