ಹುಬ್ಬಳ್ಳಿ: ತಾಲ್ಲೂಕು ಪಂಚಾಯ್ತಿಯ 27 ವರ್ಷದ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟ ಕಾರಣ ಸೋಮವಾರ ಮಿನಿವಿಧಾನ ಸೌಧದ ಕಟ್ಟಡವನ್ನು ಸ್ಯಾನಿಟೈಸ್ ಮಾಡಲಾಗಿದೆ.
ಸೋಂಕು ದೃಢಪಟ್ಟ ವ್ಯಕ್ತಿ ತಮ್ಮ ಸ್ನೇಹಿತನೊಂದಿಗೆ ಓಡಾಡಿದ್ದರು. ಆ ವ್ಯಕ್ತಿಗೆ ಸೋಂಕು ದೃಢಪಟ್ಟಿದ್ದರಿಂದ ಆತಂಕಕ್ಕೆ ಒಳಗಾದ ತಾಲ್ಲೂಕು ಪಂಚಾಯ್ತಿ ಉದ್ಯೋಗಿ ಜೂ. 26ರಂದು ಸ್ವಯಂಪ್ರೇರಿತರಾಗಿ ಕೊರೊನಾ ಪರೀಕ್ಷೆಗೆ ಒಳಗಾಗಿದ್ದರು. ಅವರ ಪರೀಕ್ಷಾ ವರದಿ ಸೋಮವಾರ ಬಂದಿದೆ. ಆದ್ದರಿಂದ ತಾಲ್ಲೂಕು ಆಡಳಿತದ ಕೆಲ ಉದ್ಯೋಗಿಗಳನ್ನು ಮನೆಗೆ ಕಳುಹಿಸಿ, ಅಲ್ಲಿಂದಲೇ ಕರ್ತವ್ಯ ನಿರ್ವಹಿಸುವಂತೆ ಸೂಚಿಸಲಾಯಿತು.
ನಮ್ಮ ಸಿಬ್ಬಂದಿ ಕೊರೊನಾ ಪರೀಕ್ಷೆಗೆ ಒಳಪಟ್ಟ ಬಳಿಕ ಕಚೇರಿಗೆ ಬಂದಿಲ್ಲ, ಆದ್ದರಿಂದ ಹೆಚ್ಚು ಆತಂಕವಿಲ್ಲ. ಯಾರಿಗಾದರೂ ಕೊರೊನಾ ಲಕ್ಷಣಗಳು ಕಂಡುಬಂದರೆ ಸ್ವಯಂಪ್ರೇರಿತರಾಗಿ ಪರೀಕ್ಷೆ ಮಾಡಿಸಿಕೊಳ್ಳುವಂತೆ ಹೇಳಿದ್ದೇನೆ. ಮಂಗಳವಾರ ಕೂಡ ಕಚೇರಿಯಲ್ಲಿ ಸ್ಯಾನಿಟೈಸ್ ಮಾಡಲಾಗುವುದು. ಅಗತ್ಯ ಸಿಬ್ಬಂದಿ ಮಾತ್ರ ಕಚೇರಿಯಿಂದ ಕಾರ್ಯ ನಿರ್ವಹಿಸಲಿದ್ದಾರೆ ಎಂದು ತಾಲ್ಲೂಕು ಕಚೇರಿಯ ಅಧಿಕಾರಿಯೊಬ್ಬರು ತಿಳಿಸಿದರು.
ಅಗತ್ಯವಿದ್ದವರಿಗಷ್ಟೇ ಅನುಮತಿ: ಮಿನಿವಿಧಾನ ಸೌಧದ ಕಟ್ಟಡದಲ್ಲಿ ಕೆಲಸ ನಿರ್ವಹಿಸುವ ಸಿಬ್ಬಂದಿಗೆ ಸೋಂಕು ಖಚಿತವಾದ ಹಿನ್ನೆಲೆಯಲ್ಲಿ ಸೋಮವಾರ ಮಹಾನಗರ ಪಾಲಿಕೆಗೆ ಕಟ್ಟೆಚ್ಚರ ವಹಿಸಲಾಗಿದ್ದು, ತುರ್ತು ಕೆಲಸ ಇರುವವರಿಗೆ ಮಾತ್ರ ಪಾಲಿಕೆಯ ಆವರಣದ ಒಳಗೆ ಬಿಡಲಾಗುತ್ತಿತ್ತು. ಪಾಲಿಕೆಯ ಪ್ರವೇಶ ದ್ವಾರದಲ್ಲಿ ಬ್ಯಾರಿಕೇಡ್ಗಳನ್ನು ಹಾಕಲಾಗಿತ್ತು. ಅಲ್ಲಿನ ಭದ್ರತಾ ಸಿಬ್ಬಂದಿ ಪ್ರತಿಯೊಬ್ಬರನ್ನೂ ವಿಚಾರಿಸಿ ಒಳಗೆ ಬಿಡುತ್ತಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.