ಹುಬ್ಬಳ್ಳಿ: ‘ಗಂಗಾವತಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ನಾನು ಎರಡು ಬಾರಿ ಗೆದ್ದಿರುವುದರಿಂದ, ಮುಂಬರುವ ಚುನಾವಣೆಯಲ್ಲೂ ಅದೇ ಕ್ಷೇತ್ರದ ಅಪೇಕ್ಷಿತ ಅಭ್ಯರ್ಥಿಯೂ ಹೌದು’ ಎಂದು ಶಾಸಕ ಪರಣ್ಣ ಮುನವಳ್ಳಿ ಹೇಳಿದರು.
ನಗರದಲ್ಲಿ ಭಾನುವಾರ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ‘ಜನಾರ್ದನ ರೆಡ್ಡಿ ಅವರು ಗಂಗಾವತಿಯಲ್ಲಿ ಮನೆ ಮಾಡಿರುವುದು ಹಾಗೂ ಹೊಸ ಪಕ್ಷ ಕಟ್ಟುವುದು ಅವರ ವೈಯಕ್ತಿಕ ವಿಚಾರ. ಗಂಗಾವತಿ ಕ್ಷೇತ್ರದಿಂದ ಯಾರು ಸ್ಪರ್ಧಿಸಬೇಕು ಎಂದು ತೀರ್ಮಾನ ಮಾಡುವುದು ಹೈಕಮಾಂಡ್. ವರಿಷ್ಠರ ನಿರ್ಧಾರಕ್ಕೆ ನಾನು ಬದ್ಧ’ ಎಂದರು.
‘ದೆಹಲಿಗೆ ಹೋದಾಗ ಪಕ್ಷ ಹಾಗೂ ಆರ್ಎಸ್ಎಸ್ ಮುಖಂಡರನ್ನು ಭೇಟಿಯಾಗುವುದು ಸಹಜ. ಇದೀಗ ಸಚಿವ ಜೋಶಿ ಅವರನ್ನು ಭೇಟಿಯಾಗಲು ಬಂದಿದ್ದೇನೆ. ಇದರಲ್ಲಿ ಯಾವುದೇ ವಿಶೇಷವಿಲ್ಲ’ ಎಂದ ಪರಣ್ಣ, ‘ಕೊಪ್ಪಳ ಜಿಲ್ಲೆಯಲ್ಲಿ 11 ಸರ್ಕಾರಿ ಕಟ್ಟಡಗಳನ್ನು ನೂತನವಾಗಿ ನಿರ್ಮಿಸಲಾಗಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಡಿ. 15ರಂದು ಅಲ್ಲಿಗೆ ಬಂದು, ಕಟ್ಟಡಗಳನ್ನು ಉದ್ಘಾಟಿಸಲಿದ್ದಾರೆ’ ಎಂದು ಹೇಳಿದರು.
‘ಜನಾರ್ದನ ರೆಡ್ಡಿ ಅವರು ಗಂಗಾವತಿಯಲ್ಲಿ ಮನೆ ಖರೀದಿಸಿದ್ದು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅವರು ಇಲ್ಲಿಂದಲೇ ಸ್ಪರ್ಧಿಸಲಿದ್ದಾರೆ’ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ನಡೆಯುತ್ತಿರುವಾಗಲೇ, ಅಲ್ಲಿಯ ಶಾಸಕ ಪರಣ್ಣ ಅವರು ಸಚಿವ ಜೋಶಿ ಅವರನ್ನು ಭೇಟಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.