ADVERTISEMENT

ಕೂಡಲಸಂಗಮ ಶ್ರೀ ಭಕ್ತರಿಂದ ಜೀವ ಬೆದರಿಕೆ: ಪುಟ್ಟಸಿದ್ದಶೆಟ್ಟಿ

ಕಾಯಕ ಸಮಾಜಗಳ ಒಕ್ಕೂಟದ ಅಧ್ಯಕ್ಷ ಕೆ.ಸಿ. ಪುಟ್ಟಸಿದ್ದಶೆಟ್ಟಿ ಆರೋಪ

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2022, 12:45 IST
Last Updated 14 ಅಕ್ಟೋಬರ್ 2022, 12:45 IST
ಕೆ.ಸಿ. ಪುಟ್ಟಸಿದ್ದಶೆಟ್ಟಿ, ಅಧ್ಯಕ್ಷ, ಕರ್ನಾಟಕ ಕಾಯಕ ಸಮಾಜಗಳ‌ ಒಕ್ಕೂಟ
ಕೆ.ಸಿ. ಪುಟ್ಟಸಿದ್ದಶೆಟ್ಟಿ, ಅಧ್ಯಕ್ಷ, ಕರ್ನಾಟಕ ಕಾಯಕ ಸಮಾಜಗಳ‌ ಒಕ್ಕೂಟ   

ಹುಬ್ಬಳ್ಳಿ: ‘ಪಂಚಮಸಾಲಿ ಸಮಾಜದ 2ಎ ಮೀಸಲಾತಿ ಬೇಡಿಕೆಗೆ ಸರ್ಕಾರ ಮನ್ನಣೆ ನೀಡಬಾರದು ಎಂದು ಹೇಳಿಕೆ‌ ನೀಡಿದ್ದಕ್ಕಾಗಿ ಕೂಡಲ ಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಭಕ್ತರು ನನಗೆ ಹಾಗೂ ಆಪ್ತರಿಗೆ ಜೀವ ಬೆದರಿಕೆ ಹಾಕುತ್ತಿದ್ದಾರೆ’ ಎಂದು ಕರ್ನಾಟಕ ರಾಜ್ಯ ಕಾಯಕ ಸಮಾಜಗಳ ಒಕ್ಕೂಟದ ಅಧ್ಯಕ್ಷ ಕೆ.ಸಿ. ಪುಟ್ಟಸಿದ್ದಶೆಟ್ಟಿ ಆರೋಪಿಸಿದರು.

‘ನಮ್ಮ ಹೋರಾಟ ಯಾವುದೇ ಸಮಾಜದ ವಿರುದ್ಧವಲ್ಲ. ಆದರೆ, ಕೂಡಲ ಸಂಗಮ ಸ್ವಾಮೀಜಿ ಭಕ್ತರು, ವೈಯಕ್ತಿಕವಾಗಿ ಪರಿಗಣಿಸಿ ನನಗೆ ಜೀವ ಬೆದರಿಕೆ ಹಾಕುತ್ತಿದ್ದಾರೆ’ ಎಂದು ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಹಿಂದೆ ನಡೆಸಿದ ಸುದ್ದಿಗೋಷ್ಠಿಯಲ್ಲಿ ಕಾಯಕ ಸಮಾಜಕ್ಕಿರುವ ಶೇ 15ರಷ್ಟು ಮೀಸಲಾತಿ ಉಳಿವಿನ ಕುರಿತು ಮಾತನಾಡಿದ್ದೇನೆ. ನಾನು ಆಡಿದ ಮಾತುಗಳು ಪಂಚಮಸಾಲಿ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಆ ಸಮಾಜದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಂಚಮಸಾಲಿ ಸಮಾಜದ ಸ್ವಾಮೀಜಿ ಹಾಗೂ ಅವರ ಭಕ್ತರ ಭಾವನೆಗಳಿಗೆ ಧಕ್ಕೆಯಾಗಿದ್ದರೆ ಬಹಿರಂಗ ಕ್ಷಮೆ ಕೋರುತ್ತೇನೆ. ಆದರೆ ಅವರು ಹಿಂದುಳಿದ ಸಮುದಾಯವಾದ ನಮ್ಮ ಮೇಲೆ ತೋಳ್ಬಲ ಪ್ರದರ್ಶಿಸುತ್ತಿದ್ದಾರೆ’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.