ADVERTISEMENT

ಅಸಮಾಧಾನ ಇಲ್ಲ ಕಾಂಗ್ರೆಸ್ ಪಕ್ಷಕ್ಕೆ ದುಡಿಯುತ್ತೇನೆ

ರಾಷ್ಟ್ರದ ಏಕತೆ– ಉಳಿವಿಗಾಗಿ ಅಲ್ಪಸಂಖ್ಯಾತರು ಕಾಂಗ್ರೆಸ್ ಬೆಂಬಲಿಸುವರು: ಶಾಕಿರ್ ಸನದಿ

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2019, 17:18 IST
Last Updated 10 ಏಪ್ರಿಲ್ 2019, 17:18 IST

ಹುಬ್ಬಳ್ಳಿ: ‘ವಿನಯ ಕುಲಕರ್ಣಿ ಅವರಿಗೆ ಧಾರವಾಡ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ನೀಡಿರುವ ಪಕ್ಷದ ತೀರ್ಮಾನಕ್ಕೆ ಬದ್ಧನಾಗಿದ್ದೇನೆ. ಅಸಮಾಧಾನ ಇಲ್ಲ, ಪಕ್ಷದ ಗೆಲುವಿಗೆ ದುಡಿಯುತ್ತೇನೆ’ ಎಂದು ಎಐಸಿಸಿ ಕಾರ್ಯದರ್ಶಿ ಶಾಕಿರ್ ಸನದಿ ಹೇಳಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್ ಅಲ್ಪಸಂಖ್ಯಾತರ ಪರವಾಗಿ ಇದೆ. ಯಾವಾಗಲೂ ಈ ಸಮುದಾಯವನ್ನು ಕೈಬಿಟ್ಟಿಲ್ಲ. ಹಲವಾರು ಮಂದಿ ಟಿಕೆಟ್ ಕೇಳಿ ಅರ್ಜಿ ಹಾಕಿದ್ದರು. ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಹಿರಿಯ ಮುಖಂಡರು ಅಂತಿಮ ತೀರ್ಮಾನ‌ ಮಾಡಿದ್ದಾರೆ’ ಎಂದರು.

‘ವಯನಾಡು ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವುದರಿಂದ ಇಲ್ಲಿ ಪ್ರಚಾರ ಮಾಡಲು ಸಾಧ್ಯವಾಗಿಲ್ಲ. ಇನ್ನು ಮುಂದೆ ಧಾರವಾಡ ಕ್ಷೇತ್ರದಲ್ಲಿ ಸಹ ಪ್ರಚಾರ ಮಾಡುತ್ತೇನೆ. ಬೆಂಬಲಿಗರು ಸಹ ಪಕ್ಷದ ಪರ ಕೆಲಸ ಮಾಡುವರು. ದೇಶದ ಏಕತೆ, ಉಳಿವಿಗಾಗಿ ಅಲ್ಪಸಂಖ್ಯಾತರು ಕಾಂಗ್ರೆಸ್ ಜೊತೆ ಇರುತ್ತಾರೆ’ ಎಂದರು.

ADVERTISEMENT

ಧಾರವಾಡ ಗ್ರಾಮೀಣ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅನಿಲ ಕುಮಾರ ಪಾಟೀಲ ಮಾತನಾಡಿ, ಅಲ್ಪಸಂಖ್ಯಾತರು ಮುನಿಸಿಕೊಂಡಿದ್ದಾರೆ ಎಂದು ಬಿಜೆಪಿ ಅಪಪ್ರಚಾರ ಮಾಡುತ್ತಿದೆ. ಈ ಬಾರಿ ಕಾಂಗ್ರೆಸ್ ಗೆಲುವು ಖಚಿತ. ಶಾಕಿರ್ ಅವರಿಗೂ ಒಳ್ಳೆಯ ಸ್ಥಾನಮಾನ ಸಿಗಲಿದೆ ಎಂದರು.

ಸಂಸದ ಪ್ರಹ್ಲಾದ ಜೋಶಿ ಒಳ್ಳೆಯ ಕೆಲಸ ಮಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿರುವ ಬಗ್ಗೆ ನಮಗೆ ಗೊತ್ತಿಲ್ಲ. ಆದರೆ ಆ ರೀತಿ ಹೇಳಿಲ್ಲ ಎಂದು ಅವರು ತಿಳಿಸಿದ್ದಾರೆ. ಈ ಬಗ್ಗೆ ಅವರೇ ಸ್ಪಷ್ಟನೆ ನೀಡಲಿದ್ದಾರೆ ಎಂದರು.

ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ತಾಫ್ ಹಳ್ಳೂರ, ಮುಖಂಡರಾದ ಬಂಗಾರೇಶ ಹಿರೇಮಠ, ರಜತ್ ಉಳ್ಳಾಗಡ್ಡಿಮಠ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.