
ಹುಬ್ಬಳ್ಳಿ: ತಾಲ್ಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ಅನ್ಯಜಾತಿ ಯುವಕನ ಮದುವೆ
ಯಾಗಿದ್ದಕ್ಕೆ ಗರ್ಭಿಣಿ ಮೇಲೆ ತಂದೆ, ಕುಟುಂಬಸ್ಥರು ಭಾನುವಾರ ನಡೆಸಿದ್ದ ಮರ್ಯಾದೆಗೇಡು ಹತ್ಯೆ ಕೃತ್ಯದ ಸಂಬಂಧ 14ಕ್ಕೂ ಹೆಚ್ಚು ಜನರ ವಿರುದ್ಧ ಪ್ರಕರಣ ದಾಖಲಾಗಿದೆ.
6 ತಿಂಗಳ ಗರ್ಭಿಣಿ ಮಾನ್ಯಾ ದೊಡ್ಡಮನಿ (19) ಮೃತರು. ಅವರ ಪತಿ ವಿವೇಕಾನಂದ ದೊಡ್ಡಮನಿ ಅವರು ಮಾನ್ಯಾ ತಂದೆ ಪ್ರಕಾಶಗೌಡ ಪಾಟೀಲ ಹಾಗೂ ಅವರ ಕುಟುಂಬದವರ ವಿರುದ್ಧ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಹಲ್ಲೆಯಿಂದಾಗಿ ವಿವೇಕಾನಂದ ಅವರ ತಾಯಿ ರೇಣವ್ವ ಹಾಗೂ ದೊಡ್ಡಪ್ಪ ಯಲ್ಲಪ್ಪ ಅವರು ಗಂಭೀರವಾಗಿ ಗಾಯಗೊಂಡಿದ್ದು, ನಗರದ ವಿವೇಕಾನಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಏನಿದು ಪ್ರಕರಣ: ಇನಾಂ ವೀರಾಪುರ ಗ್ರಾಮದ ರೆಡ್ಡಿ ಲಿಂಗಾಯತ ಸಮುದಾಯದ ಮಾನ್ಯಾ, ಅದೇ ಗ್ರಾಮದ ಪರಿಶಿಷ್ಟ ಸಮುದಾಯದ ವಿವೇಕಾನಂದರನ್ನು ಪ್ರೀತಿಸಿ, ಮದುವೆಯಾಗಿದ್ದರು. ಜೀವ ಬೆದರಿಕೆ ಕಾರಣ ಅವರು ಧಾರವಾಡ ತಾಲ್ಲೂಕಿನ ಶಿವಳ್ಳಿಯಲ್ಲಿ ವಾಸವಿದ್ದರು.
ಡಿ.8ರಂದು ಅವರು ಇನಾಂ ವೀರಾಪುರಕ್ಕೆ ಬಂದಿದ್ದರು. ವಿಷಯ ತಿಳಿದ ಮಾನ್ಯಾ ಅವರ ತಂದೆ, ಕುಟುಂಬಸ್ಥರು, ಹೊಲದಲ್ಲಿದ್ದ ವಿವೇಕಾನಂದ ಹಾಗೂ ಅವರ ತಂದೆ ಮೇಲೆ ಹಲ್ಲೆ ನಡೆಸಿದ್ದಾರೆ. ಅವರ ಮನೆಗೆ ತೆರಳಿ ಮಾನ್ಯಾ, ಕುಟುಂಬಸ್ಥರ ಮೇಲೂ ಹಲ್ಲೆ ಮಾಡಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಮಾನ್ಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಗರ್ಭದಲ್ಲಿದ್ದ ಶಿಶುವೂ ಸಾವಿಗೀಡಾಗಿದೆ.
ಕೆಎಂಸಿ-ಆರ್ಐ ಆಸ್ಪತ್ರೆಯಲ್ಲಿ ಸೋಮವಾರ ಮಾನ್ಯಾ ಅವರ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಶವ ಹಸ್ತಾಂತರಿಸಲಾಯಿತು. ಈ ವೇಳೆ ರಾಜ್ಯ ದಲಿತ ವಿಮೋಚನಾ ಸಮಿತಿ ಕಾರ್ಯಕರ್ತರು, ‘ಮಾನ್ಯಾ ಸಾವಿಗೆ ನ್ಯಾಯ ಸಿಗಬೇಕು’ ಎಂದು ಘೋಷಣೆ ಕೂಗಿದರು.
‘ಮದುವೆಗೆ ಮಾನ್ಯಾ ಅವರ ಪಾಲಕರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಆಗಾಗ್ಗೆ ಜೀವ ಬೆದರಿಕೆ ಹಾಕುತ್ತಿದ್ದರು. ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು’ ಎಂದು ವಿವೇಕಾನಂದ ಆಗ್ರಹಿಸಿದರು. ಬಿಗಿ ಭದ್ರತೆಯಲ್ಲಿ ಸೋಮವಾರ ಮಾನ್ಯಾ ಅಂತ್ಯಕ್ರಿಯೆ ನಡೆಯಿತು.
ಪರಿಶಿಷ್ಟ ಸಮುದಾಯದ ಯುವಕನನ್ನು ಪ್ರೀತಿಸಿ ವರಿಸಿದ್ದ ಮಾನ್ಯಾ
ಡಿ.8ರಂದು ಇನಾಂ ವೀರಾಪುರಕ್ಕೆ ಬಂದಿದ್ದಾಗ ಕುಟುಂಬಸ್ಥರಿಂದ ಹಲ್ಲೆ
ಆಸ್ಪತ್ರೆಯಲ್ಲಿ ಸಾವು
ಪ್ರಕರಣ ಸಂಬಂಧ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ. ಉಳಿದ ಆರೋಪಿಗಳ ಬಂಧನಕ್ಕೆ ವಿಶೇಷ ತಂಡ ರಚಿಸಲಾಗಿದೆಗುಂಜನ್ ಆರ್ಯ,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಧಾರವಾಡ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.