ಹುಬ್ಬಳ್ಳಿ: ಕೋವಿಡ್ ಲಸಿಕೆ ಪಡೆಯುವುದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ನಂತರ ಕೋವಿಡ್ ದೃಢಪಟ್ಟರೂ ಭಯಪಡುವ ಅಗತ್ಯವಿಲ್ಲ. ನಿಯಮಿತ ಔಷಧೋಪಚಾರದಿಂದ ಗುಣಮುಖರಾಗಬಹುದು ಎಂದು ಸಚಿವ ಶಂಕರಪಾಟೀಲ ಮುನೇನಕೊಪ್ಪ ಹೇಳಿದರು.
ತಾಲ್ಲೂಕಿನ ಹೆಬಸೂರಿನ ಸೆಕೆಂಡರಿ ಸ್ಕೂಲ್ನಲ್ಲಿ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕೋವಿಡ್ ಮೊದಲ ಮತ್ತು ಎರಡನೇ ಅಲೆಗಳು ತೀವ್ರವಾಗಿ ಬಾಧಿಸಿವೆ. ಬಹಳಷ್ಟು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಮುಂಜಾಗ್ರತೆಗಾಗಿ ಜನರು ಯಾವುದೇ ಅಳುಕಿಲ್ಲದೆ ಕೋವಿಡ್ ಲಸಿಕೆ ಪಡೆಯಬೇಕು.ಲಸಿಕೆ ಪಡೆದ ಮಕ್ಕಳು ವಿಶ್ರಾಂತಿ ಪಡೆಯಬೇಕು. ಜಿಲ್ಲೆಯಲ್ಲಿ ಕೋವಿಡ್ ಮೊದಲ ಡೋಸ್ 14 ಲಕ್ಷ ಮಂದಿ, ಎರಡನೇ ಡೋಸ್ 11 ಲಕ್ಷ ಮಂದಿ ಪಡೆದಿದ್ದಾರೆ ಎಂದು ತಿಳಿಸಿದರು.
ಪಶ್ಚಿಮ ಬಂಗಾಳ, ಮಹಾರಾಷ್ಟ್ರದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಜ.7ರಂದು ತಜ್ಞರ ವರದಿ ಆಧರಿಸಿ ರಾಜ್ಯದಲ್ಲಿ ಯಾವ ಕ್ರಮ ಕೈಗೊಳ್ಳಬೇಕು ಎಂದು ತೀರ್ಮಾನಿಸಲಾಗುವುದು ಎಂದರು.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿ, ತಂದೆ, ತಾಯಿ ಆಸಕ್ತಿ ವಹಿಸಿ ಮಕ್ಕಳಿಗೆ ಕೋವಿಡ್ ಲಸಿಕೆ ಹಾಕಿಸಬೇಕು. ಕೋವಿಡ್ ನನಗೂ ಬಾಧಿಸಿದ್ದೂ, ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖನಾಗಿದ್ದೇನೆ. ಲಾಕ್ಡೌನ್ ಬೇಕೋ, ಬೇಡವೋ ಎನ್ನುವುದು ಜನರ ಕೈಯಲ್ಲಿಯೇ ಇದೆ. ಕೋವಿಡ್ ನಿಯಮಗಳನ್ನು ಪಾಲಿಸಿದರೆ ಸೋಂಕು ಹರಡುವುದು ತಪ್ಪುತ್ತದೆ ಎಂದರು.
ಜಿಲ್ಲಾ ಆರೋಗ್ಯಾಧಿಕಾರಿ ಯಶವಂತ್ ಮದೀನಕರ್, ಡಿಡಿಪಿಐ ಎಸ್.ಎಸ್. ಕೆಳದಿಮಠ, ಡಾ. ಎಸ್.ಎಂ. ಹೊನಕೇರಿ, ತಹಶೀಲ್ದಾರ್ ಪ್ರಕಾಶ ನಾಶಿ, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಗಂಗಾಧರ ಕಂದಕೂರ, ಗ್ರಾ.ಪಂ. ಅಧ್ಯಕ್ಷೆ ಮಲ್ಲಮ್ಮ ಕುರಡಿಕೇರಿ, ಶಾಲಾ ಆಡಳಿತ ಮಂಡಳಿ ಮುಖ್ಯಸ್ಥ ಆರ್.ಎಚ್. ಮಾಡ್ಯಳ್ಳಿ, ಬಿಇಒ ಅಶೋಕಕುಮಾರ್ ಸಿಂದಗಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.