ಹುಬ್ಬಳ್ಳಿ: ಕಳೆದ ವರ್ಷ ಅತಿವೃಷ್ಟಿ, ಈ ಬಾರಿ ಕೋವಿಡ್ -19 ಸಂಕಷ್ಟದ ಸಂದರ್ಭದಲ್ಲಿ ಹುಬ್ಬಳ್ಳಿ ತಾಲ್ಲೂಕು ಆಡಳಿತ ಸಮರ್ಥವಾಗಿ ಕೆಲಸ ನಿರ್ವಹಿಸುತ್ತಿದೆ. ಸಾರ್ವಜನಿಕರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ವೈದ್ಯಾಧಿಕಾರಿಗಳು , ನರ್ಸ್, ಆಶಾ , ಅಂಗನವಾಡಿ ಕಾರ್ಯಕರ್ತರು ,ಪೊಲೀಸರು , ಗ್ರಾಮ ಪಂಚಾಯತಿ ನೌಕರರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಒಟ್ಟಾಗಿ ಕೆಲಸ ನಿರ್ವಹಿಸಬೇಕು ಎಂದು ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರ್ ಪ್ರಕಾಶ್ ನಾಸಿ ಹೇಳಿದರು.
ಹುಬ್ಬಳ್ಳಿ ಮಿನಿವಿಧಾನ ಸೌಧದಲ್ಲಿ 74ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಸರ್ಕಾರಿ ನೌಕರರು ತಮ್ಮ ಜವಾಬ್ದಾರಿ ಅರಿತು ಕೋವಿಡ್ -19 ಹರಡುವಿಕೆ ತಡೆಗಟ್ಟಲು ಒಗ್ಗಟ್ಟಾಗಿ ಕೆಲಸ ಮಾಡಿದರೆ ಸದೃಢ ಹಾಗೂ ಆರೋಗ್ಯಕರ ಸಮಾಜ ನಿರ್ಮಾಣ ಮಾಡಲು ಸಾಧ್ಯವಿದೆ . ಈ ದಿಶೆಯಲ್ಲಿ ಅಂತರ ಕಾಪಾಡಿಕೊಳ್ಳಬೇಕು. ಮಾಸ್ಕ್ ಧರಿಸುವುದು, ಮೇಲಿಂದ ಮೇಲೆ ಸ್ಯಾನಿಟೈಸರ್ ಬಳಸಿ , ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು. ನಮ್ಮ ಆರೋಗ್ಯ ಕಾಪಾಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಕವಿ ರವೀಂದ್ರನಾಥ ಟ್ಯಾಗೋರ್ ಅವರ ವಾಣಿಯಂತೆ ಎಲ್ಲಿ ನನ್ನ ದೇಶವು ಉತ್ತುಂಗಕ್ಕೆ ತಲೆ ಎತ್ತಿ ನಿಲ್ಲುವುದೋ , ಅಲ್ಲಿಗೆ ನನ್ನ ದೇಶವನ್ನು ಕರೆದುಕೊಂಡು ಹೋಗು ಪ್ರಭುವೆ ಎನ್ನುವ ಆಶಯದಂತೆ ಈ ಕೊರೊನಾ ಸೋಂಕನ್ನು ಹೊಡೆದೊಡಿಸಲು ಶಕ್ತಿಯನ್ನು ದೇವರು ನಮಗೆಲ್ಲರಿಗೂ ನೀಡಲಿ ಎಂದು ಹೇಳಿದರು.
ಹುಬ್ಬಳ್ಳಿ ನಗರ ತಹಶೀಲ್ದಾರ್ ಶಶಿಧರ ಮಾಡ್ಯಾಳ, ಭೂದಾಖಲೆ ಸಹಾಯಕ ನಿರ್ದೇಶಕ ಅನಿಲ್ ಕುಮಾರ್ ಜಾಲಗೇರಿ, ಅಪರ ಜಿಲ್ಲಾ ಖಜಾನೆಯ ಅಧಿಕಾರಿ ಉಲ್ಲಾಸ್ ವಿ. ನಿಂಗರೆಡ್ಡಿ, ಹೆಚ್ಚುವರಿ ತಹಶೀಲ್ದಾರ್ ವಿಜಯಕುಮಾರ್ ಕಡಕೋಳ ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.