ADVERTISEMENT

ಹುಬ್ಬಳ್ಳಿ: ರಾಷ್ಟ್ರನಾಯಕರಿಗೆ ಅಪಮಾನ; ಬಿಎಸ್‌ಪಿ ಖಂಡನೆ

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2021, 3:01 IST
Last Updated 22 ಡಿಸೆಂಬರ್ 2021, 3:01 IST
ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿಯನ್ನು ಭಗ್ನಗೊಳಿಸಿದ ಆರೋಪಿಗಳನ್ನು ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸಿ ಬಿಎಸ್‌ಪಿ ಕಾರ್ಯಕರ್ತರು ಮಂಗಳವಾರ ಹುಬ್ಬಳ್ಳಿ ತಹಶೀಲ್ದಾರ್‌ ಕಚೇರಿಯ ಅಧಿಕಾರಿಗೆ ಮನವಿ ಸಲ್ಲಿಸಿದರು
ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿಯನ್ನು ಭಗ್ನಗೊಳಿಸಿದ ಆರೋಪಿಗಳನ್ನು ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸಿ ಬಿಎಸ್‌ಪಿ ಕಾರ್ಯಕರ್ತರು ಮಂಗಳವಾರ ಹುಬ್ಬಳ್ಳಿ ತಹಶೀಲ್ದಾರ್‌ ಕಚೇರಿಯ ಅಧಿಕಾರಿಗೆ ಮನವಿ ಸಲ್ಲಿಸಿದರು   

ಹುಬ್ಬಳ್ಳಿ: ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಭಗ್ನಗೊಳಿಸಿದ, ಖಾನಾಪುರದಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಹಾಗೂ ಬೆಂಗಳೂರಿನಲ್ಲಿ ಶಿವಾಜಿ ಮಹಾರಾಜರ ಪ್ರತಿಮೆಗೆ ಮಸಿ ಬಳಿದ, ಕನ್ನಡ ಬಾವುಟ ಸುಟ್ಟ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬಹುಜನ ಸಮಾಜ ಪಾರ್ಟಿಯ ಕಾರ್ಯಕರ್ತರು ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

ಯಾರೇ ಆಗಲಿ ರಾಷ್ಟ್ರನಾಯಕರ ಪ್ರತಿಮೆಗಳಿಗೆ ಅವಮಾನ ಮಾಡುವುದು ಖಂಡನೀಯ. ಇಂತಹ ಪ್ರಕರಣಗಳು ಪದೇ ಪದೇ ನಡೆಯುತ್ತಿದ್ದು, ಸರ್ಕಾರ ಅದಕ್ಕೆ ಕಡಿವಾಣ ಹಾಕುವಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಬಂಧಿತ ಆರೋಪಿ ಕಾಂಗ್ರೆಸ್‌ ಕಾರ್ಯಕರ್ತನಾಗಿದ್ದು, ಡಿ.ಕೆ. ಶಿವಕುಮಾರ ಮತ್ತು ಸಿದ್ದರಾಮಯ್ಯ ಅವರ ನಿಕಟವರ್ತಿಯಾಗಿದ್ದಾನೆ. ಪ್ರಕರಣವನ್ನು ತನಿಖೆಗೆ ಒಳಪಡಿಸಿ, ಅದರ ಹಿಂದಿರುವವರು ಯಾರು ಎನ್ನುವುದನ್ನು ಪತ್ತೆ ಹಚ್ಚಬೇಕು. ಭಾಷೆಯ ಹೆಸರಲ್ಲಿ ಬಾವುಟ ಸುಡುವ ಕೃತ್ಯ ಸರಿಯಲ್ಲ. ಎಂಇಎಸ್‌ ಅಥವಾ ಇನ್ಯಾವುದೇ ಸಂಘಟನೆಯಾಗಲಿ ಕನ್ನಡ ವಿರೋಧಿ ಚಟುವಟಿಕೆ ನಡೆಸಿದರೆ, ಕಾನೂನು ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿರುವ ಮಹಾಪುರುಷರ ಪ್ರತಿಮೆಗಳಿಗೆ ಹಾಗೂ ಪುತ್ಥಳಿಗೆ ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ADVERTISEMENT

ರೇವಣಸಿದ್ದಪ್ಪ ದೇಸಾಯಿ, ಹನುಮಂತಪ್ಪ ಮೇಗಳಮನಿ, ದೇವೇಂದ್ರಪ್ಪ ಇಚಗಿ, ಆಶಿಷ್‌ ಅಸ್ಪಾಕ್‌, ಆರೀಫ್‌, ಬಸವರಾಜ, ಮಂಜುನಾಥ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.