ADVERTISEMENT

ಗ್ಯಾರಂಟಿ ಯೋಜನೆಗಳಿಂದ ಜನರ ಬದುಕಿನಲ್ಲಿ ಬದಲಾವಣೆ: ಸಚಿವ ಸಂತೋಷ ಲಾಡ್

ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2026, 4:06 IST
Last Updated 21 ಫೆಬ್ರುವರಿ 2026, 4:06 IST
ಕಲಘಟಗಿ ಪಟ್ಟಣ ಪಂಚಾಯತಿ ಎದುರುಗಡೆ ಶುಕ್ರವಾರ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಕ್ಷೇತ್ರ ಪ್ರಚಾರದ ಎಲ್‍ಇಡಿ ವಾಹನಕ್ಕೆ ಚಾಲನೆ ನೀಡಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಾತನಾಡಿದರು
ಕಲಘಟಗಿ ಪಟ್ಟಣ ಪಂಚಾಯತಿ ಎದುರುಗಡೆ ಶುಕ್ರವಾರ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಕ್ಷೇತ್ರ ಪ್ರಚಾರದ ಎಲ್‍ಇಡಿ ವಾಹನಕ್ಕೆ ಚಾಲನೆ ನೀಡಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಾತನಾಡಿದರು   

ಕಲಘಟಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಐದು ಗ್ಯಾರಂಟಿಗಳ ಸಮರ್ಥ ಜಾರಿಯಿಂದ ಸರ್ಕಾರ ಹೊಸ ದಾಖಲೆ ನಿರ್ಮಿಸಿದೆ. ಈ ಯೋಜನೆಗಳಿಂದ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲೂ ವ್ಯಾಪಕ ಪರಿಣಾಮ ಬೀರಿವೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು.

ಪಟ್ಟಣ ಪಂಚಾಯತಿ ಎದುರುಗಡೆ ಶುಕ್ರವಾರ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಕ್ಷೇತ್ರ ಪ್ರಚಾರದ ಎಲ್‍ಇಡಿ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದರು.

ಪ್ರಚಾರ ವಾಹನ ಜಿಲ್ಲೆಯಾದ್ಯಂತ 20 ಗ್ರಾಮಗಳಲ್ಲಿ ಸಂಚರಿಸಿ ಸರ್ಕಾರದ ಗ್ಯಾರಂಟಿ ಯೋಜನೆಗಳ ಮಾಹಿತಿ ಜನರಿಗೆ ತಲುಪಿಸಲಿದೆ ಎಂದರು.

ADVERTISEMENT

ಗ್ಯಾರಂಟಿ ಯೋಜನೆಗಳ ಜಿಲ್ಲಾ ಪ್ರಗತಿ: ಧಾರವಾಡ ಜಿಲ್ಲೆಯಲ್ಲಿ ಶಕ್ತಿ ಯೋಜನೆಗೆ 727.78 ಕೋಟಿ ಬಿಡುಗಡೆಯಾಗಿದೆ. ಗೃಹಲಕ್ಷ್ಮಿ ಯೋಜನೆಗೆ 3,81,493 ಜನ ಫಲಾನುಭವಿಗಳಿದ್ದು, ರೂ. 1,740 ಕೋಟಿ ಹಣ ಜಮೆಯಾಗಿರುತ್ತದೆ. ಗೃಹಜ್ಯೋತಿ ಯೋಜನೆಗೆ ರೂ. 639 ಕೋಟಿ ಅನುದಾನ ನೀಡಲಾಗಿದ್ದು, 5,16,948 ಫಲಾನುಭವಿಗಳು ಲಾಭ ಪಡೆದಿದ್ದಾರೆ. ಅನ್ನಭಾಗ್ಯ ಯೋಜನೆಗೆ ರೂ.358.29 ಕೋಟಿ ವೆಚ್ಚವಾಗಿದ್ದು, 3,62,516 ಫಲಾನುಭವಿಗಳು ಪ್ರಯೋಜನ ಪಡೆದಿದ್ದಾರೆ. ಯುವನಿಧಿ ಯೋಜನೆ ಅಡಿಯಲ್ಲಿ 7,920 ಫಲಾನುಭವಿಗಳಿಗೆ ರೂ.19.95 ಕೋಟಿ ಹಣ ಡಿಬಿಟಿ ಮೂಲಕ ಹಣ ಜಮೆಯಾಗಿದೆ. ಒಟ್ಟು ರೂ. 3485.02 ಕೋಟಿ ಮೊತ್ತವನ್ನು ಗ್ಯಾರಂಟಿ ಯೋಜನೆಗಳಡಿ ಜಿಲ್ಲೆಯಲ್ಲಿ ವೆಚ್ಚ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಗ್ಯಾರಂಟಿ ಹಾಡುಗಳಿಗೆ ತಾಳ ಹಾಕಿ, ಹಾಡು ಹಾಡಿದ ಸಚಿವರು. ಗ್ಯಾರಂಟಿ ಯೋಜನೆಗಳ ಪ್ರಚಾರಕ್ಕಾಗಿ ರೂಪುಗೊಂಡ ಕಲಾತಂಡಗಳೊಂದಿಗೆ ಸಚಿವರು ಸ್ವತಃ ಸಂಗೀತ ಹಾಡಿ, ತಾಳ ಬಾರಿಸಿ ಕಲಾವಿದರ ಪ್ರೋತ್ಸಾಹಿಸಿದರು.

ಪ್ರಚಾರ ವಾಹನದೊಂದಿಗೆ ಕುಂದಗೋಳ ತಾಲ್ಲೂಕಿನ ಹರ್ಲಾಪೂರ ಗ್ರಾಮದ ಸ್ವಾಮಿ ವಿವೇಕಾನಂದ ಜಾನಪದ ಕಲಾತಂಡದವರು ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಕುರಿತು ಜನಪದ ಹಾಡುಗಳು ಹಾಗೂ ಬೀದಿ ನಾಟಕಗಳ ಮುಖಾಂತರ ಜನರಲ್ಲಿ ಜಾಗೃತಿ ಕಾರ್ಯಕ್ರಮ ಮೂಡಿಸಲಿದ್ದಾರೆ.

ಜಿಲ್ಲಾ ಗ್ಯಾರಂಟಿ ಯೋಜನೆ ಅಧ್ಯಕ್ಷ ಎಸ್. ಆರ್ ಪಾಟೀಲ, ವಾರ್ತಾ ಇಲಾಖೆ ಪ್ರಭಾರ ಸಹಾಯಕ ನಿರ್ದೇಶಕ ಸುರೇಶ ಹಿರೇಮಠ, ಮನೋಜ ಮಸನಿ,ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಜೀಜ್ ದೇಸಾಯಿ, ತಹಶೀಲ್ದಾರ ಬಸವರಾಜ ಹೊಂಕಣನವರ, ತಾಲ್ಲೂಕು ಪಂಚಾಯಿತಿ ಇಒ ಪಿ.ವೈ ಸಾವಂತ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಚಂದ್ರಶೇಖರ ಬಿ., ಸಿಪಿಐ ಶ್ರೀಶೈಲ ಕೌಜಲಗಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಮುರಳ್ಳಿ, ನರೇಶ ಮಲೆನಾಡು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.