ಹುಬ್ಬಳ್ಳಿ: ಆರ್ಎಸ್ಎಸ್, ಬಿಜೆಪಿಯ ದೊಡ್ಡಪ್ಪ. ಸುಳ್ಳಿನ ಕಂತೆಯನ್ನೇ ಅವರು ಪ್ರಚಾರ ಮಾಡುತ್ತಾರೆ. ಅದಕ್ಕೆ ಜನರೂ ಬಲಿಯಾಗುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಟೀಕಿಸಿದರು.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಧನೆ ಮಾಡದೆ, ಸುಳ್ಳಿನ ಕಂತೆ ಹೇಳಿ ಜನರನ್ನು ನಂಬಿಸುತ್ತಿದ್ದಾರೆ. ಜನರು ಎಚ್ಚರಿಸುವ ಕೆಲಸ ಆಗಬೇಕಿದೆ ಎಂದರು.
ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ನಾಲ್ವರು ಮುಖ್ಯಮಂತ್ರಿಗಳಾಗುವುದು ಖಚಿತ. ಈಗ ಇಬ್ಬರು ಆಗಿದ್ದಾರೆ. ಇನ್ನಿಬ್ಬರು ಆಗಬೇಕಿದೆ ಎಂದು ವ್ಯಂಗ್ಯವಾಡಿದರು.
ಅವಿಭಜಿತ ಧಾರವಾಡ ವಿಧಾನ ಪರಿಷತ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರು ಕ್ಷೇತ್ರವಾಗಿದೆ. ಹಣ, ಅಧಿಕಾರ, ತೋಳ್ಬಲ, ಆಮಿಷ ಒಡ್ಡುವ ಹಾಗೂ ಭಯ ಸೃಷ್ಟಿ ಮಾಡುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ಆರೋಪಿಸಿದರು.
ಹಾನಗಲ್ ವಿಧಾನಸಭಾ ಉಪ ಚುನಾವಣೆಯಲ್ಲಿ ಹೀಗೆ ಮಾಡಿದಾಗ ಜನರು ಬುದ್ಧಿ ಕಲಿಸಿದ್ದರು. ಈಗಲೂ ಹಾಗೆಯೇ ಮಾಡಲಿದ್ದಾರೆ. ಪಂಚಾಯತ್ ರಾಜ್ ವ್ಯವಸ್ಥೆ ಬಲ ಪಡಿಸಲು ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡಬೇಕು ಎಂದು ಮನವಿ ಮಾಡಿದರು.
ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಗರು ಪಕ್ಷದ ಅಭ್ಯರ್ಥಿಗೆ ಮಾತ್ರ ಮೊದಲ ಪ್ರಾಶಸ್ತ್ಯ ಮತ ನೀಡಬೇಕು. ಮೊದಲ ಪ್ರಾಶಸ್ತ್ಯದ ಮತದಲ್ಲಿಯೇ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.