ಹುಬ್ಬಳ್ಳಿ: ಉತ್ತರ ಕರ್ನಾಟಕದ ಹುಬ್ಬಳ್ಳಿ-ಧಾರವಾಡ, ಗದಗ, ವಿಜಯಪುರ, ಬೆಳಗಾವಿ ವಿಭಾಗದಲ್ಲಿನ ಕೈಗಾರಿಕಾ ವಸಾಹತುಗಳನ್ನು ವಿಶೇಷ ಸೌಲಭ್ಯಗಳೊಂದಿಗೆ ಅಭಿವೃದ್ಧಿ ಪಡಿಸಬೇಕು ಎಂಬುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಈ ಬಾರಿ ಬಜೆಟ್ನಲ್ಲಿ ಆದ್ಯತೆ ನೀಡಬೇಕು ಎಂದು ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯು (ಕೆಸಿಸಿಐ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದೆ.
ಬೆಂಗಳೂರಿನಲ್ಲಿ ಈಚೆಗೆ ಮುಖ್ಯಮಂತ್ರಿಯವರನ್ನು ಭೇಟಿಯಾದ ಕೆಸಿಸಿಐ ಅಧ್ಯಕ್ಷ ಜಿ.ಕೆ.ಆದಪ್ಪಗೌಡರ ಮತ್ತು ಗೌರವ ಕಾರ್ಯದರ್ಶಿ ಉದಯ ರೇವಣಕರ ಅವರು ಬೇಡಿಕೆಗಳಿಗೆ ಸ್ಪಂದಿಸುವಂತೆ ಕೋರಿದರು. ‘ಡಿಫೆನ್ಸ್ ಪಾರ್ಕ್ ಸ್ಥಾಪನೆಗೆ ಕಿತ್ತೂರ ಭಾಗದಲ್ಲಿ ತಾತ್ವಿಕವಾಗಿ ಒಪ್ಪಿಗೆ ನೀಡಲಾಗಿದ್ದು, ಯೋಜನೆಯ ಅನುಷ್ಠಾನದಿಂದ ಉದ್ಯೋಗಾವಕಾಶ ಹೆಚ್ಚುತ್ತದೆ. ಈ ಬಗ್ಗೆ ಕ್ರಮ ವಹಿಸಬೇಕು’ ಎಂದು ಅವರು ಮನವಿ ಮಾಡಿದರು.
ನವಲಗುಂದ, ನರಗುಂದ ಮುನವಳ್ಳಿ, ಯರಗಟ್ಟಿ ಗೋಕಾಕ ಮತ್ತು ಘಟಪ್ರಭಾವನ್ನು ಸಂಪರ್ಕಿಸುವ ಅಣ್ಣಿಗೇರಿಯಿಂದ ಯಲ್ಲಮ್ಮನಗುಡ್ಡ 134 ಕಿಮೀ., ಹೊಸ ರೈಲು ಮಾರ್ಗದ ಸಮೀಕ್ಷೆ ಮಾಡಬೇಕು. ಅಮರಗೋಳದ ಎಪಿಎಂಸಿ ಮಾರುಕಟ್ಟೆಯಲ್ಲಿ ಮೂಲಸೌಕರ್ಯ ಕೊರತೆಯಿದ್ದು, ಮಾರುಕಟ್ಟೆ ಅಭಿವೃದ್ಧಿಗೆ ₹500 ಕೋಟಿ ಅನುದಾನ ನೀಡುವ ಮೂಲಕ ಪೂರ್ಣ ಪ್ರಮಾಣದಲ್ಲಿ ಅಗತ್ಯ ಸೌಕರ್ಯ ಕಲ್ಪಿಸಬೇಕು. ಎಲ್ಲಾ ಎಪಿಎಂಸಿಗಳಲ್ಲಿ ವೈಫೈ ವ್ಯವಸ್ಥೆ, ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕು ಎಂದು ಅವರು ಕೋರಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.